ಜೆಡಿಎಸ್ ಚುನಾವಣಾ ಪ್ರಚಾರ ಶುರು, 18 ಸೀಟು ಗುರಿ
ಹಾಸನ, ಆ.7: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಹಾಸನ ಜಿಲ್ಲೆ ಅರಸಿಕೆರೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವಿರೋಧ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಈ ವಿಷಯ ತಿಳಿಸಿದರು. ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಗುರಿಯನ್ನು ಹೇಳಿದರು. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 15 ರಿಂದ 18 ಸ್ಥಾನಗ್ಳನ್ನು ಗೆಲ್ಲುವ ವಿಶ್ವಾಸವಿದೆ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.

ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಎಲ್ಲಾ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಚುನಾವಣಾ ಕಣಕ್ಕೆ ಸಮರ್ಥ ಅಭ್ಯರ್ಥಿಗಳನ್ನು ಇಳಿಸಲಾಗುತ್ತದೆ ಎಂದರು. ಟಿಕೆಟ್ ಹಂಚಿಕೆ, ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಯಾವುದೇ ಗೊಂದಲ ಬಾರದಂತೆ ನೋಡಿಕೊಳ್ಳಲಾಗುವುದು ಜೆಡಿಎಸ್ ನಾಯಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಬಸವರಾಜ್ ಯತ್ನಾಳ್ ಅವರು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವೈಯಕ್ತಿಕ ವಿಚಾರ. ಜೆಡಿಎಸ್ ಗೆ ನಷ್ಟವಿಲ್ಲ ಎಂದರು.
ಅಕ್ರಮ ಗಣಿಗಾರಿಕೆ ಬಗ್ಗೆ ಸರ್ಕಾರ ವಿಮುಖ ನೀತಿ ಅನುಸರಿಸುತ್ತಿದೆ. ಅಭಿವೃದ್ಧಿ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ಕುಮಾರಸ್ವಾಮಿ ಆರೋಪಿಸಿದರು. ಇತ್ತೀಚೆಗೆ ದೇವೇಗೌಡರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ, ಹಾಸನ-ಬೆಂಗಳೂರು ಮಾರ್ಗದಲ್ಲಿ ಸಾರಿಗೆ ಸಂಪರ್ಕವಾಗಿಲ್ಲ. ರೈಲ್ವೇ ಯೋಜನೆಗಳು ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ದೇವೇಗೌಡರು ಮಾತನಾಡಿದರೂ ಪ್ರಯೋಜನವಾಗಿಲ್ಲ. ಬೇಕಾಂತಲೇ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಅವರು ತಮ್ಮ ಇತ್ತೀಚಿನ ಹೇಳಿಕೆಯಲ್ಲಿ ಸರ್ಕಾರದ ಖಜಾನೆಯಲ್ಲಿ ಹಣವಿದ್ದರೆ ಸಾಲದು, ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಬೇಕು ಎಂದಿದ್ದಾರೆ. ಆದರೆ, ಸಾಲ ಹಿಂತಿರುಗಿಸುವ ಬಗ್ಗೆ ವ್ಯತಿರಿಕ್ತ ಹೇಳಿಕೆ ನೀಡುತ್ತಾರೆ. ಗೊಂದಲದಲ್ಲಿ ಸರ್ಕಾರದ ಯಂತ್ರ ನಡೆಯುತ್ತಿದ್ದು ಜನ ಬೇಸತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications