Cauvery Dispute: ಕಾವೇರಿ ವಿಚಾರದಲ್ಲಿ ಸಿಡಿದೆದ್ದ ಮಾಜಿ ಸಿಎಂ HDK
ರಾಮನಗರ: ಕಾವೇರಿ ನದಿ ನೀರು ಹಂಚಿಕೆಯ ವಿವಾದ ದೊಡ್ಡ ಸದ್ದು ಮಾಡುತ್ತಿದೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ಕ್ರಮದ ಕುರಿತು ಬೇಸರ ಹೊರಹಾಕಿದ್ದಾರೆ. ಪ್ರಾಧಿಕಾರ ನೀರು ಬಿಡಲು ಸೂಚಿಸಿದ ತಕ್ಷಣವೆ ರಾಜ್ಯ ಸರಕಾರವು ಸುಪ್ರೀಂ ಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಬೇಕಿತ್ತು. ಅದು ಬಿಟ್ಟು ತಮಿಳುನಾಡಿಗೆ ಈಗ ನೀರು ಬಿಡುವ ಆತುರ ತೂರಿದ್ದೇಕೆ? ಎಂದು ಆಕ್ರೋಶ ಹೊರಹಾಕಿದ್ದಾರೆ.
ಒಕ್ಕೂಟ ವ್ಯವಸ್ಥೆ ಬಗ್ಗೆ ಕನ್ನಡಿಗರಿಗೆ ಭ್ರಮನಿರಸನ ಆಗುತ್ತಿದೆ ಎಂದು ನಾವು ಆಕ್ರೋಶದಿಂದ ಹೇಳಲೇಬೇಕು. ತಮಿಳುನಾಡು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಬಿಡದಿಯ ತಮ್ಮ ತೋಟದ ಮನೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು ಕುಮಾರಸ್ವಾಮಿ, ಕರ್ನಾಟಕ ಸರ್ಕಾರದ ನೀರು ಬಿಡುವ ಕ್ರಮದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ ನಮಗೆ ದುಡ್ಡು ಕೊಟ್ಟಿಲ್ಲ
ಇಲ್ಲಿ ನಾವು ಡ್ಯಾಂ ಕಟ್ಟಿದ್ದೇವೆ. ನಮ್ಮ ಜನರ ಹಣದಲ್ಲಿ ಅಣೆಕಟ್ಟು ನಿರ್ಮಾಣ ಮಾಡಿದ್ದೇವೆ. ಕೇಂದ್ರ ಸರಕಾರ ನಮಗೇನೂ ಹಣ ಕೊಟ್ಟಿಲ್ಲ. ಅದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅಣೆಕಟ್ಟು ಇರುವುದು ನಮ್ಮಲ್ಲಿ, ಅದನ್ನು ಕಟ್ಟಿದ್ದು ನಾವು. 200 ವರ್ಷಗಳಿಂದಲೂ ಅವರ ದಬ್ಬಾಳಿಕೆ ಸಹಿಸಿಕೊಂದಿದ್ದೇವೆ. ಇದನ್ನು ಒಕ್ಕೂಟ ವ್ಯವಸ್ಥೆ ಎಂದು ಕರೆಯಬೇಕಾ? ಎಂದು ಕಿಡಿಕಾರಿದ್ದಾರೆ ಮಾಜಿ ಮುಖ್ಯಮಂತ್ರಿಗಳು.
ಅರೆಸೇನಾ ಪಡೆ ಕರೆಸುತ್ತಾರಾ?
ಅಂತಿಮವಾಗಿ ನಾವು ಕೂಡ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಎಷ್ಟು ವರ್ಷ ಈ ದಬ್ಬಾಳಿಕೆ ಸಹಿಸಲು ಸಾಧ್ಯ? ಆದೇಶ ಧಿಕ್ಕರಿಸಿದರೆ ಜೈಲಿಗೆ ಹಾಕ್ತಾರಾ? ಹಾಕಲಿ ಬಿಡಿ.. ಅರೆಸೇನಾ ಪಡೆಯನ್ನು ಕರೆಸುತ್ತಾರ? ಕರೆಸಲಿ ನೋಡೋಣ. ಹೀಗೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದ್ದರೆ ಸಹಿಸಲು ಸಾಧ್ಯವೇ? ಇದು ಯಾವ ಸೀಮೆ ಒಕ್ಕೂಟದ ವ್ಯವಸ್ಥೆ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷಭೇದ ಮರೆತು ಒಗ್ಗೂಡಿ ಹೋರಾಟ ಮಾಡಲೇಬೇಕಿದೆ. ತಮಿಳುನಾಡಿನಲ್ಲಿ ಯಾವ ರೀತಿ ಎಲ್ಲರೂ ಇಂಥ ಸಂದರ್ಭಗಳಲ್ಲಿ ಒಗ್ಗೂಡುತ್ತಾರೆ? ಹಾಗೆಯೇ ನಾವೂ ಒಗ್ಗೂಡಬೇಕು ಅಂದ್ರು.

ಬಿಜೆಪಿ ಮೋದಿ ಬಳಿ ಹೋಗಿ ಮಾತನಾಡಲಿ
ನಾನು ದೆಹಲಿಗೆ ಹೋದಾಗ ಈ ಕುರಿತು ಮಾತನಾಡುತ್ತೇನೆ. ಮೈತ್ರಿ ಮಾಡಿಕೊಳ್ಳುತ್ತಾ ಇದೀವಿ ಅನ್ನುವ ಕಾರಣಕ್ಕೆ ಇದರ ಬಗ್ಗೆ ಮಾತಾಡಲು ಹಿಂದೆ ಮುಂದೆ ನೋಡುವುದಿಲ್ಲ. ಮೈತ್ರಿ ಬಗ್ಗೆ ಮಾತಾಡುವ ಸಂದರ್ಭದಲ್ಲಿ ಈ ವಿಚಾರದ ಬಗ್ಗೆ ಕೂಡ ಚರ್ಚೆ ನಡೆಸುತ್ತೇನೆ. ರಾಜ್ಯದ ಹಿತ ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡುವುದಿಲ್ಲ. ಹಾಗೆಯೇ, ಬಿಜೆಪಿಯವರು ಧೈರ್ಯದಿಂದ ಮೋದಿ ಅವರ ಬಳಿ ಹೋಗಿ ಮಾತಾಡಲಿ. ನಾನೂ ಪ್ರಾಮಾಣಿಕವಾಗಿ ಸಲಹೆ ಕೊಡುತ್ತೇನೆ.
ತಕ್ಷಣ ಸುಪ್ರೀಂ ಮೊರೆ ಹೋಗಬೇಕಿತ್ತು
ಅಗಸ್ಟ್ 10ರಂದು ಕಾವೇರಿ ಜಲ ನಿಯಂತ್ರಣ ಸಭೆ, ಅಗಸ್ಟ್ 11ರಂದು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ಅತ್ತ ನೀರು ಬಿಡಲು ಕರ್ನಾಟಕಕ್ಕೆ ಪ್ರಾಧಿಕಾರ ಸೂಚನೆ ನೀಡಿದ ಮರುದಿನವೇ ತಮಿಳುನಾಡು ರಾಜ್ಯವು ತುರ್ತಾಗಿ ಸುಪ್ರೀಂ ಕೋರ್ಟಿಗೆ ಹೋಗಬೇಕಿತ್ತು. ಹಾಗೆ ಮಾಡಲಿಲ್ಲ, ರಾಜ್ಯ ಸರಕಾರ ವಿನಾಕಾರಣ ಕಾಲಹರಣ ಮಾಡಿತು ಎಂದು ಅವರು ನೇರ ಆರೋಪ ಮಾಡಿದರು.

ಸರ್ಕಾರ ತುರ್ತು ಅರ್ಜಿ ಹಾಕಲಿಲ್ವಾ?
ಮುಂದಿನ 15 ದಿನ ನೆರೆ ರಾಜ್ಯಕ್ಕೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಹೇಳಿದ ಕೂಡಲೇ ರಾಜ್ಯ ಸರ್ಕಾರ ಒಂದು ತುರ್ತು ಅರ್ಜಿಯನ್ನ ಸುಪ್ರೀಂ ಕೋರ್ಟಿಗೆ ಸಲ್ಲಿಸಬೇಕಿತ್ತು. ಮಧ್ಯರಾತ್ರಿ ಆದರೂ ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕಿತ್ತು. ಎಷ್ಟೋ ಸಂದರ್ಭದಲ್ಲಿ ಮಧ್ಯರಾತ್ರಿ ಸಮಯದಲ್ಲಿಯೂ ಸುಪ್ರೀಂ ಕೋರ್ಟ್ ಕಲಾಪ ನಡೆದಿದೆ. ರಾಜ್ಯ ಸರಕಾರ ಈ ವಿಷಯದಲ್ಲಿ ಪೂರ್ಣ ವಿಫಲವಾಗಿದೆ. ಸರಕಾರಕ್ಕೆ ಕಾನೂನು ತಜ್ಞರು ಸಲಹೆ ಕೊಡಲಿಲ್ಲವಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಧಿಕಾರದ ವಿರುದ್ಧವೂ ಎಚ್ಡಿಕೆ ಆಕ್ರೋಶ
ಒಂದು ಕಡೆ ರಾಜ್ಯದ ಜನ ಗೌರಿ ಗಣೇಶ ಹಬ್ಬ ಆಚರಣೆ ಮಾಡುತ್ತಿದ್ದರೆ, ಇನ್ನೊಂದ್ಕಡೆ ರಾಜ್ಯ ಸರಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ನೆರೆರಾಜ್ಯ ಹಾಕಿದ ಒತ್ತಡಕ್ಕೆ ಮಣಿದು ಮುಂದಿನ 15 ದಿನ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಆದೇಶ ಮಾಡಿದೆ. ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ಪಟ್ಟು ಹಿಡಿಯಬೇಕಿತ್ತು ಎಂದರು ಮಾಜಿ ಮುಖ್ಯಮಂತ್ರಿಗಳು.
ನೀರು ಬಿಡುವ ಆತುರ ಏನಿತ್ತು?
ತಮಿಳುನಾಡು ಸುಪ್ರೀಂ ಕೋರ್ಟ್ಗೆ ಹೋಗಿರುವ ಹಿನ್ನೆಲೆ ಕೋರ್ಟ್ ಆದೇಶ ಬರುವವರೆಗೂ ಕಾಯಬೇಕಿತ್ತು. ಈಗ ನೀರು ಬಿಡಲು ಆತುರ ಏನಿದೆ? ಯಾಕೆ ಮೊದಲೇ ನೀರು ಬಿಡಬೇಕಿತ್ತು? ನಾನು ಸಿಎಂ ಆಗಿದ್ದಾಗ ಇಂತಹ ಆದೇಶ ಬಂದಾಗ ರಿವ್ಯೂ ಪಿಟಿಷನ್ ಹಾಕಿದ್ವಿ. ಅಂಥ ಅರ್ಜಿ ಸಲ್ಲಿಸುವುದಕ್ಕೆ ಇವರಿಗೆ ಏನಾಗಿತ್ತು? ಎಂದು ಪ್ರಶ್ನೆ ಮಾಡಿದ್ದಾರೆ ಮಾಜಿ ಸಿಎಂ ಎಚ್ಡಿಕೆ.
ರೈತರ ಬದುಕಿನ ಜೊತೆ ಆಟ?
ನಾವು ನೀರನ್ನು ಬಿಡದೇ ಇದ್ದರೆ, ಕೋರ್ಟ್ನಲ್ಲಿ ನಮ್ಮ ವಿರುದ್ದ ಆದೇಶ ಬರಬಹುದು ಎಂದು ನಿನ್ನೆ ರಾತ್ರಿಯಿಂದಲೇ ತಮಿಳುನಾಡಿಗೆ ನೀರನ್ನು ಸರ್ಕಾರ ಹರಿಸುತ್ತಿದೆ. ಪ್ರಾಧಿಕಾರದ ಸೂಚನೆ ಬಂದ ಕೂಡಲೇ ವಿವೇಚನಾಹೀನರಾಗಿ ಜಲ ಸಂಪನ್ಮೂಲ ಸಚಿವರು ತರಾತುರಿಯಲ್ಲೇ ನೀರನ್ನು ಹರಿಸುವ ನಿರ್ಧಾರ ಮಾಡಿರುವುದು ಸರಿಯಲ್ಲ. ಇಬ್ಬರು ನಮ್ಮ ರೈತರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಅವರು ದೂರಿದರು.
ಹಿಂದಿನ ಸರ್ಕಾರಗಳು ನೀರು ಬಿಟ್ಟಿಲ್ಲವೇ? ಎಂದು ಸಚಿವರು ಕೇಳುತ್ತಿದ್ದಾರೆ. ಮಳೆ ಅಭಾವದ ಕಾರಣ ಕೃಷಿಗೆ ನೀರು ಕೊಡಲಾಗದ ಸ್ಥಿತಿಯಲ್ಲಿ ನಾವಿದ್ದೇವೆ. ಹಾಕಿರುವ ಬೆಳೆಗೆ ಬೆಂಕಿ ಇಡುವ ಸ್ಥಿತಿಗೆ ರೈತರು ಬಂದಿದ್ದಾರೆ. ಇದರ ಜತೆ ಜತೆಗೆ ನಮ್ಮ ರೈತರು ಹೋರಾಟ ಮಾಡುತ್ತಿದ್ದಾರೆ. ಕಾವೇರಿ ವಿಚಾರದಲ್ಲಿ ಸಭೆಗಳು ನಡೆದಾಗ ನಮ್ಮ ರಾಜ್ಯದ ಹಿರಿಯ ಅಧಿಕಾರಿಗಳು ಆ ಸಭೆಗಳಲ್ಲಿ ಭಾಗವಹಿಸದೇ ಲಘುವಾಗಿ ತೆಗೆದುಕೊಂಡಿದ್ದಾರೆ. ಅಲ್ಲಿ ನೋಡಿದರೆ ತಮಿಳುನಾಡಿನ 10-15 ಅಧಿಕಾರಿಗಳು ಸಭೆಗಳಲ್ಲಿ ಭಾಗವಹಿಸುತ್ತಾರೆ. ಪಾಪ.. ನಮ್ಮ ಅಧಿಕಾರಿಗಳಿಗೆ ಬಿಡುವೇ ಇಲ್ಲ. ಪ್ರಾಧಿಕಾರ ಮತ್ತು ಜಲ ನಿಯಂತ್ರಣ ಸಮಿತಿ ಸಭೆಗಳಿಗೆ ವರ್ಚುವಲ್ ಮೂಲಕ ಹಾಜರಾಗುತ್ತಾರೆ ಎಂದು ಎಚ್ಡಿಕೆ ತರಾಟೆಗೆ ತೆಗೆದುಕೊಂಡರು.












Click it and Unblock the Notifications