10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ: ಸಿಎಂ, ಡಿಸಿಎಂ ಗೆ ಕುಮಾರಸ್ವಾಮಿ ಸವಾಲ್
ಬೆಂಗಳೂರು, ಆಗಸ್ಟ್ 03: ಇನ್ನೂ ಹತ್ತು ವರ್ಷ ನಮ್ಮದೇ ಅಧಿಕಾರ, ಸರಕಾರ ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿದ್ದಾರೆ. ಹತ್ತು ವರ್ಷದ ಮಾತಿರಲಿ, ಹತ್ತು ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.
ಬೆಂಗಳೂರಿನಿಂದ ಮೈಸೂರುವರೆಗೆ ಜೆಡಿಎಸ್ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾತನಾಡಿದ ಅವರು, ನಿಮ್ಮ ಸರ್ಕಾರವನ್ನು ಯಾರೂ ಅಸ್ಥಿರ ಮಾಡಿಕೊಳ್ಳುತ್ತಿಲ್ಲ. ನೀವೇ ಜನರು ಕೊಟ್ಟ ಅವಕಾಶವನ್ನು ಹಾಳು ಮಾಡಿಕೊಳ್ಳುತ್ತಿದ್ದೀರಿ. ಹಗರಣಗಳ ಮೇಲೆ ಹಗರಣಗಳನ್ನು ನಡೆಸಿ ಅಕ್ರಮ ಎಸಗಿದ್ದೀರಿ. ಈಗ ನೋಡಿದರೆ ಜೆಡಿಎಸ್ ಬಿಜೆಪಿ ಪಕ್ಷಗಳನ್ನು ಪ್ರಶ್ನೆ ಮಾಡುತ್ತೇವೆ ಎಂದು ಹೊರಟಿದ್ದೀರಿ ಎಂದು ಅವರು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಅಧಿಕಾರಕ್ಕೆ ಬಂದು ಜನಪರ ಕೆಲಸ ಮಾಡುವುದು ಬಿಟ್ಟು ಕಾನೂನು ಬಾಹಿರ ಚಟುವಟಿಕೆಗಳು, ಭ್ರಷ್ಟಾಚಾರದಲ್ಲಿ ನಿರತರಾಗಿದ್ದೀರಿ. ಹಿಂದೆಂದೂ ಕಂಡಿರದಂತಹ ಭ್ರಷ್ಟ ಸರಕಾರವನ್ನು ಕಾಣುತ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ದೂರಿದರು.
ಈ ಕೆಟ್ಟ ಕಾಂಗ್ರೆಸ್ ಜನ ವಿರೋಧಿ ಸರಕಾರ ವಿರುದ್ಧ ನಾವು ಜಂಟಿ ಹೋರಾಟ ಹಮ್ಮಿಕೊಂಡಿದ್ದೇವೆ. ಜನರಿಗೆ ಇವರ ಆಕ್ರಗಳನ್ನು ಮನವರಿಕೆ ಮಾಡಿಕೊಡುತ್ತೇವೆ. ಆದಿಶಕ್ತಿ ತಾಯಿ ಕೆಂಪಮ್ಮ ದೇವಿಗೆ ಪೂಜೆ ಸಲ್ಲಿಸಿ ಯಡಿಯೂರಪ್ಪನವರ ಇನ್ನಿತರೆ ಮಾರ್ಗದರ್ಶಕರ ನೇತೃತ್ವದಲ್ಲಿ ಮೈಸೂರು ಪಾದಯಾತ್ರೆ ಮಾಡುತ್ತಿದ್ದೇವೆ. ನಾಡಿನ ಜನತೆಯ ಅಭಿಪ್ರಾಯ ಏನಿದೆ ಅದರ ಪರವಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಅವರು ಕಿಡಿಕಾರಿದರು.
ನಮ್ಮ ಪಾದಯಾತ್ರೆ ತಡೆಯಲು ಕಾಂಗ್ರೆಸ್ ನಾಯಕರು ಬಿಡದಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಅದಾದ ಮೇಲೆ ಮುಂದೆಯೂ ಪ್ರಶ್ನೆ ಮಾಡುತ್ತಾರಂತೆ. ಮಾಡಲಿ. ಅವರಿಗೆ ತಕ್ಕ ಉತ್ತರ ಕೊಡುತ್ತೇವೆ. ಅವರು ಕೇಳಿರುವ ಪ್ರಶ್ನೆಗಳಿಗೆ ಬಿಡದಿ, ರಾಮನಗರದಲ್ಲಿ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸವಾಲು ಹಾಕಿದರು. ದೇವೆಗೌಡರು ರಾಮನಗರಕ್ಕೆ ಬಂದ ನಂತರ ಎಷ್ಟು ಆಸ್ತಿ ಮಾಡಿದ್ದಾರೆ ಈ ರಾಜ್ಯದ ಉಪ ಮುಖ್ಯಮಂತ್ರಿ ಕೇಳಿದ್ದಾರೆ. ಅದಕ್ಕೂ ನಾವು ಉತ್ತರ ಕೊಡುತ್ತೇವೆ. ನಾವೂ ಕೂಡ ಅವರದ್ದು ಎಷ್ಟಿದೆ ಆಸ್ತಿ ಎನ್ನುವುದನ್ನು ಬಿಡುಗಡೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಅವರೇ ಹೇಳಿಕೊಂಡಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರ ಆಸ್ತಿ, ಅಕ್ರಮಗಳ ದಾಖಲೆ ಪತ್ರಗಳನ್ನ ನಾನೇ ಕೇಂದ್ರ ಸರಕಾರಕ್ಕೆ ಕೊಟ್ಟಿದೇನೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ನಮ್ಮನ್ನು ಬಂಧಿಸಲು ದೆಹಲಿಯಿಂದ ಬರುತ್ತಾರೆ. ಬಂಧನಕ್ಕೂ ನಾವು ಸಿದ್ದವಿದ್ದೇವೆ ಅಂತ ಹೇಳಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.
ಹಿಂದುಳಿದ ವರ್ಗಗಳ ನಾಯಕರು ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವುದಕ್ಕೆ ಕೆಲವರಿಗೆ ಹೊಟ್ಟೆ ಉರಿಯಿಂದ ಎನ್ನುತ್ತಾರೆ ಇವರು. ಒಳ್ಳೆಯ ಕೆಲಸ ಮಾಡಿದರೆ ಯಾರಿಗೆ ಹೊಟ್ಟೆ ಉರಿ ಬರುತ್ತದೆ? ಸುಖಾಸುಮ್ಮನೆ ಜನರ ಗಮನ ಬೇರೆಡೆಗೆ ಸೆಳೆಯಲು ನಾನು ಹಿಂದುಳಿದವನು, ಅದಕ್ಕೆ ಹೊಟ್ಟೆ ಉರಿ ಎಂದು ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.












Click it and Unblock the Notifications