ಪ್ರಮಾಣ ವಚನ ಸಮಾರಂಭಕ್ಕೆ ಅಂಬರೀಶ್ ಆಹ್ವಾನಿಸಿದ ಕುಮಾರಸ್ವಾಮಿ
Recommended Video
ಬೆಂಗಳೂರು, ಮೇ 22 : ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭಕ್ಕೆ ಅಂಬರೀಶ್ ಅವರಿಗೆ ಆಹ್ವಾನ ನೀಡಿದ್ದಾರೆ. ಅಂಬರೀಶ್ ಅವರು ಈಗಾಗಲೇ ಕಾಂಗ್ರೆಸ್ನಿಂದ ದೂರವಾಗಿದ್ದಾರೆ.
ಸೋಮವಾರ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರು ಅಂಬರೀಶ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಬುಧವಾರ ನಡೆಯುವ ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನಿಸಿದರು.
ಜೆಡಿಎಸ್ ನಾಯಕರ ಕಾರಿನಲ್ಲಿ ಬಂದು ಮತದಾನ ಮಾಡಿದ ಅಂಬರೀಶ್!
ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ, ಶಾಸಕ ಡಿ.ಸಿ.ತಮ್ಮಣ್ಣ ಪುತ್ರ ಸಂತೋಷ್ ತಮ್ಮಣ್ಣ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಸರ್ಕಾರ ರಚನೆಯ ಬಗ್ಗೆಯೂ ಚರ್ಚೆ ನಡೆಸಲಾಗಿದೆ.
ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಜಯಗಳಿಸಿದೆ. ಅಂಬರೀಶ್ ಬೆಂಬಲಿಗರು ಕೊನೆ ಕ್ಷಣದಲ್ಲಿ ಜೆಡಿಎಸ್ ಬೆಂಬಲಿಸಿದ್ದು, ಗುಟ್ಟಾಗಿ ಉಳಿದಿಲ್ಲ.
ಮಂಡ್ಯ ರಾಜಕೀಯ: ಅಂಬರೀಶ್ ಆಪ್ತ ಚಂದ್ರು ಜೆಡಿಎಸ್ ಸೇರ್ಪಡೆ
ಅಂಬರೀಶ್ ಅವರು ಮಂಡ್ಯದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದರು. ನಂತರ ಎಚ್.ಡಿ.ಕುಮಾರಸ್ವಾಮಿ ಅವರು ಅಂಬರೀಶ್ ಅವರನ್ನು ಭೇಟಿ ಮಾಡಿ, ಪಕ್ಷಕ್ಕೆ ಬರುವಂತೆ ಆಹ್ವಾನಿಸಿದ್ದರು.
ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಸಮಸ್ಯೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಂಬರೀಶ್ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.