ಸರ್ಕಾರದ ಮುಂದೆ ಒಂದೇ ಬೇಡಿಕೆ ಇಟ್ಟ ಡಿಕೆಶಿ, ಎಚ್ಡಿಕೆ!
ಬೆಂಗಳೂರು, ಮಾರ್ಚ್ 25; ಶಿವಮೊಗ್ಗದಲ್ಲಿ ನಡೆದ ಕಿಸಾನ್ ಮಹಾ ಪಂಚಾಯತ್ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥ ರಾಕೇಶ್ ಟಿಕಾಯತ್ ವಿರುದ್ಧ ಪ್ರಕರಣ ದಾಖಲಾಗಿದೆ.
ದೆಹಲಿಯಲ್ಲಿ ರೈತರ ಆಂದೋಲನದ ನೇತೃತ್ವ ವಹಿಸಿಕೊಂಡಿರುವ ರಾಕೇಶ್ ಟಿಕಾಯತ್ ಮಾರ್ಚ್ 20ರ ಶನಿವಾರ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಭಾಷಣ ಮಾಡಿದ್ದರು. ಕೋಟೆ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಪ್ರಕರಣ ದಾಖಲು ಮಾಡಿರುವುದನ್ನು ಖಂಡಿಸಿದ್ದಾರೆ. ಸರ್ಕಾರ ರಾಕೇಶ್ ಟಿಕಾಯತ್ ವಿರುದ್ಧ ದಾಖಲು ಮಾಡಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಗುರುವಾರ ಈ ಕುರಿತು ಉಭಯ ನಾಯಕರು ಟ್ವೀಟ್ ಮಾಡಿದ್ದಾರೆ. "ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ," ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧ ಕೇಸು ರದ್ದಾಗಬೇಕು" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ತಮ್ಮ 2ನೇ ಟ್ವೀಟ್ನಲ್ಲಿ ಎಚ್. ಡಿ. ಕುಮಾರಸ್ವಾಮಿ "ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು?" ಎಂದು ಕರ್ನಾಟಕದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, "ರೈತರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಿ, ಎಂದು ಕರೆನೀಡಿದ ರಾಕೇಶ್ ಟಿಕಾಯತ್ ವಿರುದ್ಧ ಪ್ರಚೋದನಾಕಾರಿ ಭಾಷಣದ ಪ್ರಕರಣ ದಾಖಲಿಸಿರುವುದು ಖಂಡನೀಯ" ಎಂದು ಟ್ವೀಟ್ ಮಾಡಿದ್ದಾರೆ.
ರೈತರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಿ, ಎಂದು ಕರೆನೀಡಿದ ರಾಕೇಶ್ ಟಿಕಾಯತ್ ವಿರುದ್ಧ ಪ್ರಚೋದನಾಕಾರಿ ಭಾಷಣದ ಪ್ರಕರಣ ದಾಖಲಿಸಿರುವುದು ಖಂಡನೀಯ.
— D K Shivakumar, President, KPCC (@KPCCPresident) March 25, 2021
ಇದು ರೈತರ ಧ್ವನಿ ಹತ್ತಿಕ್ಕುವ & ಪ್ರತಿಭಟನೆ ನಡೆಸುವ ಸಂವಿಧಾನ ಬದ್ಧ ಹಕ್ಕನ್ನು ದಮನಿಸುವ ಸರ್ವಾಧಿಕಾರಿ ನಡೆ.
ಸರ್ಕಾರ ಕೂಡಲೇ ಟಿಕಾಯತ್ ಅವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು.












Click it and Unblock the Notifications