ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಸ್ಥಳ, ದಿನಾಂಕ ಅಂತಿಮ
ಬೆಂಗಳೂರು, ಜೂನ್ 03 : ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಜೂನ್ 21ರಿಂದ ಆರಂಭಿಸಲಿದ್ದಾರೆ. ಈಗಾಗಲೇ ಗ್ರಾಮ ವಾಸ್ತವ್ಯ ಮಾಡುವುದಾಗಿ ಅವರು ಟ್ವೀಟ್ ಮೂಲಕ ತಿಳಿಸಿದ್ದರು.
ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ಸ್ಥಳ, ದಿನಾಂಕ ಅಂತಿಮವಾಗಿದೆ. ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನಲ್ಲಿ ಜೂನ್ 21ರಂದು ಹಾಗೂ ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ ಎಚ್.ಡಿ.ಕುಮಾರಸ್ವಾಮಿ
ಜುಲೈ 5 ಹಾಗೂ 6 ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ತಾವು ಪ್ರಾರಂಭಿಸಲು ಉದ್ದೇಶಿಸಿರುವ ಗ್ರಾಮ ವಾಸ್ತವ್ಯದ ಕುರಿತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಿ ದಿನಾಂಕ ಅಂತಿಮಗೊಳಿಸಿದರು.
ಜನತಾದರ್ಶನಕ್ಕೆ 4 ಸದಸ್ಯರ ತಂಡ ರಚನೆ ಮಾಡಿದ ಎಚ್.ಡಿ.ಕುಮಾರಸ್ವಾಮಿ
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಗ್ರಾಮ ವಾಸ್ತವ್ಯವನ್ನು ಮುಖ್ಯಮಂತ್ರಿಗಳು ಪ್ರಾರಭಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರದ ಆಡಳಿತ ಚುರುಕುಗೊಳಿಸಲು ಮತ್ತು ಸರ್ಕಾರ ಯೋಜನೆಗಳ ಅನುಷ್ಠಾನ ಕುರಿತು ಜನಾಭಿಪ್ರಾಯ ಪಡೆಯಲು ಇದು ಉತ್ತಮ ಅವಕಾಶ ಎಂದು ಅಭಿಪ್ರಾಯಪಟ್ಟರು.
ಜೆಡಿಎಸ್ ಶಾಸಕರ ಮಹತ್ವದ ಸಭೆ, ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ
ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಜೂನ್ 21 ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ನಡೆಸುವುದಾಗಿ ತಿಳಿಸಿದರು.
ಈ ಗ್ರಾಮ ವಾಸ್ತವ್ಯದ ಸ್ವರೂಪ ಹೇಗಿರಬೇಕು ಎಂಬ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಡಾ. ಎಸ್. ಸುಬ್ರಹ್ಮಣ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಈ. ವಿ. ರಮಣ ರೆಡ್ಡಿ ಮುಂತಾದವರು ಪಾಲ್ಗೊಂಡಿದ್ದರು.
ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಈ ಕುರಿತು ಟ್ವೀಟ್ ಮಾಡಿದ್ದರು. ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರ್ಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ. ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಲಿದೆ, ಸರ್ಕಾರಿ ಶಾಲೆಗಳಲ್ಲಿ ಎಂದು ಟ್ವೀಟ್ ಮಾಡಿದ್ದರು.