HD Kumaraswamy: 60% ಕಮಿಷನ್, ಹಿಟ್ ಅಂಡ್ ರನ್ ಮುಖ್ಯಮಂತ್ರಿ ಎಂದು ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು, ಜನವರಿ 07: ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..? ಕಮೀಶನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ ಎಂದು ಒತ್ತಾಯಿಸಿರುವ ಕೇಂದ್ರ ಸಚಿವರ ಹೆಚ್ ಡಿ ಕುಮಾರಸ್ವಾಮಿ ಅವರು, 60% ಕಮಿಷನ್, ಮುಖ್ಯಮಂತ್ರಿ ಹಿಟ್ ಅಂಡ್ ರನ್ ಎಂದು ಸಿದ್ದರಾಮಯ್ಯ ವಿರುದ್ಧ ಚಾಟಿ ಬೀಸಿದ್ದಾರೆ.
ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು, ರಾಜ್ಯ ಕಾಂಗ್ರೆಸ್ ಸರಕಾರ ಗುತ್ತಿಗೆದಾರರಿಂದ 60% ಕಮೀಶನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ದಾಖಲೆ ಕೊಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

60% ಕಮೀಶನ್, ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ. ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿರುವ ಆರೋಪವಿದು. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರಕಾರವೇ ವಾಸಿ ಇತ್ತು ಎಂದು ಅವರು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಕಮೀಶನ್ ವ್ಯವಹಾರ ಇಲ್ಲ ಎಂದಾದರೆ, 'ಯಾಕಪ್ಪಾ ಹಾಗೆ ಹೇಳಿದಿರಿ?' ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಖಾರವಾಗಿ ಹೆಚ್ ಡಿ ಕುಮಾರಸ್ವಾಮಿ ಕೇಳಿದ್ದಾರೆ.
ಕಾಂಗ್ರೆಸ್ ಸರಕಾರದಲ್ಲಿ ಬಡವರಿಗೆ ಮನೆ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ. ಲಂಚದ ಪ್ರಮಾಣ ಶೇ.60 ತಲುಪಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ ಸರಕಾರದಲ್ಲಿ ಶೇ.60 ರಷ್ಟು ಲಂಚ, ಕಮೀಶನ್ ವಸೂಲಿ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ ಎಂದರು.
ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ ಹೊಡೆಯಲಾಗುತ್ತಿದೆ. ಮೊದಲು ಪಿಡಿಒ ಲಂಚ ಪಡೆಯುತ್ತಿದ್ದರು. ಈಗ ವಿಧಾನಸೌಧದಲ್ಲಿ ಸಚಿವರೇ ರಾಜಾರೋಷವಾಗಿ ಲಂಚ ಪಡೆಯುತ್ತಿದ್ದಾರೆ. ಸತ್ಯಮೇವ ಜಯತೇ ಎಂದರೆ ಇದೇನಾ? ಇವರ ಸತ್ಯಮೇವ ಜಯತೆ ಬರೀ ಜಾಹೀರಾತಿಗೆ ಸೀಮಿತವಾಗಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.












Click it and Unblock the Notifications