HD Kumaraswamy : ಸರ್ಕಾರಿ ಆಸ್ಪತ್ರೆಗಳಲ್ಲಿ 327 ಬಾಣಂತಿಯರ ಸರಣಿ ಸಾವು: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಡಿಸೆಂಬರ್07: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಳಪೆ ಔಷಧ ಪೂರೈಕೆ ವಿಷಯ ಸರ್ಕಾರದ ಗಮನಕ್ಕೆ ಬಂದಿರಲಿಲ್ಲವೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಈ ಮಾಹಿತಿ ಇರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ! ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ!!
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 7, 2024
ಸ್ವತಃ ಆರೋಗ್ಯ ಸಚಿವ @dineshgrao ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ…
ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ ಕಾಂಗ್ರೆಸ್ ಸರಕಾರ, ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ!! ಇದೇನಾ ಮಹಿಳೆಯರ ಸಬಲೀಕರಣ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ರಾಜ್ಯದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ. ಕಳಪೆ ಗ್ಲೂಕೋಸ್, ಔಷಧಗಳಿಂದ ಗೃಹಲಕ್ಷ್ಮೀಯರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಆಸ್ಪತ್ರೆಯಲ್ಲಿ IV ದ್ರಾವಣ, ಅಂದರೆ; ರಿಂಗರ್ ಲ್ಯಾಕ್ಟೇಟ್ ದ್ರಾವಣ (Ringer lactate infusion) ಪಡೆದ ಎರಡೇ ಗಂಟೆಯಲ್ಲಿ 9 ಬಾಣಂತಿಯರು ಅಸ್ವಸ್ಥರಾಗಿದ್ದರೆನ್ನುವುದು ಕಳವಳಕಾರಿ. ಹಾಗಾದರೆ, ಈ ದ್ರಾವಣ ಪೂರೈಸಿದ ಕಂಪನಿ ಯಾವುದು? ಅದು ಯಾರದ್ದು? ಎಂದು ಕುಮಾರಸ್ವಾಮಿ ಅವರು ಕೇಳಿದ್ದಾರೆ.
ಅನೇಕ ದಿನಗಳಿಂದ ಕಳಪೆ ಗ್ಲೂಕೋಸ್, ಔಷಧ ಪೂರೈಕೆ ಆಗುತ್ತಿದ್ದರೂ ಸರಕಾರ ಏನು ಮಾಡುತ್ತಿತ್ತು? ಇಷ್ಟು ಸೂಕ್ಷ್ಮ ವಿಚಾರವನ್ನು ಆರೋಗ್ಯ ಸಚಿವರು ಅಲಕ್ಷ್ಯ ಮಾಡಿದ್ದೇಕೆ? ಸಚಿವರಿಗೆ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಗೊತ್ತೇ ಇರಲಿಲ್ಲವೇ? ಎಂದು ಆರೋಗ್ಯ ಸಚಿವರನ್ನು ನೇರವಾಗಿ ಪ್ರಶ್ನೆ ಮಾಡಿದ್ದಾರೆ.
ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ ಎಂಬ ಸಚಿವರ ಹೇಳಿಕೆ ಅನಪೇಕ್ಷಿತ. ಜವಾಬ್ದಾರಿ ಕೊಟ್ಟಿರುವುದು ಕೈ ತೊಳೆದುಕೊಂಡು ಪಾರಾಗಲಿಕ್ಕಲ್ಲ. ಅಗತ್ಯವಿರುವುದು ರೋಗಗ್ರಸ್ತ ಆರೋಗ್ಯ ಇಲಾಖೆಗೆ ಸೂಕ್ತ ಚಿಕಿತ್ಸೆ. ಪಲಾಯನಕ್ಕಿಂತ ಪ್ರಾಯಶ್ಚಿತ್ತ ಮುಖ್ಯ. ಇಲಾಖೆಯನ್ನು ಸರಿ ಮಾಡುವುದು ಅವರ ಹೊಣೆ. ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮರಣಗಳಿಂದ ಸರಕಾರ ನುಣಚಿಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್'ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಹದಗೆಟ್ಟ ಆರೋಗ್ಯ ವ್ಯವಸ್ಥೆಯನ್ನು ಹಳಿಗೆ ತರುವ ಕೆಲಸ ತುರ್ತಾಗಿ ಆಗಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ ಎಂದಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.












Click it and Unblock the Notifications