Azaan Row : 'ಹಿಂದೂ ದೇವಸ್ಥಾನಗಳಲ್ಲಿ ಇಲ್ಲದ ಆಕ್ಷೇಪ ಮಸೀದಿ ಧ್ವನಿವರ್ಧಕಗಳ ಮೇಲೇಕೆ?'
ಬೆಂಗಳೂರು ಏಪ್ರಿಲ್ 5: ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲಿಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲ. ಹೀಗಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ.1/5
— H D Kumaraswamy (@hd_kumaraswamy) April 4, 2022
ರಾಜ್ಯದಲ್ಲಿ ಅಗತ್ಯ ವಸ್ತುಗಳ ಮೇಲಿನ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಹೈರಾಣಾಗಿದ್ದಾರೆ. ಜನಸಾಮಾನ್ಯರ ಆರ್ಥಿಕ ಸ್ಥಿತಿಗಳನ್ನ ಆಧರಿಸಿ ಬೆಲೆ ಏರಿಕೆಗೆ ಕಡಿವಾಣ ಹಾಕುವ ಬಗ್ಗೆ ಸರ್ಕಾರ ಚಿಂತಿಸುವುದನ್ನೇ ಮರೆತಂದಿದೆ. ಏಕೆಂದರೆ ಹಿಜಾಬ್ ಆಯ್ತು, ಹಲಾಲ್ ಕಟ್ ಆಯ್ತು, ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ನಿಷೇಧ ಆಯ್ತು ಈಗ ಮಸೀದ್ಗಳಲ್ಲಿ ಧ್ವನಿವರ್ಧಕಗಳ ನಿಷೇಧದ ಸರದಿ ಶುರುವಾಗಿದೆ. ಹೀಗೆ ಅಭಿವೃದ್ಧಿಯ ವಿಚಾರ ಬಿಟ್ಟು ರಾಜ್ಯದಲ್ಲಿ ಕೆಲಸಕ್ಕೆ ಬಾರದ ವಿಚಾರಗಳ ಬಗ್ಗೆ ಹೆಚ್ಚಾಗಿ ಚರ್ಚೆ ನಡೆಯುತ್ತಿರುವುದರ ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆಯಾಗಿದೆ: ವಿದ್ಯುತ್ ದರ ಏರಿಕೆ ಬಗ್ಗೆ HDK
ರಾಜ್ಯದಲ್ಲಿ ಮಸೀದಿಗಳಲ್ಲಿ ಧ್ವನಿವರ್ದಕಗಳ ನಿಷೇಧದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, 'ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಇವು. ಅದೇ ರೀತಿ ಊರಿನ ಸಿನಿಮಾ ಟೆಂಟಿನಲ್ಲಿ ರಾತ್ರಿಯ ಸೆಕೆಂಡ್ ಶೋ ಆರಂಭಕ್ಕೆ ಮುನ್ನ ಘಂಟಸಾಲ ಅವರು ಭಕ್ತಿಪರವಶರಾಗಿ ಹಾಡಿರುವ ʼನಮೋ ವೆಂಕಟೇಶ..ʼ ಎನ್ನುವ ಶ್ರೀ ವೆಂಕಟೇಶ್ವರ ಸ್ವಾಮಿಯವರ ಕೀರ್ತನೆಯನ್ನು ಧ್ವನಿವರ್ಧಕದಲ್ಲಿ ಕೇಳಿಸುತ್ತಿದ್ದನ್ನು ನನ್ನಂತೆಯೇ ಅನೇಕರು ಕೇಳಿರುತ್ತಾರೆ.
ಅಷ್ಟೇ ಅಲ್ಲ, ಸಂಜೆಯಾದರೆ ಇಡೀ ಊರಿನ ಜನರೆಲ್ಲ ಗುಡಿಯಲ್ಲಿ ಸೇರಿ ಭಜನೆ ಮಾಡುತ್ತಿದ್ದದ್ದು, ಕರತಾಳ ಹಿಡಿದು ರಾತ್ರಿ ಹತ್ತು ಗಂಟೆವರೆಗೂ ಭಗವಂತನ ಭಜನೆಯಲ್ಲಿ ಲೀನವಾಗುತ್ತಿದ್ದ ದಿನಗಳು ಇನ್ನೂ ನನ್ನ ಸ್ಮೃತಿಪಟಲದಲ್ಲಿ ಹಚ್ಚಹಸಿರಾಗಿವೆ. ನಾನೂ ಬಹಳ ಶ್ರದ್ಧೆಯಿಂದ ಭಜನೆಯಲ್ಲಿ ಪಾಲ್ಗೊಳ್ಳುತ್ತಿದ್ದೆ. ನಸುಕಿನಲ್ಲಿ ಸುಪ್ರಭಾತ & ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ. ಆದರೀಗ ಅದನ್ನು ತೆಗೆದು ಹಾಕುವಂತವ ಅವಶ್ಯಕತೆ ಏನಿದೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಮಸೀದಿಗಳಲ್ಲಿಮೈಕ್ ಬಳಕೆ: ಹೊಸ ಆದೇಶ ಹೊರಡಿಸಿಲ್ಲ ಎಂದ ಸಿಎಂ
ನಮ್ಮ ಮನೆಗಳಲ್ಲೂ ಬೆಳಗ್ಗೆಯೇ ಪೂಜೆ ನೆರೆವೇರಿಸಿ ಮಂಗಳಕರವಾದ ಘಂಟೆ ಭಾರಿಸುವುದನ್ನು ನಿತ್ಯವೂ ಕೇಳುತ್ತೇವೆ. ದೈವಕ್ಕೆ ಪ್ರಿಯವಾದ ಆ ಘಂಟೆಯ ಸದ್ದು ಯಾರಿಗೂ ಕಿರಿಕಿರಿ ಉಂಟು ಮಾಡಿಲ್ಲ. ಅದೂ ಅನಾದಿ ಕಾಲದಿಂದಲೂ ನಡೆದುಕೊಂಡೇ ಬಂದಿದೆ. ಅಲ್ಲದೆ, ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಭಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ ಎಂದು ಧ್ವನಿವರ್ದಕಗಳ ನಿಷೇಧ ಪ್ರಸ್ತಾಪದ ಬಗ್ಗೆ ಅವರು ಕಿಡಿ ಕಾರಿದ್ದಾರೆ.
ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲೀಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಅಗತ್ಯಬಿದ್ದರೆ, ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ ಎಂದು ಅವರು ಹೇಳಿದ್ದಾರೆ.
ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು. ದೇವಾಲಯಗಳಲ್ಲಿ ನಡೆಯುತ್ತಿದ್ದ ನಿತ್ಯ ಭಜನೆ, ಸುಪ್ರಭಾತ ವೇಳೆ ಕೇಳಿಬರುತ್ತಿದ್ದ ಶ್ಲೋಕ, ಕೀರ್ತನೆ, ಭಜನೆಗಳು ಕ್ರಮೇಣ ಕಣ್ಮರೆಯಾಗಿವೆ. ನಾವೆಲ್ಲರೂ ಸೇರಿ ಅವುಗಳ ಪುನರುದ್ಧಾರ ಮಾಡೋಣ. ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ ಎಂದಿದ್ದಾರೆ.
Recommended Video