'ರೆಸಾರ್ಟ್ಗೆ ಹೊರಟ ಸಿಎಂ' ಎಂದ ಬಿಜೆಪಿಗೆ ಎಚ್ಡಿಕೆ ಪ್ರತ್ಯುತ್ತರ
ಬೆಂಗಳೂರು, ಏಪ್ರಿಲ್ 29: ರಾಜ್ಯವು ಬರದಿಂದ ತತ್ತರಿಸುವಾಗ ರಾಜ್ಯ ಸರ್ಕಾರ ಮೋಜು ಮಸ್ತಿಯಲ್ಲಿ ಮೈಮರೆತಿದೆ ಎಂದು ಮಾನ್ಯ ವಿರೋಧ ಪಕ್ಷದ ನಾಯಕರು ಮಾಡಿರುವ ಟೀಕೆ ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಕರೆಯಲು ಅನುಮತಿ ನೀಡಬಾರದು ಎಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಯಡಿಯೂರಪ್ಪನವರು ಈ ರೀತಿ ಟೀಕೆ ಮಾಡಿರುವುದು ಅವರ ನಿರಂತರ ಇಬ್ಬಗೆ ನೀತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಕುಮಾರಸ್ವಾಮಿ ರೆಸಾರ್ಟಿಗೆ ಹೋದ ಬೆನ್ನಲ್ಲೇ ಬಿಜೆಪಿ ಪತ್ರಿಕಾ ಪ್ರಕಟಣೆ
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಮುಖ್ಯ ಕಾರ್ಯದರ್ಶಿಗಳು ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದಾಗೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
'ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದಾರೆ'
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಅಧಿಕಾರಿಗಳಿದ್ದು ಅವರು ಈ ಅವಧಿಯಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿದ್ದಾರೆ. ಬರ ಪರಿಹಾರ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ನಿಯಮಿತವಾಗಿ ಮಾಹಿತಿಯನ್ನೂ ನೀಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಮುಖ್ಯಕಾರ್ಯದರ್ಶಿಯೊಂದಿಗೆ ಚರ್ಚೆ
ನಿನ್ನೆ ಉಡುಪಿಗೆ ತೆರಳುವ ಮುನ್ನ ಮುಖ್ಯ ಕಾರ್ಯದರ್ಶಿ ಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಗತ್ಯ ಸೂಚನೆಗಳನ್ನು ನೀಡಿದ್ದೇನೆ. ಮಾಧ್ಯಮಗಳಲ್ಲಿ ಈ ಕುರಿತು ಪ್ರಕಟವಾಗಿರುವ ವರದಿಗಳನ್ನು ಯಡಿಯೂರಪ್ಪ ಅವರು ಗಮನಿಸಿಲ್ಲ ಎನಿಸುತ್ತದೆ ಎಂದು ಅವರು ಹೇಳಿದ್ದಾರೆ.
5 ದಿನ ಕಾಪುವಿನಲ್ಲಿ ಕುಮಾರಸ್ವಾಮಿಗೆ ಆಯುರ್ವೇದ ಚಿಕಿತ್ಸೆ
'ಯಡಿಯೂರಪ್ಪ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ'
ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ ಪ್ರವರ್ಧಮಾನಕ್ಕೆ ಬರುತ್ತಿದ್ದು ಅಂತಹ ಒಂದು ಕೇಂದ್ರದಲ್ಲಿ ತಾವು ಚಿಕಿತ್ಸೆ ಪಡೆಯುತ್ತಿದ್ದು, ಯಡಿಯೂರಪ್ಪ ನವರು ಕೇವಲ ಸುದ್ದಿಗಾಗಿ ಇಂತಹ ಹೇಳಿಕೆಗಳನ್ನು ನೀಡುವ ಪ್ರವೃತ್ತಿಯನ್ನು ಕೈಬಿಡುವುದು ಒಳಿತು ಇಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಬಿಜೆಪಿ
ಕುಮಾರಸ್ವಾಮಿ ಅವರು ಉಡುಪಿಯ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಒಂದಕ್ಕೆ ಚಿಕಿತ್ಸೆಗಾಗಿ ತೆರಳಿದ್ದಾರೆ ಎನ್ನಲಾಗಿದೆ. ಅವರು ಚಿಕಿತ್ಸಾ ಕೇಂದ್ರಕ್ಕೆ ತೆರಳಿದ ಬೆನ್ನಲ್ಲೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ರಾಜ್ಯ ಬರದಿಂದ ತತ್ತರಿಸಿರುವಾಗ ಸಿಎಂ ಅವರು ರೆಸಾರ್ಟ್ಗೆ ಹೋಗಿದ್ದಾರೆ ಎಂದು ಆರೋಪಿಸಿತ್ತು.