ಉಳ್ಳವರ ಬಿಪಿಎಲ್ ಕಾರ್ಡ್ ರದ್ದು: ರೈತರ ಅನ್ನದ ತಟ್ಟೆಗೆ ಕೈಹಾಕಬೇಡಿ: ಕುಮಾರಸ್ವಾಮಿ
ಬೆಂಗಳೂರು, ಜೂನ್ 7: ಮನೆಯಲ್ಲಿ ವಾಹನ, ಟ್ರ್ಯಾಕ್ಟರ್ ಇರುವ ರೈತರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂದು ಹೇಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
Recommended Video
ರೈತರ ಅನ್ನದ ತಟ್ಟೆಗೆ ಕೈ ಹಾಕಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಈ ಕುರಿತು ಸಾಲು ಸಾಲು ಟ್ವೀಟ್ ಮಾಡಿದ್ದಾರೆ.
ಕೊರೊನಾ ವೈರಸ್ ದಾಳಿ ಆರಂಭಕ್ಕೂ ಮೊದಲು 63 ಸಾವಿರ ಪಡಿತರ ಕಾರ್ಡ್ಗಳನ್ನು ರದ್ದುಪಡಿಸಲಾಗಿತ್ತು. ಈಗ ಮತ್ತೆ ಅನರ್ಹ ಮತ್ತು ನಕಲಿ ಪಡಿತರ ಚೀಟಿಗಳ ರದ್ದುಪಡಿಸಲು ಅಭಿಯಾನ ನಡೆಸುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ಆಗುವ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಅಭಿಯಾನ ನೆರವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದರು.
ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಖರೀದಿಗೆ ರೈತರಿಗೆ ಹಣ ಪಾವತಿಸಲು ಬಾಕಿ ಇರುವ 240 ಕೋಟಿ ರೂ. ಆವರ್ತ ನಿಧಿಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದರು.

ರೈತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ
ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ. ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ.

ವೈಜ್ಞಾನಿಕ ಕೃಷಿ ಪದ್ಧತಿಗೆ ಆದ್ಯತೆ ನೀಡಿ
ರೈತರಿಗೆ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ?

ಬಿಪಿಎಲ್ ಕಾರ್ಡ್ ಕೇವಲ ಪಡಿತರಕ್ಕಷ್ಟೇ ಸೀಮಿತವಲ್ಲ
ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್ ಕಾರ್ಡ್ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡೇ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ.

ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು
ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ.












Click it and Unblock the Notifications