ಕಾಂಗ್ರೆಸ್ ಶಾಸಕರ ಜೊತೆ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಸಭೆ
ಬೆಂಗಳೂರು, ಜುಲೈ 17 : ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಸಿಕೊಳ್ಳಲು ಕೊನೆ ಕ್ಷಣದ ಕಸರತ್ತು ಮುಂದುವರೆದಿದೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರ ಜೊತೆ ಮಹತ್ವದ ಸಭೆ ನಡೆಸಿದರು.
ಬುಧವಾರ ರಾತ್ರಿ ಪ್ರಕೃತಿ ರೆಸಾರ್ಟ್ಗೆ ಭೇಟಿ ನೀಡಿದ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗುರುವಾರ ಎಚ್. ಡಿ. ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ದೇವನಹಳ್ಳಿ ಬಳಿ ಇರುವ ಪ್ರಕೃತಿ ರೆಸಾರ್ಟ್ನಲ್ಲಿರುವ ಕಾಂಗ್ರೆಸ್ ಶಾಸಕರ ಜೊತೆ ಮಹತ್ವದ ಸಭೆ ನಡೆಸಿದರು. ನಾಳೆ ನಡೆಯುವ ಪ್ರಕ್ರಿಯೆಯ ಬಗ್ಗೆ ವಿವರಣೆ ನೀಡಿದರು.

"ನಮ್ಮ ಒಗ್ಗಟ್ಟನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ" ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯಲಿದೆ ಎಂದು ಕುಮಾರಸ್ವಾಮಿ ಶಾಸಕರ ಜೊತೆ ಮಾತನಾಡುವಾಗ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಕೃತಿ ರೆಸಾರ್ಟ್ನಲ್ಲಿ ಶಾಸಕರ ಜೊತೆ ಸಭೆ ನಡೆಸಿದ ಬಳಿಕ ಎಚ್. ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಿರುವ ರೆಸಾರ್ಟ್ಗೆ ತೆರಳಿದರು.
ಗುರುವಾರ ಬೆಳಗ್ಗೆ 11ಗಂಟೆಗೆ ವಿಧಾನಸಭೆ ಕಲಾಪ ಆರಂಭವಾಗಲಿದೆ. ಎಚ್. ಡಿ. ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಬೇಕಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರು ಸರ್ಕಾರ ಉಳಿಸಿಕೊಳ್ಳಲು ಕೊನೆ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ.












Click it and Unblock the Notifications