ಹೈಕಮಾಂಡ್ ಅಂಗಳ ತಲುಪಿದ ಎಡಿಜಿಪಿ & ಎಚ್ಡಿ ಕುಮಾರಸ್ವಾಮಿ 'ಹಂದಿಕುಸ್ತಿ' ವಾಕ್ಸಮರ
ಬೆಂಗಳೂರು, ಅಕ್ಟೋಬರ್ 01: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಮಧ್ಯದ ವಾಕ್ಸಮರ, ಜಟಾಪಟಿ ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದೆ. ಅಧಿಕಾರಿ ವಿರುದ್ಧ ಕಿಡಿ ಕಾರಿರುವ ಎಚ್.ಡಿ ಕುಮಾರಸ್ವಾಮಿ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದು, ತನಿಖೆಗೆ ಆಗ್ರಹಿಸಿದ್ದಾರೆ. ಅಲ್ಲದೇ, ಅಧಿಕಾರಿ ಕಾಂಗ್ರೆಸ್ ಕಚೇರಿಯಿಂದ ಪತ್ರ ಬರೆದರಾ? ಎಂಬುದು ಗೊತ್ತಿದೆ ಎಂದು ಬಾಂಬ್ ಸಿಡಿಸಿದ್ದಾರೆ.
ಎಡಿಜಿಪಿ ಚಂದ್ರಶೇಖರ್ ಅವರು ಎಚ್ಡಿ ಕುಮಾರಸ್ವಾಮಿಯವರನ್ನು ಹಂದಿಗೆ ಹೋಲಿಕೆ ಮಾಡಿ ತಮ್ಮ ಸಹೋದ್ಯೋಗಿಗಳಿಗೆ ಪತ್ರ ಬರೆದಿದ್ದಾರೆ. 'ನಾವು ಹಂದಿ ಜೊತೆಗೆ ಕುಸ್ತಿ ಮಾಡಲ್ಲ, ಮಾಡಿದರೆ ನಾವು ಕೊಳಕಾಗುತ್ತೇವೆ' ಎಂದು ಅಧಿಕಾರಿ ಉಲ್ಲೇಖಿಸಿದ್ದರು. ಇದು ಇಬ್ಬರು ಮಧ್ಯದ ಕೆಸರೆರಚಾಟಕ್ಕೆ ಕಾರಣವಾಗಿದೆ.

ಎಚ್ಡಿ ಕುಮಾರಸ್ವಾಮಿ ಪತ್ರದಲ್ಲಿ ಏನಿದೆ?
ಸೋಮವಾರ ಈ ಕುರಿತು ಕೆಂದ್ರ ಸಚಿವ ಎಚ್ಡಿ ಕುಮಾರಸ್ವಾಮಿಯವರು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಎಡಿಜಿಪಿ ಚಂದ್ರಶೇಖರ್ ಅವರು ನಿಯಮ ಉಲ್ಲಂಘಿಸಿದ್ದಾರೆಯೇ ಎಂದು ಪರಿಶೀಲಿಸಿ ಜೊತೆಗೆ ಸ್ವತಂತ್ರ ತನಿಖಾ ಸಂಸ್ಥೆಗಳಿಂದ ತನಿಖೆ ನಡೆಸಬೇಕು. ಕರ್ನಾಟಕ ಕೇಡರ್ ಅಲ್ಲದಿದ್ದರೂ ಇಲ್ಲಿ ಇರುವ ನಿಯಮ ಉಲ್ಲಂಘಿಸಿದ್ದಾರೇಯೆ ಎಂದು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದರೆ.
ಇತ್ತೀಚೆಗೆ ಚುನಾವಣಾ ಬಾಂಡ್ ವಿಚಾರವಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್ ಅಧಿಖಾರಿಗಳ ಮಧ್ಯದ ಸಂಬಂಧ ಕುರಿತು ತನಿಖೆ ನಡೆಸಿ ಸತ್ಯಾಸತ್ಯತೆ ಜನತೆಗೆ ತಿಳಿಸಬೇಕಿದೆ ಎಂದು ಎಚ್ಡಿ ಕುಮಾರಸ್ವಾಮಿ ಅವರು ಕೋರಿದ್ದಾರೆ.
ಕಾಂಗ್ರೆಸ್, ಅಧಿಕಾರಿಗಳ ಮಧ್ಯದ ಸಂಬಂಧದ ತನಿಖೆ
ಇದೇ ವೇಳೆ ಪತ್ರದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣದ ಬಗ್ಗೆ ಉಲ್ಲೇಖಿಸಿದ್ದು, ಕೇಂದ್ರ ಸ್ವತಂತ್ರ ತನಿಖಾ ಸಂಸ್ಥೆಗಳಿಂದ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಜೊತೆಗೆ ಸಂಬಂಧದ ಬಗ್ಗೆ ಮಾತನಾಡಿರುವ ಅವರು, ಈ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ತಮ್ಮ ಕಚೇರಿಯಿಂದಲೇ ಸಹೋದ್ಯೋಗಿಗಳಿಗೆ ಪತ್ರ ಬರೆದರಾ ಇಲ್ಲ ಕೆಪಿಸಿಸಿ ಕಚೇರಿಯಿಂದ ಬರೆದರಾ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿಗೆ ಡಿ.ಕೆ ಶಿವಕುಮಾರ್ ತಿರುಗೇಟು
ಇದಕ್ಕೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಎಡಿಜಿಪಿ ಹಾಗೂ ಕಾಂಗ್ರೆಸ್ ಕಚೇರಿ ಕೆಪಿಸಿಸಿಗೆ ಏನು ಸಂಬಂಧ ಎಂದು ಖಾರವಾಗಿ ಪ್ರಶ್ನಿಸುವ ಮುಖೇನ ತಿರುಗೇಟು ನೀಡಿದ್ದಾರೆ. ಸದ್ಯ ಅಧಿಕಾರಿ ಹಾಗೂ ಕೇಂದ್ರ ಸಚಿವರ ಮಧ್ಯದ ವಾಕ್ಸಮರ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಇನ್ನೂ ಕೆಂದ್ರ ಸಚಿವರ ವಿರುದ್ಧ ಹಂದಿ ಪದ ಬಳಕೆಗೆ ಸಂಬಂಧಿಸಿದಂತೆ ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧ ಕುಟ್ಟಿನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದೆ. ಸರ್ಕಾರಿ ಅಧಿಕಾರಿಗಳು ಈ ರೀತಿ ಮಾತನಾಡುವುದು ಶೋಭೆಯಲ್ಲ. ಅವರನ್ನು ಹದ್ದುಬಸ್ತಿನಲ್ಲಿಡಬೇಕು ಎಂದು ಸಂಘ ಮನವಿ ಮಾಡಿದೆ.












Click it and Unblock the Notifications