ಅಮಿತ್ ಶಾ ಜೊತೆ ನಾಳೆ ಹೆಚ್ ಡಿ ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್ : 28 ಕ್ಷೇತ್ರ ಗೆಲ್ಲಲು ಮಾಸ್ಟರ್ ಪ್ಲಾನ್!
ಬೆಂಗಳೂರು, ಏಪ್ರಿಲ್ 01: ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು, ರಾಜ್ಯಕ್ಕೆ ಆಗಮಿಸುತ್ತಿರುವ ರಾಜಕೀಯ ಚಾಣಾಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ನಾಳೆ ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಈ ಭೇಟಿ ನಡೆಯಲಿದ್ದು, ಅಮಿತ್ ಶಾ ಅವರ ಜತೆ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಲೋಕಸಭೆ ಚುನಾವಣೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಾಗುವುದು. ನಮ್ಮಲ್ಲಿರುವ ಮಾಹಿತಿಯನ್ನು ಅಮಿತ್ ಶಾ ಅವರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಒಟ್ಟಾರೆಯಾಗಿ ರಾಜ್ಯದ 28 ಕ್ಷೇತ್ರಗಳನ್ನು ನಮ್ಮ ಮೈತ್ರಿಕೂಟ ಗೆಲ್ಲಬೇಕು. ಯಾವುದೇ ಕ್ಷೇತ್ರದಲ್ಲಿಯೂ ಸಮಸ್ಯೆ ಆಗಬಾರದು. ಹೊಂದಾಣಿಕೆಗೆ ಧಕ್ಕೆ ಆಗಬಾರದು, ಗುರಿ ತಲುಪಲು ಯಾವ ಲೋಪ ಆಗಬಾರದು ಎಂಬ ಉದ್ದೇಶ ನಮ್ಮದು. ಅದಕ್ಕೆ ಪೂರಕವಾಗಿ ಎಲ್ಲ ರೀತಿಯಲ್ಲಿ ಚರ್ಚೆ ಮಾಡ್ತೇವೆ. ನಂತರ ಸಂಜೆ ಚನ್ನಪಟ್ಟಣದಲ್ಲಿ ರೋಡ್ ಶೋದಲ್ಲಿ ಇಬ್ಬರೂ ಭಾಗವಹಿಸುತ್ತೇವೆ. ಇಡಿ ರಾಜ್ಯಕ್ಕೆ ಚನ್ನಪಟ್ಟಣದಿಂದಲೇ ಒಂದು ಸ್ಪಷ್ಟ ಸಂದೇಶ ಕೊಡುತ್ತೇವೆ ಎಂದರು ಮಾಜಿ ಮುಖ್ಯಮಂತ್ರಿಗಳು.
ನಾನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ. ಕನಕಪುರ, ರಾಮನಗರ, ಚನ್ನಪಟ್ಟಣ, ಕುಣಿಗಲ್ ನಲ್ಲಿ ಪ್ರವಾಸ ಮಾಡುವೆ. ತುಮಕೂರು, ಚಾಮರಾಜನಗರ, ಮೈಸೂರು ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ 14 ಕಡೆ ಪ್ರಚಾರ ನಡೆಸುತ್ತೇನೆ. ಕರಾವಳಿ ಬಿಟ್ಟು ಎಲ್ಲ ಕಡೆ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.
ಸುಮಲತಾ ಬೆಂಬಲ ನೀಡುವ ಬಗ್ಗೆ ವಿಶ್ವಾಸ ಇದೀಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಂಡ್ಯ ಹಾಲಿ ಸಂಸದೆ ಸುಮಲತಾ ಅವರು ಒಂದು ಪದ ಹೇಳಿದ್ದಾರೆ. ಆರೋಗ್ಯಕರ ಚರ್ಚೆ ಆಗಿದೆ ಎಂದು ಅವರು ಹೇಳಿದ್ದಾರೆ. ಸೂಕ್ಷ್ಮವಾಗಿ ಹೇಳಿದ್ದಾರೆ. ಅದಕ್ಕೆ ಕಾಂಗ್ರೆಸ್ ನವರು ಭಯ ಬಿದ್ದು ಮಾತಾಡ್ತಾ ಇದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ರಾಮನಗರ ಜನರ ಸೇವೆ ಮಾಡಲು ಅಣ್ಣ ತಮ್ಮ ಇರುವುದು ಎಂದು ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಕುರಿತು ಮಾತನಾಡಿದ ಅವರು, ಏನು ಸೇವೆ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಬೆಂಗಳೂರಿನಲ್ಲಿ ಫ್ಲಾಟ್ ಪ್ಲಾನ್ ಮಂಜೂರಾತಿಗೆ ಪ್ರತೀ ಚದರ ಅಡಿಗೆ 100 ರೂಪಾಯಿ ಫಿಕ್ಸ್ ಮಾಡಿರುವುದು ಸೇವೆ ಅಲ್ಲವೇ? ಅದು ಒಂದು ಸೇವೆ! ಎಲ್ಲರಿಗೂ ಧಮ್ಕಿ ಹಾಕೋದು ಒಂದು ಸೇವೆ!! ಅದನ್ನೆ ತಾನೇ ಮಾಡ್ತಾ ಇರೋದು? ಎಂದು ಕುಟುಕಿದರು.
ಅವರ ಸೇವೆಯೇ ಬೇರೆ ರೀತಿ. ಸೇವೆ ಮಾಡುತ್ತಿದ್ದಾರೋ ಅಥವಾ ರಾಜ್ಯವನ್ನು ಯಾವ ಪರಿಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೋ ಮುಂದಿನ ದಿನಗಳಲ್ಲಿ ನೋಡೋಣ. ನಾವು ಯಾತಕ್ಕೆ ಇದ್ದೀವಿ? ನಾವು ನಿದ್ದೆ ಮಾಡೋಕೆ ಬಂದಿದ್ದೀವಾ? ಅವರು ಮಾತ್ರವಾ ಸೇವೆ ಮಾಡೋದು? ಪಾಪ.. ಪಂಚಾಯತಿ ಸದಸ್ಯರ ರೀತಿ ಕೆಲಸ ಮಾಡುತ್ತಾರಂತೆ. ಹಾಗಾದರೆ, ಪಂಚಾಯತಿ ಸದಸ್ಯರು ಯಾಕೆ? ಇವರು ಅಲ್ಲಿ ಹೋಗಿ ಕೈ ಹಾಕಿದರೆ ಪಂಚಾಯತಿ ಸದಸ್ಯರು ಏನ್ ಮಾಡಬೇಕು? ಅವರು ಮಾತುಗಳಿಗೂ ನಡುವಳಿಕೆಗೂ ಬಹಳ ವ್ಯತ್ಯಾಸ ಇದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಎಲ್ಲಿ ಹೋಗಿದ್ದರು ಎಂದು ಕೇಳುತ್ತಾರೆ. ಅನಿತಾ ಕುಮಾರಸ್ವಾಮಿ ರಾಮನಗರ ಶಾಸಕರಿದ್ದರು. ನಾನು ಚನ್ನಪಟ್ಟಣ ಶಾಸಕನಿದ್ದೆ. ರಾಮನಗರ, ಚನ್ನಪಟ್ಟಣಕ್ಕೆ ನಾನು ಏನು ಸೇವೆ ಸಲ್ಲಿಸಬೇಕು ಸಲ್ಲಿಸಿದ್ದೇನೆ. ಪ್ರಚಾರ ಮಾಡಿಕೊಂಡಿಲ್ಲ. ಪ್ರತಿ ಕುಟುಂಬಕ್ಕೂ ಕೈಲಾದ ಸಹಾಯ ಮಾಡಿದ್ದೇವೆ. ಇವರಂತೆ ನಾವು ಡಂಗೂರ ಹೊಡೆದ್ವಾ? ಪಾಪ.. ಹೆಣ ಹೊರೋಕೆ ಹೋಗಿದ್ದರಂತೆ ಇವರು. ನಾವು ಜನರು ಹೆಣವಾಗದಂತೆ ನೋಡಿಕೊಂಡೆವು. ಅವರ ಜೀವ ಉಳಿಸಲಿಕ್ಕೆ ಪ್ರಯತ್ನ ಮಾಡಿದೆವು ತಿರುಗೇಟು ಕೊಟ್ಟರು.












Click it and Unblock the Notifications