ಶಾಲೆ, ಕಾಲೇಜಿಗೆ ಮೂಲ ಸೌಕರ್ಯ ಒದಗಿಸಲು ಸಿಎಂ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 03 : ರಾಜ್ಯದಲ್ಲಿನ ಪ್ರಥಮ ದರ್ಜೆ, ಪದವಿಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಬಾರ್ಡ್ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ರಾಜ್ಯದ ಒಟ್ಟು 502 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ದುರಸ್ತಿ ಮತ್ತು ನಿರ್ಮಾಣಕ್ಕಾಗಿ 300 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ರಾಜ್ಯದ 233 ಸರ್ಕಾರಿ ಪ್ರೌಢಶಾಲೆಗಳನ್ನು ನೆಲಸಮಗೊಳಿಸಿ ಮರುನಿರ್ಮಾಣಕ್ಕೆ 7890.75 ಲಕ್ಷ ರೂ.ಗಳ ಪ್ರಸ್ತಾವನೆಯನ್ನು ಈಗಾಗಲೇ ಇಲಾಖೆ ವತಿಯಿಂದ ಸಲ್ಲಿಸಲಾಗಿದ್ದು ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವಂತೆ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯ ನಿರ್ಮಾಣಕ್ಕೆ ರೂ. 150 ಕೋಟಿಗಳ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ತ್ವರಿತವಾಗಿ ಟೆಂಡರ್ ಕರೆದು ಕಾಮಗಾರಿ ಕೈಗೊಳ್ಳಬೇಕು ಎಂದರು.

2018-19ನೇ ಸಾಲಿನ ಆಯವ್ಯಯದಲ್ಲಿ ನಬಾರ್ಡ್ ಕಾಮಗಾರಿಗಳಿಗೆ ರೂ.5.76 ಕೋಟಿಗಳನ್ನು ಹಂಚಿಕೆ ಮಾಡಲಾಗಿದ್ದು, ಅವಶ್ಯವಿರುವ ರೂ.39.42 ಕೋಟಿಗಳನ್ನು ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ 395 ಪ್ರಾಂಶುಪಾಲರನ್ನು ನೇಮಕ ಮಾಡಿಕೊಳ್ಳಬೇಕಿದ್ದು, 480 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಒಟ್ಟಾರೆ 3000 ಹುದ್ದೆಗಳ ಸೃಜನೆ ಆಗಬೇಕಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾದ ಎನ್.ಮಂಜುಳಾ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು.
ಸಮಗ್ರ ವರದಿ ಸಲ್ಲಿಸಲು ಸೂಚನೆ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಈ ನಿಟ್ಟಿನಲ್ಲಿ ಚಿಂತನೆ ನಡೆಸಿ ಶಿಕ್ಷಣ ಗುಣಮಟ್ಟದ ಸುಧಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆ ಎಚ್.ಡಿ ಕುಮಾರಸ್ವಾಮಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.












Click it and Unblock the Notifications