ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧೆ : ದೇವೇಗೌಡ
ವಿಧಾನಸಭೆ ಚುನಾವಣೆಗೆ ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪುನರುಚ್ಚರಿಸಿದ್ದಾರೆ.
ಮಾಗಡಿ, ಏಪ್ರಿಲ್ 10 : ಮುಂಬರುವ ವಿಧಾನಸಭೆ ಚುನಾವಣೆಗೆ ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಹೇಳಿದ್ದು ನಿಮ್ಮ ಕಿವಿಗೂ ಬಿದ್ದಿರಬಹುದು. ಈ ಹೇಳಿಕೆಯಿಂದ ಮತ್ತೊಮ್ಮೆ ದೊಡ್ಡ ಗೌಡರ ಮನೆಯಲ್ಲಿ, ಕಾರ್ಯಕರ್ತರಲ್ಲಿ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ.
ಮಾಗಡಿ ರಂಗನಾಥ ಸ್ವಾಮಿ ರಥೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ದೇವೇಗೌಡರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಎಚ್.ಡಿ.ರೇವಣ್ಣ ಮಾತ್ರ ಸ್ಪರ್ಧಿಸಲಿದ್ದಾರೆ ಎಂದಿದ್ದರು.

ಇದಕ್ಕೂ ಮುನ್ನ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ಅವರು ನಾನೇಕೆ ರಾಜಕೀಯಕ್ಕೆ ಬರಬಾರದು? ಕುಟುಂಬ ರಾಜಕೀಯದಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದರು.
ಯಾರು ಯಾರು ಆಕಾಂಕ್ಷಿಗಳು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುವ ಬಗ್ಗೆ ಸುದ್ದಿ ಹಬ್ಬಿದೆ. ಅಲ್ಲದೆ, ಪ್ರಜ್ವಲ್ ರೇವಣ್ಣ ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ತೀರ್ಮಾನ ಮಾಡಲಾಗುವುದು, ಇದರ ಬಗ್ಗೆ ಕುಮಾರಸ್ವಾಮಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ದೇವೇಗೌಡರು ಹೇಳಿದ್ದಾರೆ.
ಈ ಮೂಲಕ ಎಚ್ ಡಿ ಕುಮಾರಸ್ವಾಮಿ ಅಲ್ಲದೆ ದೇವೇಗೌಡರ ಕುಟುಂಬದಿಂದ ಮತ್ತೆ ಯಾರು ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಅಲ್ಲದೆ, ಭವಾನಿ ರೇವಣ್ಣ ಅವರು ಬಾರಿಯೂ ಅವಕಾಶ ವಂಚಿತರಾಗುವುದು ಖಾತ್ರಿಯಾಗುತ್ತಿದ್ದಂತೆ, ಬೇಲೂರು, ಹೊಳೆನರಸೀಪುರದ ಕಡೆ ಕಾರ್ಯಕರ್ತರಲ್ಲಿ ಅಸಮಾಧಾನ ಹೆಚ್ಚಾಗಿದೆ.












Click it and Unblock the Notifications