HMT Watch: ಉದ್ಯಮಿ ಮೋಹನ್ ದಾಸ್ ಪೈ ಭೇಟಿ ಮಾಡಿದ ಹೆಚ್ಡಿ ಕುಮಾರಸ್ವಾಮಿ
ಬೆಂಗಳೂರು ಸೆಪ್ಟೆಂಬರ್ 8: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೆಚ್ಎಮ್ಟಿ ವಾಚ್ ಬಗ್ಗೆ ಹಾಡಿ ಹೊಗಳಿದ್ದು, ದೇಶಿ ಉತ್ಪಾದನಾ ಸಂಸ್ಥೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಲ್ಲದೆ ಇಂದು ಉದ್ಯಮಿ ಮೋಹನ್ದಾಸ್ ಪೈ ಅವರನ್ನು ಭೇಟಿ ಮಾಡಿದ ಅವರು ಈ ಕುರಿತು ತಮ್ಮ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್ಡಿ ಕುಮಾರಸ್ವಾಮಿ ಇಂದು ತಾವು ಉದ್ಯಮಿಗಳಾದ ಉಮಾಕಾಂತ್ ಸೋನಿ, ಅಭಯ್ ಜೈನ್ ಮತ್ತು ಮೋಹನ್ದಾಸ್ ಪೈ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳನ್ನು ಚರ್ಚಿಸಿರುವುದಾಗಿ 'ಎಕ್ಸ್' ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಭವಿಷ್ಯದ ದಿನಗಳಲ್ಲಿ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕೈಗಾರಿಕೆ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಬಹುದು ಎಂಬುವುದರ ಕುರಿತಾಗಿ ಚರ್ಚಿಸಲಾಗಿದೆ ಎಂದು ಹೆಚ್ಡಿಕೆ ಹೇಳಿದ್ದಾರೆ.

ಹೆಚ್ಎಂಟಿ ಕಂಪನಿ ಪುನಶ್ಚೇತನಕ್ಕೆ ಕುಮಾರಸ್ವಾಮಿ ಟೊಂಕ ಕಟ್ಟಿ ನಿಂತಿದ್ದಾರೆ. ಅಲ್ಲದೆ ಉಡುಗೊರೆಯಾಗಿ ನೀಡಲು ಹೆಚ್ಎಂಟಿ ವಾಚ್ನ್ನೇ ಆಯ್ಕೆ ಮಾಡಿ ಎಂದು ಹೆಚ್ಡಿ ಕುಮಾರಸ್ವಾಮಿ ಅವರು ಕರ್ನಾಟಕದ ಸಂಸದರಿಗೆ ಕರೆಕೊಟ್ಟಿದ್ದಾರೆ. ಜೊತೆಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಹೆಚ್ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಎಚ್ಎಂಟಿ ವಾಚ್ ಉಡುಗೊರೆಯಾಗಿ ನೀಡಿದ್ದಾರೆ.
ಈ ಕುರಿತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿ, 'ಹೆಚ್ಎಮ್ಟಿ ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು. ನಮ್ಮ ತಲೆಮಾರಿನ ಯುವಜನರಿಗೆ ಹೆಚ್ಎಮ್ಟಿ ವಾಚ್ ಅಂದರೆ ಅದೊಂದು ದಂತಕಥೆ.
ನನ್ನ ತಂದೆ, ಹೆಚ್ಡಿ ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನದಂದು ಹೆಚ್ಡಿ ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದರು'' ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ ಹೆಚ್ಎಮ್ಟಿ ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ. ನಾನು ಹೆಚ್ಎಮ್ಟಿ ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ' ಎಂದು ಕರೆ ಕೊಟ್ಟಿದ್ದಾರೆ.
ಕಂಪನಿಯ ಕಳೆದುಹೋದ ವೈಭವವನ್ನು ಪುನರುಜ್ಜೀವನಗೊಳಿಸಲು ಹೆಚ್ಡಿ ಕುಮಾರಸ್ವಾಮಿ ಅವರು ಪಣ ತೊಟ್ಟಿದ್ದಾರೆ. ಆ ನಿಟ್ಟಿನಲ್ಲಿ ಹೆಚ್ಡಿ ಕುಮಾರಸ್ವಾಮಿ ಅವರು ಬೆಂಗಳೂರು, ಹೈದರಾಬಾದ್, ಅಜ್ಮೀರ್ ಮತ್ತು ಕೇರಳದ ಹೆಚ್ಎಮ್ಟಿಯ ಎಲ್ಲಾ ಘಟಕಗಳಿಗೆ ಭೇಟಿ ನೀಡಿದ್ದಾರೆ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಎಮ್ಟಿ ಕೈಗಡಿಯಾರವನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.











Click it and Unblock the Notifications