HD Kumaraswamy: ಅನಾರೋಗ್ಯದ ಬಗ್ಗೆ ಸ್ಪಷ್ಟನೆ ಕೊಟ್ಟ ಎಚ್ಡಿ ಕುಮಾರಸ್ವಾಮಿ
ಬೆಂಗಳೂರು, ಜೂನ್ 16: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮೊದಲು ಬಾರಿಗೆ ತಮ್ಮ ಆರೋಗ್ಯದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ನಾನು ಆರೋಗ್ಯವಾಗಿ ಗಟ್ಟಿಮುಟ್ಟಾಗಿದ್ದೇನೆ. ಏನೂ ಚಿಂತೆ ಬೇಡ. ಕಾಂಗ್ರೆಸ್ಸಿನವರು ಕುಮಾರಸ್ವಾಮಿ ಆರೋಗ್ಯ ಕೆಟ್ಟಿದೆ, ನಮ್ಮ ಪಕ್ಷಕ್ಕೆ ಬನ್ನಿ ಎಂದು ಶಾಸಕರನ್ನು ಕರೆಯುತ್ತಿದ್ದಾರೆ. ನೀವು ಏನೂ ಚಿಂತೆ ಮಾಡಬೇಡಿ. ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದರು.
ನಾನು ಇನ್ನೂ ನಿಮ್ಮ ಜೊತೆ ಹದಿನೈದು ಇಪ್ಪತ್ತು ವರ್ಷ ಕಾಲ ಇರುತ್ತೇನೆ. ಜನತಾದಳವೂ ಇರುತ್ತದೆ. ನಮ್ಮ ಪಕ್ಷಕ್ಕೆ ಶಕ್ತಿ ಇದೆ. ಜೆಡಿಎಸ್ ಬಿಟ್ಟು ಬನ್ನಿ ಎನ್ನುವವರಿಗೆ ಈ ಸಭೆಯ ಮೂಲಕ ಉತ್ತರ ಕೊಟ್ಟಿದ್ದೀರಿ. ಧೈರ್ಯದಿಂದ ಹೊರಡಿ, ಈ ಸಲ ಜನತಾದಳ, ಬಿಜೆಪಿ ಮೈತ್ರಿ ಸರಕಾರ ಬರಲಿದೆ. ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಯಾವುದೇ ಅಪಪ್ರಚಾರಗಳಿಗೆ ತಲೆ ಕೆಡಿಸಿಕೊಳ್ಳಬೇಡಿ. ಕೈಲಾಗದವರು ಅಪಪ್ರಚಾರ ಮಾಡುತ್ತಾರೆ. ಅವರಿಗೆಲ್ಲ ದಿಟ್ಟ ಉತ್ತರ ಕೊಡೋಣ. ನಿಮ್ಮ ಪಾಡಿಗೆ ನೀವು ಪಕ್ಷದ ಕೆಲಸ ಮಾಡಿ ಎಂದು ಕುಮಾರಸ್ವಾಮಿ ಅವರು ಕಾರ್ಯಮರ್ತರಿಗೆ ಧೈರ್ಯ ಹೇಳಿದರು.

ಜೆಡಿಎಸ್ ಮುಗಿದುಹೋಗಿದೆ, ಬನ್ನಿ ನಮ್ಮ ಜೊತೆ ಎಂದು ಸಿಎಂ ಹೇಳುತ್ತಾರಲ್ಲವೇ? ಇಲ್ಲಿ ಜನ ಸೇರಿರುವುದು ನೋಡಿದರೆ ಅವರಿಗೆ ಉತ್ತರ ಸಿಗುತ್ತದೆ ಎಂದು ಭಾವಿಸಿದ್ದೇನೆ. ಮುಂದಿನ ದಿನಗಳಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬರುತ್ತದೆ. ಮೈತ್ರಿಯಲ್ಲಿ ಗೊಂದಲ ಇಲ್ಲ, ಸೀಟ್ ತರೋದು ನನ್ನ ಜವಾಬ್ದಾರಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಎಷ್ಟು ಅನುದಾನ ನೀಡಿದ್ದೀರಿ? ಎಷ್ಟು ವೆಚ್ಚ ಮಾಡಿದ್ದೀರಿ? ಏನೇನು ಅಭಿವೃದ್ಧಿ ಕೆಲಸಗಳು ಆಗಿವೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ಆರೋಗ್ಯ ಆವಿಷ್ಕಾರ ಎಂದು ನಮ್ಮ ಸಿಎಂ, ಡಿಸಿಎಂ ಯಾದಗಿರಿಗೆ ಹೋಗಿದ್ದರು. ಕಲ್ಯಾಣ ಕರ್ನಾಟಕದ ಉದ್ಧಾರ ಮಾಡುತ್ತೇವೆ ಎಂದು ಉದ್ದುದ್ದ ಭಾಷಣ ಮಾಡಿದ್ದಾರೆ. ಸಂತೋಷ, ಹಾಗಾದರೆ ನಿಮ್ಮ ಪಕ್ಷದ ಆಡಳಿತಾವಧಿಯಲ್ಲಿ, ಅದೂ ಎರಡು ವರ್ಷಗಳ ಅವಧಿಯಲ್ಲಿ ಏನೇನು ಕೆಲಸ ಮಾಡಿದ್ದೀರಿ ಎಂಬುದನ್ನು ಜನರ ಮುಂದೆ ಇಡಿ ಎಂದು ಆಗ್ರಹಿಸಿದರು.
ದೊಡ್ಡ ದೊಡ್ಡ ಆಸ್ಪತ್ರೆ ಕಟ್ಟಡಗಳಚನ್ನು ಕಟ್ಟುವುದು ಇರಲಿ. ನಿಮ್ಮ ಯೋಗ್ಯತೆಗೆ ಮೊದಲು ಇರುವ ಆಸ್ಪತ್ರೆಗಳಿಗೆ ವೈದ್ಯರನ್ನು ನೇಮಕ ಮಾಡಿ. ವೈದ್ಯರೇ ಇಲ್ಲದೆ ಕೇವಲ ಕಟ್ಟಡ ಕಟ್ಟಿ ಏನು ಪ್ರಯೋಜನ? ಕಟ್ಟಡ ಕಟ್ಟಿ ಕಮೀಷನ್ ಹೊಡೆಯುತ್ತೀರಿ, ಅಷ್ಟೇ ಅಲ್ಲವೇ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.
ಗುರುಮಿಟ್ಕಲ್ ಜನರು ಮಲ್ಲಿಕಾರ್ಜುನ ಖರ್ಗೆಯವರನ್ನು ಎಷ್ಟು ವರ್ಷ ಶಾಸಕರನ್ನಾಗಿ ಮಾಡಿದ್ದರು? ಎಷ್ಟು ವರ್ಷ ಅವರು ಮಂತ್ರಿಯಾಗಿದ್ದರು? ಎಷ್ಟು ವರ್ಷ ಪ್ರತಿಪಕ್ಷ ನಾಯಕರಾಗಿದ್ದರು? ಕಲಬುರಗಿಯಿಂದ ಎಷ್ಟು ಅವಧಿಗೆ ಲೋಕಸಭೆ ಸದಸ್ಯರಾದರು? ಈಗ ರಾಜ್ಯಸಭೆ ಪ್ರತಿಪಕ್ಷ ನಾಯಕರು.. ಆದರೂ ಕಲ್ಯಾಣ ಕರ್ನಾಟಕ ಇನ್ನೂ ಅಭಿವೃದ್ಧಿ ಆಗಿಲ್ಲ ಯಾಕೆ? ಇದುವರೆಗೆ ಈ ಭಾಗಕ್ಕೆ ಹಂಚಿಕೆಯಾದ ಅನುದಾನ ಎಲ್ಲಿಗೆ ಹೋಯಿತು? ಆ ದುಡ್ಡು ಯಾರ ಪಾಲಾಯಿತು? ಎಂದು ಪ್ರಶ್ನಿಸಿದರು.
ಸ್ಟೇಡಿಯಂ ಕಾಲ್ತುಳಿತದಲ್ಲಿ ನಿಮ್ಮ ಆಡಳಿತ ಏನೆಂದು ಇಡೀ ರಾಜ್ಯದ ಜನರು ನೋಡಿದರು. ಏನು ಮಾಡಿದಿರಿ? ನಿಮ್ಮ ತಿಕ್ಕಾಟದಿಂದ ಮುಗ್ಧ ಜನರು ಜೀವ ಕಳೆದುಕೊಂಡರು. ನೀವು ವಿಧಾನಸೌಧದ ಮೆಟ್ಟಲುಗಳಿಗೆ ಮಾತ್ರ ನೀವು ಮುಖ್ಯಮಂತ್ರಿ ಅಂತೆ. ಆ ಸ್ಥಿತಿಗೆ ಬಂದು ಮುಟ್ಟಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವರು, ಗೃಹಲಕ್ಷ್ಮೀ ಯೋಜನೆ ಮಾಡಿದ್ದೀರಿ, ಎರಡು ಸಾವಿರ ಕೊಡ್ತಾ ಇದೀರಿ. ನಿಮ್ಮ ಹಾಗೆ ನಾವೂ ಟ್ಯಾಕ್ಸ್ ಹಾಕಿದರೆ ತಿಂಗಳಿಗೆ ನಾನು ಐದು ಸಾವಿರ ರೂಪಾಯಿ ಕೊಡುತ್ತೇನೆ. ಇದನ್ನೆಲ್ಲಾ ಆಡಳಿತ ಎನ್ನಲು ಸಾಧ್ಯವೇ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.











Click it and Unblock the Notifications