ಕೊರೊನಾ: ರಾಜ್ಯ ಸರ್ಕಾರಕ್ಕೆ ಸಲಹೆ ಕೊಟ್ಟ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ!
ಬೆಂಗಳೂರು, ಏ. 20: ದೇಶಾದ್ಯಂತ ಕೊರೊನಾ ವೈರಸ್ ವಿರುದ್ಧ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಟ ನಡೆಸಿದ್ದಾರೆ. ಸ್ವಂತ ಮಕ್ಕಳನ್ನು ಕೂಡ ಭೇಟಿಯಾಗದೆ ಸೋಂಕಿತರು, ಸೋಂಕಿಗೆ ಒಳಗಾಗುವ ಅಪಾಯದಲ್ಲಿರುವವರ ಆರೈಕೆಮಾಡುತ್ತಿದ್ದಾರೆ. ಲಾಕ್ಡೌನ್ನಿಂದ ಇಡೀ ಜಗತ್ತಿನ ಜನರು ಮನೆಯಲ್ಲಿದ್ದರೆ, ವೈದ್ಯಕೀಯ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮಾತ್ರ ತಮ್ಮ ಜೀವದ ಹಂಗು ತೊರೆದು ಜನರ ದೇಶ ಸೇವೆ ಮಾಡುತ್ತಿದ್ದಾರೆ.
ಹೀಗೆ ಜನಸಾಮಾನ್ಯರ ಜೀವ ರಕ್ಷಿಸಲು ತಮ್ಮ ಜೀವದ ಹಂಗು ತೊರೆದು ಸೇವೆ ಮಾಡುತ್ತಿದ್ದಾರೆ. ಅಂಥವರ ಮೇಲೆ ಕೊರೊನಾ ವೈರಸ್ಗಿಂತ ಕೆಟ್ಟದಾಗಿ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಆರೋಗ್ಯ ರಕ್ಷಣೆಗೆ ಬಂದವರ ಮೇಲೆಯೆ ಮಾರಣಾಂತಿಕ ಹಲ್ಲೆ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳ ನಾಯಕರೂ ಕೂಡ ಪಕ್ಷಾತೀತವಾಗಿ ಸರ್ಕಾರಕ್ಕೆ ಬೆಂಬಲ ಕೊಡುತ್ತಿದ್ದಾರೆ. ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಹೆಡೆಮುರಿ ಕಟ್ಟಿ ಅಂತಾ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ದಂಗೆ ಏಳುವವರರ ಹೆಡೆಮುರಿ ಕಟ್ಟಿ
ರಾಜಕೀಯ ಪಕ್ಷಗಳು ಕೂಡ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸರ್ಕಾರಗಳಿಗೆ ಬೆಂಬಲ ಕೊಟ್ಟಿವೆ. ರಾಜ್ಯ ಸರ್ಕಾರದ ತೀವ್ರ ಕ್ರಮಗಳಿಂದಾಗಿಯೆ ಆರಂಭದಲ್ಲಿ 11ನೇ ಸ್ಥಾನದಲ್ಲಿದ್ದು, ಮೊದಲ ಸಾವಾಗಿದ್ದ ಕರ್ನಾಟಕ ರಾಜ್ಯವೀಗ 11ನೇ ಸ್ಥಾನಕ್ಕೆ ಇಳಿದಿದೆ. ಹೀಗಾಗಿ ಸರ್ಕಾರ ಕೈಗೊಂಡ ಕ್ರಮಗಳಿಗೆ ವಿರೋಧ ಪಕ್ಷಗಳು ಕೂಡ ಶ್ಲಾಘಿಸಿವೆ. ಇದೇ ಸಂದರ್ಭದಲ್ಲಿ ಕೆಂಪು ವಲಯದಲ್ಲಿರು, ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿರುವ ಪಾದರಾಯನಪುರದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಅದನ್ನು ಮಾಜಿ ಸಿಎಂ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು ಎಂದು ಎಚ್ಡಿಕೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು
ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ "ಬಲಿ' ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕರೋನಾ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಎಚ್ಡಿಕೆ ಪಾದರಾಯನಪುರ ಘಟನೆಯನ್ನು ಖಂಡಿಸಿದ್ದಾರೆ.

ಅತಿರೇಕದ ಹುಚ್ಚಾಟಗಳನ್ನು ಸಹಿಸಲಾಗಲ್ಲ
ದೇಶದ ಸ್ವಾಸ್ಥ್ಯಕ್ಕಿಂತ ಬೇರಾವುದೂ ಮುಖ್ಯವಲ್ಲ. ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದು. ಕಾನೂನು ಕೈಗೆತ್ತಿಕೊಂಡು ಗೂಂಡಾಗಿರಿ, ದೌರ್ಜನ್ಯ ನಡೆಸಿರುವುದು ಅಕ್ಷಮ್ಯ ಅಪರಾಧ. ಯಾವುದೇ ಧರ್ಮದವರಿರಲಿ ಈ ದೇಶದ ಕಾನೂನಿಗೆ ತಲೆ ಬಾಗಿಸಬೇಕು. ಇಂತಹ ಅತಿರೇಕದ ಹುಚ್ಚಾಟಗಳನ್ನು ಯಾರೂ ಪ್ರದರ್ಶಿಸಕೂಡದು. ಅವುಗಳನ್ನು ಸಹಿಸಲಾಗುವುದಿಲ್ಲ ಎಂದಿದ್ದಾರೆ.

ವಿರುದ್ಧ ಕಠಿಣ ಕಾನೂನು ಅಸ್ತ್ರ ಉಪಯೋಗಿಸಿ
ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಹಿಂದೆ ಹಲ್ಲೆ ಸಮರ್ಥಿಸಿಕೊಂಡಿದ್ದ ಮುಸ್ಲಿಂ ನಾಯಕರು
ಇದಕ್ಕೂ ಮೊದಲು ಆರಂಭದಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಆಶಾ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಹಲವು ಮುಸ್ಲಿಂ ಶಾಸಕರು, ಮಾಜಿ ಸಚಿವರು ಸಮರ್ಥಿಸಿಕೊಂಡಿದ್ದರು. ಆಶಾ ಕಾರ್ಯಕರ್ತರು ಎನ್ಆರ್ಸಿ ವಿವರಗಳನ್ನು ಕೇಳವು ಬಂದಿದ್ದಾರೆಂದು ಹಲ್ಲೆಗೆ ಯತ್ನ ನಡೆದಿದೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿಕೆ ಕೊಟ್ಟಿದ್ದರು. ಜೊತೆಗೆ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಕೂಡ ಹಲ್ಲೆ ಮಾಡಿಲ್ಲ ಎಂದಿದ್ದರು.
ಆರಂಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿಯೊಬ್ಬ ಸ್ಥಳ ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದರು.












Click it and Unblock the Notifications