ಬಿಜೆಪಿಯದು 'ಕಟ್ ಆಂಡ್ ಪೇಸ್ಟ್' ಸರ್ಕಾರ: ವಿಡಿಯೋ ವಿವಾದಕ್ಕೆ ಎಚ್ಡಿಕೆ ತಿರುಗೇಟು
ಬೆಂಗಳೂರು, ಜನವರಿ 11: ಮಂಗಳೂರು ಹಿಂಸಾಚಾರ ಮತ್ತು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ತಮ್ಮನ್ನು ಟೀಕಿಸಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಮಂಗಳೂರು ಹಿಂಸಾಚಾರದ ಕುರಿತು ಪೊಲೀಸರ ಹೇಳಿಕೆಗಳಿಗೆ ವಿರುದ್ಧವಾಗಿ ಎಚ್ ಡಿ ಕುಮಾರಸ್ವಾಮಿ ಸಿ.ಡಿಗಳನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ ಪೊಲೀಸರೇ ದೌರ್ಜನ್ಯ ಎಸಗುತ್ತಿರುವ ದೃಶ್ಯಗಳಿದ್ದವು. ಇದಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಅನೇಕ ನಾಯಕರು ಕುಮಾರಸ್ವಾಮಿ ತಿರುಚಿದ ವಿಡಿಯೋಗಳನ್ನು ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋ: ಪೊಲೀಸರ ದೌರ್ಜನ್ಯ ಸೆರೆ
ಬಿಜೆಪಿ ನಾಯಕರ ಆರೋಪಗಳಿಗೆ ಕುಮಾರಸ್ವಾಮಿ ಶನಿವಾರ ಸರಣಿ ಟ್ವೀಟ್ಗಳ ಮೂಲಕ ಉತ್ತರ ನೀಡಿದ್ದಾರೆ. ತಮ್ಮನ್ನು ಟೀಕಿಸಿರುವ ಮುಖಂಡರಿಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಅವರ ಟ್ವೀಟ್ಗಳಲ್ಲಿ ಏನಿದೆ? ಮುಂದೆ ಓದಿ.
ವರದಿ ತರಿಸಿಕೊಳ್ಳುವ ಧೈರ್ಯ ಇದೆಯೇ?
"ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ" ಎಂದಿದ್ದಾರೆ ಸಿಎಂ. ಸಿ.ಡಿ. ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಮತ್ತೇನು ಬಿಜೆಪಿ ನಾಯಕರಿಂದ ನಿರೀಕ್ಷಿಸಲು ಸಾಧ್ಯ? ಎಂದಿದ್ದೆ. ಅದನ್ನು ರುಜುವಾತುಪಡಿಸಿದಿರಿ. ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿಕೊಳ್ಳುವ ಧೈರ್ಯ ನಿಮಗಿದೆಯೇ? ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ 'ಸಿಡಿ'ಯನ್ನು ನೀವು ಸೃಷ್ಟಿಸಿಕೊಂಡಂತೆ 'ಕಟ್ ಅಂಡ್ ಪೇಸ್ಟ್' ಬಿಜೆಪಿ ಸರ್ಕಾರ ಎಂದುಕೊಂಡಿರಾ?
ಸ್ಥಿಮಿತ ಕಳೆದುಕೊಂಡು ನೀಲಿ ಚಿತ್ರ ನೋಡಿದರೇ?
ಉಪ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ ಮಂಗಳೂರು ಗಲಭೆ ವಿಡಿಯೊ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮಣ ಸವದಿ ಆರೋಪಿಸಿದ್ದಾರೆ. ಸರಿ... ಹಾಗಾದರೆ ಸವದಿ ಅದ್ಯಾವ ಸ್ಥಿಮಿತ ಕಳೆದುಕೊಂಡು ಸದನದಲ್ಲಿ ನೀಲಿ ಚಿತ್ರ ನೋಡಿದರು? ಈ ಬಾರಿ ಅವರು ಯಾವ ಚುನಾವಣೆ ಗೆದ್ದಿದ್ದಾರೆ? ಸ್ಥಿಮಿತ ಉಳಿದಿದೆಯೇ?
ಮಂಗಳೂರು ಗಲಭೆ: ಪೊಲೀಸರ ವಿರುದ್ಧ ಕುಮಾರಸ್ವಾಮಿ ವಿಡಿಯೋ ಬಿಡುಗಡೆ
ನನ್ನ ಕಾಲದಲ್ಲಿ ಏಕೆ ಗಲಭೆ ಆಗಲಿಲ್ಲ?
ಪೊಲೀಸರು ಗಲಭೆ ಮಾಡುವುದಿಲ್ಲ, ನಿಯಂತ್ರಿಸುತ್ತಾರೆ. ಕುಮಾರಸ್ವಾಮಿ ಕಾಲದಲ್ಲೂ ಅದೇ ಪೋಲೀಸರೇ ಇದ್ದರು ಎಂದಿದ್ದಾರೆ ಗೃಹ ಸಚಿವ. ಬೊಮ್ಮಾಯಿ ಅವರೇ ಅದು ನನ್ನ ಕಾಲ. ಶಾಂತಿ-ಸುವ್ಯವಸ್ಥೆಗಷ್ಟೇ ಪೊಲೀಸರ ಸೇವೆ ಪಡೆಯುತ್ತಿದ್ದೆವು. ಇದು ನಿಮ್ಮ ಕಾಲ. ಗಲಭೆ, ಗುಂಡೇಟಿಗೆ ನೀವು ಪೊಲೀಸರನ್ನು ಬಳಸಿಕೊಳ್ಳುತ್ತಿದ್ದೀರಿ.
ನನ್ನ ಕಾಲದಲ್ಲೂ ಇದೇ ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ? ಗೋಲಿಬಾರ್ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುವಿರಾ?
ಸದಾನಂದ ಗೌಡರು ಎಚ್ಚರವಾಗಿರಲಿ
ಗಲಭೆಯ ಸಿಡಿ ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ. ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೆರಡೇ? ಎಲ್ಲ ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ.
ಸಿಡಿ ರಾಜಕೀಯ: ಬಿಜೆಪಿ ಶಾಸಕರ ವೈಯಕ್ತಿಕ ಸಿಡಿಗಳೂ ಇವೆಯಂತೆ
ಹೋರಾಟಗಾರರು ಸೈತಾನರೇ?
ಮಂಗಳೂರು ಶಾಂತಿಯಿಂದಿದೆ, ಮರಳಿ ಗಲಭೆ ಎಬ್ಬಿಸಿ ಅಲ್ಲಿ ಅಸ್ತಿತ್ವವೇ ಇಲ್ಲದ ತಮ್ಮ ಪಕ್ಷಕ್ಕೆ ನೆಲೆ ಕಲ್ಪಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಎಂದು ಸೋದರಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳೂರಿನ ಭಿನ್ನ ಧ್ವನಿಗಳ ಕೊರಳು ಬಿಗಿ ಹಿಡಿದು, ಉಸಿರುಗಟ್ಟಿಸಿ, ಸದ್ದು ಬಾರದಂತೆ ಮಾಡಿರುವುದು ನಿಮ್ಮ ಪ್ರಕಾರ 'ಶಾಂತಿ'ಯೇ?
ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಪೊಲೀಸರು ಕಲ್ಲು ತೂರಾಟ ಮಾಡಿದರಲ್ಲ... ಹೋರಾಟಗಾರರೇನು ಸೈತಾನರೇ? ಉತ್ತರಿಸುವಿರಾ ಶೋಭಾ ಅವರೇ?
ನಿಮ್ಮಿಂದಾಗಿ ಮಂಗಳೂರು ಬೆಳವಣಿಗೆಗೆ ಅಡ್ಡಿ
ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬೇಕಿಲ್ಲ. ಅಲ್ಲಿ ರಾಜಕಾರಣ ಮಾಡುತ್ತಿರುವುದು ನೀವು. ಅಲ್ಲಿ ಕೋಮು ಗಲಭೆ ಉಂಟು ಮಾಡುತ್ತಿರುವುದು ನೀವು. ವಾಣಿಜ್ಯ ನಗರಿಯಾಗಬೇಕಿದ್ದ ಮಂಗಳೂರು ಕೋಮು ರಾಜಕಾರಣದ ಕಣವಾಗಿದ್ದು ಬಿಜೆಪಿಯಿಂದ.
ಸಮುದ್ರ ತೀರದ ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ. ಅಷ್ಟೇ ಏಕೆ, ಮುಂಬೈ, ಚೆನ್ನೈ, ಕೊಚ್ಚಿ ನಮ್ಮ ದೇಶದ ಉದಾಹರಣೆಗಳು. ಮಂಗಳೂರಿಗೂ ಅಂಥದ್ದೇ ಅವಕಾಶಗಳಿದ್ದವು, ಇದೆ. ದೇಶಕ್ಕೆ ದೊಡ್ಡ ಬ್ಯಾಂಕ್ಗಳನ್ನು ಕೊಟ್ಟದ್ದು ಇದೇ ಕರಾವಳಿ. ಆದರೆ ನಿಮ್ಮ ಚಿಲ್ಲರೆ ರಾಜಕಾರಣ ಮಂಗಳೂರಿನ ವಾಣಿಜ್ಯಿಕ ಬೆಳವಣಿಗೆಗೆ ಅಡ್ಡಗಾಲಾಗಿದೆ.
ಮಂಗಳೂರು ಶಾಂತವಾದರೆ ಅದು ವಾಣಿಜ್ಯಿಕವಾಗಿ ಬೆಳವಣಿಗೆಯಾಗುತ್ತದೆ. ದೇಶಕ್ಕೆ ಮಾದರಿಯಾಗುವ ತನ್ನ ಐತಿಹಾಸಿಕ ಗುಣವನ್ನು ಮುಂದುವರಿಸಿಕೊಂಡು ಹೋಗುತ್ತದೆ. ಶಾಂತಿ ಸ್ಥಾಪನೆಯಾಗಬೇಕಿದ್ದರೆ ಬಿಜೆಪಿ ತೆಪ್ಪಗಿರಬೇಕಷ್ಟೇ.
ನನಗೆ ನಿರ್ಬಂಧವಿದೆಯೇ?
ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬಾರದು ಎನ್ನುತ್ತಾರೆ ಸೋದರಿ ಶೋಭಾ. ಆದರೆ, ರಾಜಕೀಯ ಪಕ್ಷವೊಂದರ ಶಾಸಕಾಂಗ ಪಕ್ಷದ ನಾಯಕನಾದ ನಾನು ಮಂಗಳೂರಲ್ಲಿ ಏಕೆ ರಾಜಕಾರಣ ಮಾಡಬಾರದು? ಹಾಗೇನಾದರೂ ನನಗೆ ನಿರ್ಬಂಧವಿದೆಯೇ? ಮಂಗಳೂರಲ್ಲಿ ನಾನೂ ರಾಜಕಾರಣ ಮಾಡುತ್ತೇನೆ. ಆದರೆ ಬಿಜೆಪಿಯಂತಲ್ಲ. ಸಾತ್ವಿಕವಾಗಿ.