ಪುನೀತ್ ನಿಧನ; ಹಳೇ ಫೋಟೋ ಜೊತೆ ಸಂತಾಪ ಸೂಚಿಸಿದ ಎಚ್‌ಡಿಕೆ

ಬೆಂಗಳೂರು, ಅಕ್ಟೋಬರ್ 29; ಕನ್ನಡ ನಟ, ವರನಟ ಡಾ. ರಾಜ್‌ಕುಮಾರ್ ಪುತ್ರ ಪುನೀತ್ ರಾಜ್ ವಿಧಿವಶರಾಗಿದ್ದಾರೆ. 46 ವರ್ಷದ ಪುನೀತ್ ರಾಜ್‌ಕುಮಾರ್ ಹೃದಯಾಘಾತದಿಂದಾಗಿ ಶುಕ್ರವಾರ ಮೃತಪಟ್ಟಿದ್ದಾರೆ. ಹಲವಾರು ಗಣ್ಯರು ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪುನೀತ್ ರಾಜ್‌ಕುಮಾರ್ ಶುಕ್ರವಾರ ಬೆಳಗ್ಗೆ 11.30ರ ಸುಮಾರಿಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆ ಆಸ್ಪತ್ರೆಗೆ ಭೇಟಿ ನೀಡಿದರು.

ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಟ್ವೀಟ್ ಮೂಲಕ ಎಚ್. ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. "ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ವೈಯಕ್ತಿಕವಾಗಿ ನನಗೆ ಆಗಿರುವ ಆಘಾತ ಅಷ್ಟಿಷ್ಟಲ್ಲ. ಇಂತಹ ಸುದ್ದಿ ಕೇಳಬೇಕಾಗುತ್ತದೆ ಎಂದು ಕನಸು ಮನಸಿನಲ್ಲೂ ಎಣಿಸಿರಲಿಲ್ಲ" ಎಂದು ಸಂತಾಪ ಸೂಚಿಸಿದ್ದಾರೆ.

 HD Kumaraswamy Condolence For Death Of Puneeth Rajkumar

"ಪುನೀತ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ, ಕನ್ನಡಕ್ಕೆ, ನಾಡು ನುಡಿಗೆ ಭರಿಸಲಾಗದ ನಷ್ಟ. ಅವರ ನಿಧನ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ನಮೆಲ್ಲರ ಅಪ್ಪು ಇನ್ನಿಲ್ಲ ಎನ್ನುವ ಸ್ಥಿತಿಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ" ಎಂದು ಹೇಳಿದ್ದಾರೆ.

"ಅಣ್ಣಾವ್ರ ಪುತ್ರರಾದರೂ ತಮ್ಮದೇ ವಿಭಿನ್ನ ನಟನಾ ಪ್ರತಿಭೆ ಹೊಂದಿದ್ದ ಪುನೀತ್ ಅವರು ಬಾಲ ನಟರಾಗಿಯೇ ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟವರು. ಆಮೇಲೆ ಹೀರೋ ಆಗಿ ಪ್ರತೀ ಕನ್ನಡಿಗನ ಮನೆಮನ ರಂಜಿಸಿದ್ದರು. ಗಾಯಕರಾಗಿ, ನಿರ್ಮಾಪಕರಾಗಿ ಚಿತ್ರರಂಗದ ಕಣ್ಮಣಿ ಆಗಿದ್ದವರು" ಎಂದು ಸಂತಾಪ ಸೂಚಿಸಿದ್ದಾರೆ.

ವಿಕ್ರಂ ಆಸ್ಪತ್ರೆ ಬಳಿ ಮಾತನಾಡಿದ ಎಚ್. ಡಿ. ಕುಮಾರಸ್ವಾಮಿ, "ಅಭಿಮಾನಿಗಳು ಉದ್ವೇಗಗೊಳ್ಳಬಾರದು. ಅವರು ಜೀವನಪೂರ್ತಿ ನಡೆದುಕೊಂಡಂತೆ ಶಾಂತಿಯಿಂದ ಅವರನ್ನು ಕಳಿಸಿಕೊಡಬೇಕು" ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು.

ಬಿಡದಿಯಲ್ಲಿ ಅಂತ್ಯ ಸಂಸ್ಕಾರ; ವಿಕ್ರಂ ಆಸ್ಪತ್ರೆಯಿಂದ ಪುನೀತ್ ರಾಜ್‌ಕುಮಾರ್ ಪಾರ್ಥೀವ ಶರೀರವನ್ನು ಸದಾಶಿವನಗರದಲ್ಲಿರುವ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದೆ. ಸಂಜೆ 5 ಗಂಟೆಯ ನಂತರ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಭಾನುವಾರ ಪುನೀತ್‌ರಾಜ್‌ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಇದೆ. ಆದರೆ ಅಂತ್ಯಕ್ರಿಯೆಯನ್ನು ಎಲ್ಲಿ ನಡೆಸಬೇಕು? ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಅಮೆರಿಕದಲ್ಲಿರುವ ಪುನೀತ್‌ ಪುತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ರಾಮನಗರ ತಾಲ್ಲೂಕಿನ ಬಿಡದಿ ಬಳಿಯ ಶೇಷಗಿರಹಳ್ಳಿಯಲ್ಲಿ ಪುನೀತ್‌ ರಾಜ್‌ಕುಮಾರ್ ಫಾರಂ ಹೌಸ್‌ ಇದೆ. ಅಲ್ಲಿಯೇ ಅಂತ್ಯ ಸಂಸ್ಕಾರ ನಡೆಸುವ ಸಾಧ್ಯತೆ ಇದೆ. ರಾಮನಗರ ಎಸ್ಪಿ ಎಸ್. ಗಿರೀಶ್ ಬೆಂಗಳೂರು- ಮೈಸೂರು ಹೆದ್ದಾರಿ ಪಕ್ಕದಲ್ಲೇ ಇರುವ ತೋಟಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಪುನೀತ್ ರಾಜ್‌ಕುಮಾರ್ ಕುಟುಂಬಸ್ಥರು ನಿರ್ಣಯ ತೆಗೆದುಕೊಂಡ ಮೇಲೆ ಅಂತ್ಯ ಸಂಸ್ಕಾರ ಎಲ್ಲಿ ನಡೆಯಲಿದೆ ಎಂಬುದು ಖಚಿತವಾಗಲಿದೆ. ಅಪ್ಪು ಫಾರಂನಲ್ಲಿ ಪುನೀತ್ ರಾಜ್‍ಕುಮಾರ್‌ಗೆ ಸೇರಿದ 2 ಎಕರೆ ಜಾಗವಿದೆ. ಕಂದಾಯ ಇಲಾಖೆ ಅಧಿಕಾರಿಗಳಿಂದ ಈ ಕುರಿತು ಎಸ್ಪಿ ಮಾಹಿತಿ ಪಡೆದುಕೊಂಡರು.

ಒಟ್ಟು 13 ಎಕರೆ ಜಾಗ ಇದ್ದು ರಾಜ್ ಕುಮಾರ್ ಹಾಗೂ ಪಾರ್ವತಮ್ಮ ನಿಧನದ ಬಳಿಕ ಜಮೀನು ಭಾಗವಾಗಿತ್ತು. ಪುನೀತ್ ರಾಜ್‌ಕುಮಾರ್‌ಗೆ 2 ಎಕರೆ ಜಾಗ ಬಂದಿತ್ತು. ಇಲ್ಲಿ ಅಂತ್ಯಕ್ರಿಯೆ ನಡೆದರೆ ಮಾಡಿಕೊಳ್ಳಬೇಕಾದ ವ್ಯವಸ್ಥೆ ಬಗ್ಗೆ ಎಸ್ಪಿ ಅಧಿಕಾರಿಗಳ ಜೊತೆ ಚರ್ಚಿಸಿದರು.

ಪುನೀತ್ ರಾಜ್‌ಕುಮಾರ್ ನಿಧನದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಸಾವಿರಾರು ಅಭಿಮಾನಿಗಳು ಸೇರುವ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+