ಅಚ್ಚರಿ ಮೂಡಿಸಿದ ಖರ್ಗೆ, ಎಚ್ಡಿ ಕುಮಾರಸ್ವಾಮಿ ಭೇಟಿ
Recommended Video
ಬೆಂಗಳೂರು, ಜೂನ್ 19 : ಅಚ್ಚರಿಯ ಬೆಳವಣಿಗೆಯೊಂದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ಉಭಯ ನಾಯಕರು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಬುಧವಾರ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇರುವಾಗಲೇ, ಕುಮಾರಸ್ವಾಮಿ ಖರ್ಗೆ ಅವರನ್ನು ಭೇಟಿಯಾಗಿದ್ದು ಕುತೂಲಕ್ಕೆ ಕಾರಣವಾಗಿದೆ.
ಎಚ್.ಡಿ.ಕುಮಾರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮಾಜಿ ಶಾಸಕ ಕೋನರೆಡ್ಡಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, 'ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಅವರು ಬಂದು ನನ್ನನ್ನು ಭೇಟಿಯಾಗಿದ್ದಾರೆ. ಇದೊಂದು ಸೌಹಾರ್ದಯುತವಾದ ಭೇಟಿಯಾಗಿದೆ' ಎಂದು ಹೇಳಿದರು.
'ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಂಡರಕಿಯಲ್ಲಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಗುರುಮಿಠಕಲ್ ನನ್ನ ಕ್ಷೇತ್ರ, ಕ್ಷೇತ್ರದ ಬಗ್ಗೆ ಹಲವು ಮಾಹಿತಿಗಳನ್ನು ನೀಡಿದ್ದೇನೆ' ಎಂದು ತಿಳಿಸಿದರು.
'ಯಾದಗಿರಿ ಜಿಲ್ಲೆಯ ಭೀಕರ ಬರಗಾಲವಿದೆ. ಅಲ್ಲಿನ ಜನರು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಸಮಸ್ಯೆ ನೋಡಿಕೊಂಡು ಸರಿಪಡಿಸಿ, ಅಧಿಕಾರಿಗಳಿಗೂ ಸರಿಯಾದ ಸೂಚನೆ ನೀಡಿ ಎಂದು ಕುಮಾರಸ್ವಾಮಿ ಅವರ ಬಳಿ ಮನವಿ ಮಾಡಿದ್ದೇನೆ' ಎಂದರು.
'ರಾಜ್ಯ ಸರ್ಕಾರವನ್ನು ನಡೆಸುವ ಕುರಿತು ನಾನು ಯಾವುದೇ ಸಲಹೆ ಕೊಟ್ಟಿಲ್ಲ. ಚುನಾವಣೆಯಲ್ಲಿ ನನ್ನ ಕ್ಷೇತ್ರವನ್ನೇ ನಾನು ಕಳೆದುಕೊಂಡಿದ್ದೇನೆ. ಇಂತಹ ಸಮಯದಲ್ಲಿ ಸಲಹೆ ಕೊಟ್ಟರೆ ಸಮಂಜಸವಾಗುವುದಿಲ್ಲ. ಆದ್ದರಿಂದ, ಸಲಹೆ ಕೊಟ್ಟಿಲ್ಲ' ಎಂದು ಖರ್ಗೆ ಸ್ಪಷ್ಟಪಡಿಸಿದರು.












Click it and Unblock the Notifications