ಕಾಂಗ್ರೆಸ್ ಶಾಸಕರಿಗೆ ಎಚ್.ಡಿ.ಕುಮಾರಸ್ವಾಮಿ ಫೋನ್ ಕರೆ!
ಬೆಂಗಳೂರು, ಜುಲೈ 01 : ಕರ್ನಾಟಕ ರಾಜಕೀಯದಲ್ಲಿ ಕ್ಷಣಕ್ಕೊಂದು ಬದಲಾವಣೆ ನಡೆಯುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಇಬ್ಬರು ಕಾಂಗ್ರೆಸ್ ಶಾಸಕರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಬ್ಬರು ಶಾಸಕರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಕರ್ನಾಟಕ ಕಾಂಗ್ರೆಸ್ನಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಪಾಲ್ಗೊಂಡಿದ್ದಾರೆ.
ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್, ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಇನ್ನೂ ಕೆಲವು ಶಾಸಕರು ರಾಜೀನಾಮೆ ನೀಡುವ ನಿರೀಕ್ಷೆ ಇದೆ. ಪ್ರತಿಪಕ್ಷ ಬಿಜೆಪಿ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷವಾಗಿ ಗಮನಿಸುತ್ತಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಜುಲೈ 6ರ ತನಕ ಅವರು ರಾಜ್ಯಕ್ಕೆ ವಾಪಸ್ ಆಗುವುದಿಲ್ಲ. ರಾಜ್ಯದಲ್ಲಿ ಹಲವು ಬೆಳವಣಿಗೆ ನಡೆಯುತ್ತಿರುವ ಹಿನ್ನಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕರಿಗೆ ಕರೆ ಮಾಡಿದ್ದಾರೆ...

ಎಚ್.ಡಿ.ಕುಮಾರಸ್ವಾಮಿ ಟ್ವೀಟ್
ಅಮೆರಿಕ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಬೆಳವಣಿಗೆ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅಮೇರಿಕದ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದಿದೆ. ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ BJP ಯ ಪ್ರಯತ್ನ 'ನಿರಂತರ ಹಗಲುಗನಸು' ಎಂದು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರಿಗೆ ಕರೆ
7 ಜನರ ಕಾಂಗ್ರೆಸ್ ಬಂಡಾಯ ಶಾಸಕರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕರೆ ಮಾಡಿದ್ದಾರೆ. ಯಾವುದೇ ಆತುರದ ತೀರ್ಮಾನವನ್ನು ಕೈಗೊಳ್ಳಬೇಡಿ. ತಾಳ್ಮೆಯಿಂದ ಇರಿ ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಸಮಸ್ಯೆ ಬಗೆಹರಿಸುವ ಭರವಸೆ
ಶಾಸಕರಿಗೆ ಕರೆ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಅವರು ವಿದೇಶದಿಂದ ಬಂದ ಬಳಿಕ ಸಮಸ್ಯೆ ಬಗೆಹರಿಸುತ್ತೇನೆ. ಎಲ್ಲರೂ ತಾಳ್ಮೆಯಿಂದ ಕಾಯಿರಿ ಆತುರದ ತೀರ್ಮಾನವನ್ನು ತೆಗೆದುಕೊಳ್ಳಬೇಡಿ ಎಂದು ಕರೆ ಮಾಡಿದ್ದಾರೆ.

ಹಲವು ಶಾಸಕರ ಪೋನ್ ಸ್ವಿಚ್ ಆಫ್
ಬಂಡಾಯ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕರನ್ನು ಸಂಪರ್ಕಿಸಲು ಬಿಜೆಪಿ ಪ್ರಯತ್ನ ನಡೆಸಿದೆ. ಆದರೆ, ಹಲವು ಶಾಸಕರ ಫೋನ್ ಸ್ವಿಚ್ ಆಫ್ ಆಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಶಾಸಕರನ್ನು ಸಂಪರ್ಕಿಸಲು ಪ್ರಯತ್ನ ನಡೆಸಿದ್ದಾರೆ.












Click it and Unblock the Notifications