ಪೊಲೀಸ್ ಕ್ವಾಟ್ರಸ್ ಮೂರೇ ವರ್ಷಕ್ಕೇ ಬೀಳುತ್ತಿದೆ, ಇದಕ್ಕಿಂತ ಭ್ರಷ್ಟಾಚಾರ ಬೇಕಾ?
ಕಲಬುರಗಿ, ಅ 19: "ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಷ್ಟ್ರೀಯ ಪಕ್ಷಗಳ ಸರಕಾರಗಳು ಪರ್ಸೆಂಟೇಜ್ ಸರಕಾರಗಳಾಗಿದ್ದು, ಸ್ವತಃ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೇ ಪರಸ್ಪರ ಆರೋಪ ಮಾಡಿಕೊಳ್ಳುತ್ತಿವೆ. ಈ ಮೂಲಕ ಆ ಪಕ್ಷಗಳ ಭ್ರಷ್ಟಮುಖ ಜನರ ಮುಂದೆ ಅನಾವರಣಗೊಂಡಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸಿಂಧಗಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಲು ಇಂದು ( ಅ 19) ಬೆಳಗ್ಗೆ ಕಲಬುರಗಿಗೆ ಆಗಮಿಸಿದ ಕುಮಾರಸ್ವಾಮಿ ಮಾಧ್ಯಮಗಳ ಜತೆ ಮಾತನಾಡುತ್ತಿದ್ದರು. "ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು 10% ಸರಕಾರ ಎಂದು ಕರೆಯುತ್ತಿದ್ದರು. ಈಗ ಅವರದ್ದೇ ಪಕ್ಷದ ಸರಕಾರವನ್ನು ಕಾಂಗ್ರೆಸ್ ಪಕ್ಷದವರು 20% ಸರಕಾರ ಎಂದು ಕರೆಯುತ್ತಿದ್ದಾರೆ" ಎಂದು ಎಚ್ಡಿಕೆ ಲೇವಡಿ ಮಾಡಿದರು.
ದೇವೇಗೌಡ್ರ ತುಂಬಿದ ಕುಟುಂಬಕ್ಕೆ ಹುಳಿ ಹಿಂಡಿದ ಜಮೀರ್ ಅಹ್ಮದ್ ಖಾನ್!
"ಜನರ ಹಣ ಲೂಟಿ ಹೊಡೆಯುವುದರಲ್ಲಿ ಹಾಗೂ ಪರ್ಸೆಂಟೇಜ್ ತೆಗೆದುಕೊಳ್ಳುವುದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ದೊಡ್ಡ ಪೈಪೋಟಿಯೇ ಇದೆ. ಬೆಂಗಳೂರು ಪೊಲೀಸ್ ಕ್ವಾಟ್ರಸ್ ಮೂರೇ ವರ್ಷಕ್ಕೇ ಬೀಳುತ್ತಿದೆ; ಇದಕ್ಕಿಂತ ಭ್ರಷ್ಟಾಚಾರದ ಉದಾಹರಣೆ ಬೇಕಾ" ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಕುಸಿದು ಬೀಳುವ ಅಪಾಯದಲ್ಲಿವೆ 404 ಶಿಥಿಲ ಕಟ್ಟಡಗಳು!
"ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಾಗ ಬೆಂಗಳೂರಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಪೊಲೀಸ್ ವಸತಿ ಸಮುಚ್ಛಯ ಈಗ ಬೀಳುವ ಹಂತದಲ್ಲಿದೆ. ಕಳಪೆ ಕಾಮಗಾರಿ, ಪರ್ಸಂಟೇಜ್ ವ್ಯವಹಾರ ಇತ್ಯಾದಿ ಅಕ್ರಮಗಳಿಂದ ರಾಜ್ಯವನ್ನು ರಕ್ಷಣೆ ಮಾಡುವ ಪೊಲೀಸ್ ಕುಟುಂಬಗಳು ಅಪಾಯಕ್ಕೆ ಸಿಲುಕಿವೆ" ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ಸಿಬ್ಬಂದಿ ವಾಸ ಮಾಡುವ ಕ್ವಾಟ್ರಸ್ ನಿರ್ಮಾಣದಲ್ಲಿ ಕಳಪೆ, ಅವ್ಯವಹಾರ
"ನಾಡನ್ನು ಕಾಪಾಡುವ ಪೊಲೀಸ್ ಸಿಬ್ಬಂದಿ ವಾಸ ಮಾಡುವ ಕ್ವಾಟ್ರಸ್ ನಿರ್ಮಾಣದಲ್ಲಿ ಕಳಪೆ, ಅವ್ಯವಹಾರ ನಡೆದಿದೆ ಎಂದರೆ ಉಳಿದ ಯೋಜನೆಗಳ ಕಥೆ ಏನು? ಎಷ್ಟು ಅಕ್ರಮ ನಡೆದಿದೆ? ಎಷ್ಟು ಪರ್ಸೆಂಟೇಜ್ ವ್ಯವಹಾರವಾಗಿದೆ ಎಂಬುದು ಜನರಿಗೆ ಗೊತ್ತಾಗಲಿ. ಕರ್ನಾಟಕಕ್ಕೆ ರಾಷ್ಟ್ರೀಯ ಪಕ್ಷಗಳು ಏನು ಮಾಡಿವೆ ಎಂಬುದು ಜನರಿಗೆ ಚೆನ್ನಾಗಿ ಅರ್ಥವಾಗಿದೆ. ಇನ್ನು ಮುಂದೆಯಾದರೂ ಜನರು ಎಚ್ಚೆತ್ತುಕೊಂಡು ನಾಡಿನ ಬಗ್ಗೆ ಕಾಳಜಿ ಇರುವ ಜೆಡಿಎಸ್ ಪಕ್ಷವನ್ನು ಬೆಂಬಲಿಸಲಿ" ಎಂದು ಕುಮಾರಸ್ವಾಮಿ ಕೋರಿದರು.
ಸಿದ್ದರಾಮಯ್ಯ ಮೇಲೆ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗಲು ನನಗೇನು ಬೇರೆ ಕೆಲಸ ಇಲ್ಲವೇ?
"ಸಿದ್ದರಾಮಯ್ಯ ಮೇಲೆ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗಲು ನನಗೇನು ಬೇರೆ ಕೆಲಸ ಇಲ್ಲವೇ? ಮುಸ್ಲಿಂ ಅಭ್ಯರ್ಥಿಗಳ ರಾಜಕೀಯ ವಿವಾದ ಶುರು ಮಾಡಿದ್ದು ಯಾರು? ಅವರೇ ಅಲ್ಲವೇ? ಹಾನಗಲ್ ಮತ್ತು ಸಿಂಧಗಿಯಲ್ಲಿ ಜೆಡಿಎಸ್ ಪಕ್ಷ ಇಬ್ಬರು ಸುಶಿಕ್ಷಿತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಆದರೆ, ಜೆಡಿಎಸ್ ಸೆಕ್ಯುಲರ್ ಮತಗಳನ್ನು ವಿಭಜಿಸಿ ಬಿಜೆಪಿಗೆ ಗೆಲ್ಲಲು ಅವಕಾಶ ಮಾಡಿಕೊಡಲು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಎಂದು ಸಿದ್ದರಾಮಯ್ಯ ಮೊದಲು ಹುಯಿಲೆಬ್ಬಿಸಿದರು" ಎಂದು ಕುಮಾರಸ್ವಾಮಿ ಆರೋಪಿಸಿದರು.
ಅನಗತ್ಯ ವಿವಾದವನ್ನು ಸೃಷ್ಟಿಸಿ ಸಿದ್ದರಾಮಯ್ಯ ಗೊಂದಲ ಆರಂಭ ಮಾಡಿದ್ದಾರೆ
"ಅನಗತ್ಯ ವಿವಾದವನ್ನು ಸೃಷ್ಟಿಸಿ ಸಿದ್ದರಾಮಯ್ಯ ಗೊಂದಲ ಆರಂಭ ಮಾಡಿದ್ದಾರೆ. ಬಹುಶಃ ಅದಕ್ಕೆ ನಾನೇ ಅಂತ್ಯ ಹಾಡಬೇಕಾಗುತ್ತದೆ, ಅಂಥ ಸ್ಥಿತಿಗೆ ನನ್ನನ್ನು ದೂಡಿದ್ದಾರೆ . ಕಾಂಗ್ರೆಸ್ ಪಕ್ಷವೇ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬಹುದಾಗಿತ್ತಲ್ಲವೇ? ಅದನ್ನು ಮಾಡದೇ ಜೆಡಿಎಸ್ ಟಿಕೆಟ್ ಕೊಟ್ಟಿತು ಕೊರಗುವುದು ಏಕೆ? ಸಿಂಧಗಿಯಲ್ಲಿ ನಮ್ಮ ಪಕ್ಷದ ನಿಷ್ಠಾವಂತ ಕುಟುಂಬಕ್ಕೆ ಟಿಕೆಟ್ ಕೊಟ್ಟಿದ್ದೇವೆ" ಎಂದು ಕುಮಾರಸ್ವಾಮಿಯವರು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.
Recommended Video
ಹೆಣ್ಣು ಮಗಳು ನಾಜಿಯಾ ಶಕೀಲಾ ಅಂಗಡಿ ಅವರಿಗೆ ಟಿಕೆಟ್ ನೀಡಿದ್ದೇವೆ
"ಪಕ್ಷದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ಮರಣ ಹೊಂದಿದ ನಾಯಕರ ಕುಟುಂಬದ ಹೆಣ್ಣು ಮಗಳು ನಾಜಿಯಾ ಶಕೀಲಾ ಅಂಗಡಿ ಅವರಿಗೆ ಟಿಕೆಟ್ ನೀಡಿದ್ದೇವೆ. ಇದರ ಬಗ್ಗೆ ಕಾಂಗ್ರೆಸ್ಗೆ ಸಂಕಟವೇಕೆ? ಕ್ಷೇತ್ರದಲ್ಲಿ ಪೈಪೋಟಿ ಇರುವುದು ಜೆಡಿಎಸ್-ಬಿಜೆಪಿ ನಡುವೆ ಮಾತ್ರ. ಯಾವ ಚುನಾವಣೆಯ್ಲಲೂ ಕಾಂಗ್ರೆಸ್ ಎರಡನೇ ಸ್ಥಾನಕ್ಕೂ ಬಂದಿರಲಿಲ್ಲ. ಹಾಗಿದ್ದ ಮೇಲೆ ಜೆಡಿಎಸ್ ವಿರುದ್ಧ ಅಪಪ್ರಚಾರ ಮಾಡುವುದೇಕೆ" ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದರು.