ಹರ್ಷ ಕೊಲೆ ಬಳಿಕ ಎಚ್ಚೆತ್ತುಕೊಳ್ಳಲಿಲ್ಲ ಏಕೆ?: ಎಚ್ಡಿಕೆ ಪ್ರಶ್ನೆ
ಬೆಂಗಳೂರು ಜುಲೈ 27: ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದೆ. ಮಂಗಳವಾರ ಸಂಜೆ ಮತ್ತೊಂದು ಜೀವ ಬಲಿಯಾಗಿದೆ. ಈ ರೀತಿ ಹತ್ಯಾಕಾಂಡಗಳಿಗೆ ಕೊನೆಯೇ ಇಲ್ಲವೇ? ಎಂದು ಪ್ರಶ್ನಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರವೀಣ್ ನೆಟ್ಟಾರು ಬರ್ಬತೆ ಹತ್ಯೆ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಸರಣಿ ಟ್ವೀಟ್ ಮಾಡಿದ್ದಾರೆ. ಪ್ರವೀಣ್ ಕೊಲೆ ನಡೆದು ಹೋಗಿದೆ. ಕೊಲೆ ನಂತರ ಹೇಳಿಕೆಗಳ ಭರಾಟೆ, ಕೂಗಾಟದಿಂದ ಏನು ಪ್ರಯೋಜನ ಏನು?. ಮೊದಲೇ ಎಚ್ಚೆತ್ತುಕೊಳ್ಳಲಿಲ್ಲ ಏಕೆ? ಎಂದು ಅವರು ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ಹಿಂದು ಕಾರ್ಯಕರ್ತ ಹರ್ಷ ಎಂಬ ಯುವಕ ಕೊಲೆ ನಡೆದಿತ್ತು. ಆದಾದ ಬಳಿಕ ರಾಜ್ಯ ಬಿಜೆಪಿ ಸರ್ಕಾರ ಮೈಮರೆತದ್ದು ಏಕೆ?. ಬಿಜೆಪಿ ಸರ್ಕಾರ ಮೈಮರೆತಿದ್ದರಿಂದಲೇ ಇಂತಹ ಹತ್ಯೆಯ ಹೀನ ಕೃತ್ಯಗಳು ಮರುಕಳಿಸುತ್ತಿವೆ. ಕೊಲೆ ನಂತರ ಹೇಳಿಕೆ ನೀಡುವ ಬದಲು ಹತ್ಯೆಯ ಕೃತ್ಯಗಳು ನಡೆಯದಂತೆ ತಡೆಬೇಕಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
|
ಸರ್ಕಾರ ಕೊಲೆ ಆಗದಂತೆ ತಡೆಯುತ್ತಿಲ್ಲ ಏಕೆ?
ರಾಜ್ಯದಲ್ಲಿ ಈ ರೀತಿ ಅಮಾಯಕ ಯುವಕರು, ಮುಖಂಡರ ಕೊಲೆಯಾದ ಮೇಲೆ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ. ಬರ್ಬರ ಕೊಲೆಗಳು ಎಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ?. ಚುನಾವಣೆ ಸಮೀಪಿಸುತ್ತಿದ್ದಂತೆ ಅಮಾಯಕರ ನೆತ್ತರದ ಓಕುಳಿ ಹರಿಯುತ್ತಿದೆ. ಅಮಾಯಕರ ರಕ್ತದ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಕೇವಲ ಬಡ ಯುವಕರೆ ಕೊಲೆ: ಎಚ್ಚೆತ್ತುಕೊಳ್ಳಲು ಎಚ್ಡಿಕೆ ಸಲಹೆ
ರಾಜ್ಯದಲ್ಲಿ ಕೆಲವು ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ತಮ್ಮ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವನಾಗಿದ್ದ. ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ. ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂತಹ ಗಲಾಟೆಗಳಲ್ಲಿ ಕಾಣಸಿಗುವುದೇ ಇಲ್ಲ. ಕೇವಲ ಬಡವರ ಮಕ್ಕಳೇ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಹತ್ಯೆ ಪ್ರವೃತ್ತಿಗೆ ಕೊನೆಗಾಣಿಸಬೇಕು
ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ದೈರ್ಯ ಇಲ್ಲ. ಈ ಅಸಹಾಯಕತೆಗೆ ಕಾರಣ ಏನು?. ಅಂಕೆಯೇ ಇಲ್ಲದ ಹಂತಕರ ಅಟ್ಟಹಾದಕ್ಕೆ ಇತಿಶ್ರೀ ಹಾಡಿ ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗ ಇಲ್ಲ ಎಂಬುದನ್ನು ಮನಗಾಣಬೇಕು. ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಶಾಂತಿ ಸುವ್ಯವಸ್ಥೆ ಕಾಪಾಡಬೇಕು
ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ. ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ?. ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸುನ್ನು ಕೆಡಿಸಲಾಗುತ್ತಿದೆ. ಈ ಬಗ್ಗೆ ಈಗಲಾದರೂ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications