ಯಡಿಯೂರಪ್ಪ ನಿವಾಸದಲ್ಲಿ ಮೈತ್ರಿ ನಾಯಕರ ಮೊದಲ ಸಭೆ: ಈ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ನಿರ್ಧರಿಸಿದ ಬಿಜೆಪಿ
ಬೆಂಗಳೂರು,ಜನವರಿ 21: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿವೆ. ಲೋಕಸಭೆ ಚುನಾವಣೆಗೆ ಎನ್ಡಿಎ ಜತೆ ಮೈತ್ರಿ ಮಾಡಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ.
ಹೌದು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಭಾನುವಾರ ಬೆಳಗ್ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೊದಲ ಮೈತ್ರಿ ಸಭೆ ಮಾಡಿದರು. ಈ ಸಭೆಯಲ್ಲಿ ಲೋಕಸಭಾ ಚುನಾವಣೆ ತಯಾರಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಈ ಕ್ಷೇತ್ರದ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆಸಿದ್ದು, ಈ ಸಭೆಯಲ್ಲಿ ಜೆಡಿಎಸ್ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಪಕ್ಷದ ವರಿಷ್ಠರ ಭೇಟಿ ನಂತರ ಅಂತಿಮ ಘೋಷಣೆಯಾಗಲಿದೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಪುಟ್ಟಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಿಂದ ತೆರವಾದ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದೆ. ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದ್ರೆ, ಇದೀಗ ಉಪಚುನಾವಣೆ ನಡೆಯುತ್ತಿರುವುದರಿಂದ ಈ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ತೀರ್ಮಾನಿಸಿದೆ.
ವಿಧಾನಪರಿಷತ್ ಚುನಾವಣೆ ಬಗ್ಗೆ ಜೆಡಿಎಸ್ ಜೊತೆ ಚರ್ಚೆ: ವಿಜಯೇಂದ್ರ
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಿರಿಯರು ಸಭೆ ಸೇರಿ ಮುಂದಿನ ವಿಧಾನಪರಿಷತ್ ಉಪ ಚುನಾವಣೆ, ವಿಧಾನಪರಿಷತ್ತಿನ ಉಳಿದ 6 ಸ್ಥಾನಗಳ ಚುನಾವಣೆ ಕುರಿತು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾಗಿ ಚರ್ಚೆ ಆಗಿದೆ. ಚರ್ಚಿತ ಅಂಶಗಳ ಕುರಿತಂತೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಅತಿ ಶೀಘ್ರವೇ ಅಭ್ಯರ್ಥಿಗಳ ಘೋಷಣೆಗೆ ತೀರ್ಮಾನಿಸಿದ್ದೇವೆ. ಅರ್ಥಪೂರ್ಣ ಚರ್ಚೆ ನಡೆದಿದೆ. ಕಾರ್ಯಕರ್ತರು ತಳಮಟ್ಟದಲ್ಲಿ ಹೊಂದಿಕೊಂಡು ಹೋಗುವ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಸಂಬಂಧ ಮುಂದಿನ ದಿನಗಳಲ್ಲಿ ವರಿಷ್ಠರು ಚರ್ಚಿಸಲಿದ್ದಾರೆ. ಯಡಿಯೂರಪ್ಪನವರು, ಜೆಡಿಎಸ್ನ ಕುಮಾರಸ್ವಾಮಿಯವರು ಸೇರಿ ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ವಿಷಯದಲ್ಲಿ ಗೊಂದಲ ಇಲ್ಲ. ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾದ ಚರ್ಚೆ ಆಗಿದೆ ಎಂದು ಅವರು ತಿಳಿಸಿದರು.
ಸಭೆ ಬಳಿಕ ಕುಮಾರಸ್ವಾಮಿ ಹೇಳಿದ್ದೇನು?
ಸಭೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಮುಂಬರುವ ಪರಿಷತ್ ಚುನಾವಣೆಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಸಭೆಯ ಮಾಹಿತಿಗಳನ್ನು ಬಿಜೆಪಿ ಹೈಕಮಾಂಡ್ ಗೆ ತಿಳಿಸಲಾಗುವುದು. ಇಲ್ಲಿಂದಲೇ ಒಟ್ಟಾಗಿ ಹೋಗುವ ಸಂದೇಶ ಕೊಟ್ಟಿದ್ದೇವೆ ಎಂದು ಸಭೆಯ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಎರಡೂಪಕ್ಷಗಳೂ ಲೋಕಸಭೆಯಲ್ಲಿ ಜತೆಗೂಡಿ ಈ ಕೆಟ್ಟ ಸರ್ಕಾರದ ವಿರುದ್ಧ ಕೆಲಸ ಮಾಡಲು ತೀರ್ಮಾನಿಸಿದ್ದೇವೆ. ನಾಳೆ ರಾಮನ ಪ್ರಾಣ ಪ್ರತಿಷ್ಠಾಪನೆ ದಿನ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾವು ಕುಟುಂಬ ಸಮೇತ ಹೋಗ್ತಿದ್ದೇವೆ. ಹಲವು ರಾಜ್ಯಗಳು ನಾಳೆ ರಜೆ ಘೋಷಿಸಿವೆ. ಇದು ದೇಶದ ಹಬ್ಬ,ಪ್ರತೀ ಕುಟುಂಬದ ಹಬ್ಬ. ನಾಳೆಯ ಕಾರ್ಯಕ್ರಮವನ್ನು ಮನೆಯಲ್ಲಿದ್ದು ಖುದ್ದು ನೋಡಲು ನಾಳೆ ಸಿದ್ದರಾಮಯ್ಯ ರಜೆ ಘೋಷಿಸಬೇಕೆಂದು ಆಗ್ರಹಿಸಿದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಎರಡೇ ಕ್ಷೇತ್ರ?
ಈಗಾಗಲೇ ಯಡಿಯೂರಪ್ಪ ಅವರು ನಿವಾಸದಲ್ಲಿ ನಡೆಸ ಸಭೆಯಲ್ಲಿ ಬೆಂಗಳೂರು ಉತ್ತರ ಶಿಕ್ಷಣ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟು ಕೊಡಲು ಬಿಜೆಪಿ ನಿರ್ಧರಿಸಿದೆ. ಅಲ್ಲದೇ ಲೋಕಸಭಾ ಚುನಾವಣೆಯ ತಯಾರಿ ಹಾಗೂ ಕ್ಷೇತ್ರ ಹಂಚಿಕೆ ಕುರಿತು ಚರ್ಚೆಯಾಗಿದ್ದು, ಬಿಜೆಪಿ ಕೇಂದ್ರ ನಾಯಕರ ಮುಂದೆ ನಾಲ್ಕು ಕ್ಷೇತ್ರಗಳಿಗಾಗಿ ಜೆಡಿಎಸ್ ಬೇಡಿಕೆ ಇಟ್ಟಿತ್ತು. ಆದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧರಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಮಂಡ್ಯ ಹಾಗೂ ಹಾಸನ ಕ್ಷೇತ್ರವನ್ನ ನೀಡುವ ಕುರಿತು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.












Click it and Unblock the Notifications