ಹಲವು ಸಮೀಕ್ಷೆಯಲ್ಲಿ ಅತಂತ್ರ ಫಲಿತಾಂಶ; ಬಿಜೆಪಿ, ಕಾಂಗ್ರೆಸ್ ಜೊತೆ ಮೈತ್ರಿ: ಕುಮಾರಸ್ವಾಮಿ ಹೇಳಿದ್ದೇನು?
ಮೈಸೂರು,ಏಪ್ರಿಲ್7: ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಚುನಾವಣಾ ತಂತ್ರಗಾರಿಕೆಯಲ್ಲಿರುವ ರಾಜಕೀಯ ಪಕ್ಷಗಳು ಹಲವು ಸಮೀಕ್ಷೆಗಳನ್ನ ನಡೆಸಿದ್ದು, ಹಲವು ಸಮೀಕ್ಷೆಗಳಲ್ಲಿ ಯಾವುದೇ ಪಕ್ಷಕ್ಕೆ ಪೂರ್ಣ ಬಹುಮತ ಬರುವುದಿಲ್ಲ ಎಂದು ತಿಳಿದು ಬಂದಿದ್ದು, ಚುನಾವಣೆಗೂ ಮೊದಲೇ ರಾಜ್ಯ ರಾಜಕೀಯದಲ್ಲಿ ಮೈತ್ರಿ ಮಾತುಕತೆ ಜೋರಾಗಿದೆ.
ಈ ಕುರಿತು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾತನಾಡಿ, ಬಿಜೆಪಿ ಅಥವಾ ಕಾಂಗ್ರೆಸ್ ಜತೆ ಸೇರಿ ಮೈತ್ರಿ ಸರ್ಕಾರ ರಚಿಸುವ ಇಚ್ಛೆ ನನಗೆ ಇಲ್ಲ. ರಾಜ್ಯಾದ್ಯಂತ ಪಂಚರತ್ನ ಯಾತ್ರೆ ವೇಳೆ ಭಾಗವಹಿಸುತ್ತಿರುವ ಜನಸ್ತೋಮ ನೋಡಿದರೆ ಈ ಬಾರಿ ರಾಜ್ಯದ ಜನತೆ ಬಹುಮತ ನೀಡುವ ವಿಶ್ವಾಸವಿದೆ ಎಂದು ಹೇಳಿದರು.

ನವಂಬರ್ ತಿಂಗಳಿನಲ್ಲಿ ಕೋಲಾರದಲ್ಲಿ ಆರಂಭವಾದ ಪಂಚರತ್ನ ರಥಯಾತ್ರೆ ರಾಜ್ಯಾದ್ಯಂತ ಐದು ತಿಂಗಳ ಕಾಲ ಸಂಚರಿಸಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಉಚಿತ ಆರೋಗ್ಯ ಶಿಕ್ಷಣ ಉದ್ಯೋಗ ಸೇರಿದಂತೆ ಕೃಷಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ನೂತನ ಯೋಜನೆಗಳನ್ನು ಆರಂಭಿಸಿ ರೈತರು ಕಾರ್ಮಿಕರು ಸೇರಿದಂತೆ ಸಮಾಜದ ವಿವಿಧ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು. ರಥಯಾತ್ರೆ ಸಂದರ್ಭ ಮತದಾರರ ಅಭೂತಪೂರ್ವ ಬೆಂಬಲ ನೋಡಿದರೆ ಮುಂದಿನ ಬಾರಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ವಿಶ್ವಾಸವಿದೆ ಎಂದರು.
ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ, ಅವರು ಅಧಿಕಾರಕ್ಕೆ ಬರಲು ನೇರ ಕಾರಣ ಕಾಂಗ್ರೆಸ್ನವರಾಗಿದ್ದು, ಪ್ರಮುಖವಾಗಿ ಮೈಸೂರಿನ ನಾಯಕನ ಕುತಂತ್ರದಿಂದ ಮೈತ್ರಿ ಸರ್ಕಾರ ಪತನವಾಯಿತು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಹೆಸರು ಹೇಳದೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ನಿಜವಾಗಿ ಕೋಮು ಸಂಘರ್ಷ ಇರುವುದು ಈ ಎರಡು ಪಕ್ಷಗಳಿಂದ ಮುಸ್ಲಿಂ ಸಮುದಾಯಕ್ಕೆ ದೇವೇಗೌಡರು ನೀಡಿದ ಶೇ. 4 ರಷ್ಟುಮೀಸಲಾತಿಯನ್ನು ತೆಗೆದು ಹಾಕಿದ್ದಾರೆ, ದಲಿತ ಸಮುದಾಯ ಒಡೆಯುವ ಕೆಲಸ ಮಾಡಿದ್ದಾರೆ, ಎಲ್ಲರ ಬದುಕಿನಲ್ಲಿ ಸಮಾನತೆ ತರುವ ಕೆಲಸ ಮಾಡಬೇಕೆಂದರೆ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಪಕ್ಷಕ್ಕೆ ರಾಜ್ಯದಲ್ಲಿ 5 ವರ್ಷ ಸ್ವತಂತ್ರ ಅಧಿಕಾರ ಸಿಗಬೇಕು ಈ ನಿಟ್ಟಿನಲ್ಲಿ ಮತದಾರರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಿ ಎಂದು ಹೇಳಿದರು.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕುಟುಂಬಕ್ಕೆ ನಿಷ್ಠವಾಗಿರುವುದರಲ್ಲಿ ಪಿರಿಯಾಪಟ್ಟಣ ತಾಲೂಕು ಮೊದಲ ಸ್ಥಾನದಲ್ಲಿದೆ, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು.
ಇನ್ನೂ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮಾತನಾಡಿ, ಹಾಸನ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಲಾಗುದು ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಈ ವೇಳೆ ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಆಗಿಲ್ಲ. ನಮ್ಮ ಸ್ಥಳೀಯ ಸಮಸ್ಯೆಗಳ ಬಗ್ಗೆ ಸದಾ ಹೋರಾಟ ಮಾಡುವ ಪ್ರಾದೇಶಿಕ ಪಕ್ಷ ಜೆಡಿಎಸ್ಗೆ ಈ ಬಾರಿ ರಾಜ್ಯದ ಜನತೆ ಬಹುಮತ ನೀಡಿ ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯಾಗಬೇಕು, ದೇವೇಗೌಡರು ರೈತರ ಪರ ಹೋರಾಟ ಮಾಡಿದವರು, ಈ ಬಾರಿ ಜೆಡಿಎಸ್ನ ಅಭ್ಯರ್ಥಿ ಕೆ. ಮಹದೇವ್ಗೆ ಮತ ನೀಡುವ ಮೂಲಕ ದೇವೇಗೌಡರ ಕುಟುಂಬದ ಋುಣ ತೀರಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.












Click it and Unblock the Notifications