ಕರ್ನಾಟಕದಲ್ಲಿ ಐಫೋನ್ ಉತ್ಪಾದನಾ ಘಟಕ ಬಗ್ಗೆ ಸತ್ಯ ಬಿಚ್ಚಿಟ್ಟ ಎಚ್ಡಿಕೆ, ಜಾಹೀರಾತುಗಳಲ್ಲೇ ಬಿಜೆಪಿ ಜಳಕ: ವ್ಯಂಗ್ಯ
ಐಫೋನ್ ತಯಾರಿಸುವ ತೈವಾನ್ ದೇಶದ ಫಾಕ್ಸ್ ಕಾನ್ ಕಂಪನಿಯು ಕರ್ನಾಟಕದಲ್ಲಿ ಬೃಹತ್ ಹೂಡಿಕೆ ಮಾಡಲು ಮುಂದೆ ಬಂದಿದೆ ಎಂಬುದರ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು, ಮಾರ್ಚ್ 05: ಐಫೋನ್ ತಯಾರಿಸುವ ತೈವಾನ್ ದೇಶದ ಫಾಕ್ಸ್ ಕಾನ್ ಕಂಪನಿಯು ಕರ್ನಾಟಕದಲ್ಲಿ ಬೃಹತ್ ಹೂಡಿಕೆ ಮಾಡಲು ಮುಂದೆ ಬಂದಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಕಂಪನಿ ಸದಸ್ಯರ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಪ್ರಚಾರ ಗಿಟ್ಟಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ್ದು ಪ್ರಚಾರ ಜಾಸ್ತಿ, ಫಲಿತಾಂಶ ನಾಸ್ತಿ ಎನ್ನುವ ನೀತಿ ಹೊಂದಿದೆ. ಇದೇ ಬಿಜೆಪಿ ಘೋಷವಾಕ್ಯ, ಧ್ಯೇಯವಾಕ್ಯವು ಆಗಿದೆ. ಜಾಹೀರಾತುಗಳಲ್ಲಿಯೇ ಜಳಕ ಮಾಡುತ್ತಿರುವ ಈ ಬಿಜೆಪಿ ಸರ್ಕಾರಕ್ಕೆ ಜನರ ಕ್ಷೇಮ, ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಉದ್ಯೋಗ ಸೃಷ್ಟಿ ಬಗ್ಗೆ ಎಳ್ಳಷ್ಟೂ ದೂರದೃಷ್ಟಿ ಇಲ್ಲ ಎಂದು ಅವರು ದೂರಿದ್ದಾರೆ.

ಐಫೋನ್ ತಯಾರಿಸುವ ತೈವಾನ್ ದೇಶದ ಫಾಕ್ಸ್ ಕಾನ್ ಕಂಪನಿ ರಾಜ್ಯದಲ್ಲಿ ಹೂಡಿಕೆ ಮಾಡಲು ಬಂದಿದೆ ಎಂದು ಶುಕ್ರವಾರ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮತ್ತಿಬ್ಬರು ಹಾಗೂ ಇಬ್ಬರು ಸಚಿವರು (ಡಾ.ಸಿ.ಎನ್. ಅಶ್ವಥ್ ನಾರಾಯಣ, ಸುರೇಂದ್ರ ಅಂಗಡಿ) ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡರು. ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಕೈಯ್ಯಲ್ಲಿ ಸಹಿಪತ್ರಗಳನ್ನು ಹಿಡಿದು ಮಾಧ್ಯಮಗಳಿಗೆ ಪೋಸು ಕೊಟ್ಟರು.
ಆ ಬೆನ್ನಲ್ಲೇ ತೈವಾನ್ನ ತೈಪೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಂಪನಿಯು, ಕರ್ನಾಟಕ ರಾಜ್ಯದಲ್ಲಿ ಹೂಡಿಕೆ ಮಾಡುವ ಯಾವುದೇ ನಿರ್ಣಾಯಕ ಒಪ್ಪಂದ ಆಗಿಲ್ಲ ಎಂದು ಸ್ಪಷ್ಟಪಡಿಸಿದೆ. ಹಾಗಾದರೆ, ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಕ್ಷಮದಲ್ಲಿ ಆಗಿದ್ದೇನು?. ಅದೇನು ಒಪ್ಪಂದವೋ? ಅಥವಾ ಪ್ರಚಾರದ ಗಿಮಿಕ್ಕೋ? ಎಂದು ಜನರಿಗೆ ತಿಳಿಸಬೇಕಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕೋವಿಡ್ ನಂತರದ ಕಾಲದಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆಗೆ ಬಹಳ ಮಹತ್ವವಿದೆ. ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಎಡವಟ್ಟು ಮಾಡಿಕೊಂಡ ಕಾರಣಕ್ಕೆ ಓಲಾ ಕಂಪನಿ ಕರ್ನಾಟಕದ ಕೈ ಜಾರಿತು. ರೂಪಾಯಿ 7,614 ಕೋಟಿ ಹೂಡಿಕೆ ತಮಿಳುನಾಡು ರಾಜ್ಯದ ಪಾಲಾಯಿತು ಎಂದು ತಿಳಿಸಿದರು.

ಚುನವಣೆ, ಪ್ರಚಾರಕ್ಕಿಂತ ಜನರ ಬದುಕು ಮುಖ್ಯ. ಈ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿಕಾರವೇ ಮುಖ್ಯ. ಉಳಿದಿದ್ದೆಲ್ಲ ಅಮುಖ್ಯ. ಕನ್ನಡಿಗರ ಕಷ್ಟಗಳಿಗೆ ಕೊನೆ ಇಲ್ಲ ಎನ್ನುವಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.












Click it and Unblock the Notifications