ಕುತೂಹಲ ಮೂಡಿಸಿದ ಎಚ್ಡಿಕೆ, ಯಡಿಯೂರಪ್ಪ ಭೇಟಿ!
ಬೆಂಗಳೂರು, ಸೆ. 11: ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಹಿಂದಿನ ಮೈತ್ರಿ ಸರ್ಕಾರದ ಬಳಿಕ ಇಬ್ಬರು ನಾಯಕರ ಮೊದಲ ಭೇಟಿ ಇದಾಗಿದ್ದು, ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ. ಜೊತೆಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಯನ್ನೂ ಹುಟ್ಟು ಹಾಕಿದೆ.
ರಾಜ್ಯ ಬಿಜೆಪಿಯಲ್ಲಿಯೂ ಹಲವು ಬೆಳವಣಿಗೆಗಳಾಗುತ್ತಿವೆ. ಇದೇ ಮಳೆಗಾಲದ ಅಧಿವೇಶನದ ಬಳಿಕ ನಾಯಕತ್ವ ಬದಲಾವಣೆ ಬೇಡಿಕೆಯೊಂದಿಗೆ ಬಿಜೆಪಿಯ ಹಲವು ಶಾಸಕರು ಹೈಕಮಾಂಡ್ ಭೇಟಿಗೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿಯಿದೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಎಚ್ಡಿಕೆ ಭೇಟಿ ಮಾಡಿರುವುದು ಸಹಜವಾಗಿಯೆ ಕುತೂಹಲ ಮೂಡಿಸಿದೆ. ಜೊತೆಗೆ ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ ಚರ್ಚೆಯ ಕುರಿತು ಮಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ.
ನಾಯಕತ್ವ ಬದಲಾವಣೆ: ಹೈಕಮಾಂಡ್ ಭೇಟಿಗೆ ಶಾಸಕರ ನಿರ್ಧಾರ?
ಮೈತ್ರಿ ಸರ್ಕಾರದ ಪತನದ ಬಳಿಕ ಇಬ್ಬರೂ ನಾಯಕರು ಮೊದಲ ಬಾರಿ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಭೇಟಿಗೆ ಮಹತ್ವ ಬಂದಿದೆ.
ಸಿಎಂ-ಮಾಜಿ ಸಿಎಂ ಭೇಟಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ ಮಳೆ ಆಗುತ್ತಿದೆ. ಅದರಿಂದ ಸಾಕಷ್ಟು ಹಾನಿಯಾಗಿದೆ. ಜೊತೆಗೆ ದಾಸರಹಳ್ಳಿ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಹಾನಿ ಆಗಿದೆ.
ನಾನು ಸಿಎಂ ಆಗಿದ್ದಾಗ ಸುಮಾರು 515 ಕೋಟಿ. ರೂಪಾಯಿಗಳ ಕಾಮಗಾರಿಗೆ ಅನುಮತಿ ಕೊಟ್ಟಿದ್ದೆ. ಇಲ್ಲಿಯವರೆಗೆ ಕೇವಲ 16 ಕೋಟಿ ರೂ. ಅನುದಾನ ಮಾತ್ರ ಬಿಡುಗಡೆ ಆಗಿದೆ. ಅಲ್ಲಿ ಬಡಾವಣೆಗಳು ನೀರಿನಲ್ಲಿ ಜಲಾವೃತ ಆಗಿವೆ. ಹೀಗಾಗಿ ನಮ್ಮ ಶಾಸಕರ ಜೊತೆ ಹೆಚ್ಚಿನ ಅನುದಾನ ಕೊಟ್ಟು ಅಭಿವೃದ್ಧಿ ಕಾಮಗಾರಿ ಮಾಡುವಂತೆ ಮನವಿ ಮಾಡಲು ಬಂದಿದ್ದೆ ಎಂದು ಕುಮಾರಸ್ವಾಮಿ ಅವರು ಭೇಟಿ ಬಳಿಕ ಹೇಳಿಕೆ ಕೊಟ್ಟಿದ್ದಾರೆ.
ನಾಯಕತ್ವ ಬದಲಾವಣೆ
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಎಚ್.ಡಿ. ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ವಿಚಾರ ನನಗೆ ಗೊತ್ತಿಲ್ಲ. ನಾನು ಅಭಿವೃದ್ಧಿ ವಿಚಾರ ಚರ್ಚೆ ಮಾಡಲು ಭೇಟಿಯಾಗಿದ್ದೆ. ಅಧಿವೇಶನ ವಿಚಾರ ಸದನದಲ್ಲಿ ಮಾತನಾಡೋಣ. ಈಗ ಬೇಡ ಎಂದಿದ್ದಾರೆ.
ಇನ್ನು ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಮಾತನಾಡಿರುವ ಎಚ್ಡಿಕೆ, ಡ್ರಗ್ ಮಾಫಿಯಾ ವಿಚಾರವಾಗಿ ತನಿಖೆ ನಡೆಯುತ್ತಿದೆ. ಅದರಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ. ಯಾರ್ಯಾರ ಹೆಸರು ಹೊರಗೆ ಬರುತ್ತದೆ ಅಂತ ನೋಡೋಣ ಎಂದಿದ್ದಾರೆ. ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗಿನ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ರಾಜಕೀಯ ಉದ್ದೇಶವಿಲ್ಲ
ದಾಸರಹಳ್ಳಿ ಶಾಸಕ ಮಂಜುನಾಥ್ ಅವರ ಜೊತೆಯಲ್ಲಿ ಕುಮಾರಸ್ವಾಮಿ ಬಂದು ಭೇಟಿ ಮಾಡಿದ್ದಾರೆ. ದಾಸರಹಳ್ಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಮಳೆಯಿಂದ ಆ ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದ ಹಾನಿಯಾಗಿದೆ. ಹೀಗಾಗಿ ಹೆಚ್ಚಿನ ಪರಿಹಾರ ನೀಡುವಂತೆ ಕೇಳಲು ಬಂದಿದ್ದರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗಿನ ಭೇಟಿ ಕುರಿತು ಸಿಎಂ ಯಡಿಯೂರಪ್ಪ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.
ಮಾಸಿ ಸಿಎಂ ಕುಮಾರಸ್ವಾಮಿ ಅವರು ರಾಜಕೀಯ ಉದ್ದೇಶದಿಂದ ಬಂದು ಭೇಟಿ ಮಾಡಿಲ್ಲ ಎಂದೂ ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ.
Recommended Video
ನನ್ನ ಕ್ಷೇತ್ರದಲ್ಲಿ ಹೆಚ್ಚು ಹಾನಿ
ಭೇಟಿ ಸಂದರ್ಭದಲ್ಲಿ ಉಪಸ್ಥಿತರಿದ್ದ ದಾಸರಹಳ್ಳಿ ಜೆಡಿಎಸ್ ಶಾಸಕ ಮಂಜುನಾಥ್ ಅವರು ಕೂಡ ಭೇಟಿ ಕುರಿತು ಮಾತನಾಡಿದ್ದಾರೆ. ಮಳೆಯಿಂದಾಗಿ ನನ್ನ ಕ್ಷೇತ್ರದಲ್ಲಿ ಹೆಚ್ಚಿನ ಹಾನಿಯಾಗಿದೆ. ಮನೆಗಳಿಗೂ ನೀರು ನುಗ್ಗಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದರು. ಸರ್ಕಾರ ಬದಲಾದಾಗ ಅನುದಾನ ಬಿಡುಗಡೆಗೆ ಸ್ವಲ್ಪ ತೊಂದರೆ ಆಗಿತ್ತು.
ಪೀಣ್ಯ ಕೈಗಾರಿಕಾ ಪ್ರದೇಶ ಕೂಡ ನಮ್ಮ ಕ್ಷೇತ್ರದಲ್ಲಿಯೇ ಬರುತ್ತದೆ. ಮಳೆಯಿಂದಾಗಿ ಅಲ್ಲೂ ಸಮಸ್ಯೆ ಆಗಿದೆ. ಅದು ಆದಾಯ ಬರುವ ಕ್ಷೇತ್ರವಾಗಿದ್ದರಿಂದ ಆದಷ್ಟು ಬೇಗ ಗಮನ ಹರಿಸುವಂತೆ ಮನವಿ ಮಾಡಿದ್ದೇವೆ ಎಂದು ದಾಸರಹಳ್ಳಿ ಶಾಸಕ ಮಂಜುನಾಥ್ ಅವರು ಹೇಳಿಕೆ ಕೊಟ್ದಿದ್ದಾರೆ.