ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಜನರೇ ನಿರ್ಣಯಿಸುತ್ತಾರೆ :ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಡಿಸೆಂಬರ್ 16: ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯವನ್ನು ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜನರೇ ತಿರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಗುರುವಾರ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರೆಯೇ ಎಂಬ ವಿಚಾರದಲ್ಲಿ ಜನರೇ ನಿರ್ಧಾರಿಸುತ್ತಾರೆ ಎಂದು ಉತ್ತರ ನೀಡಿದರು.
ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ. ನನಗೆ ನಿಖಿಲ್ ಅವರನ್ನು ಹೇಗಪ್ಪ ದಡ ಸೇರಿಸೋದು ಎಂಬ ಚಿಂತೆ ಇಲ್ಲ. ನನಗೆ ಇರೋದು ನಾಡಿನ ಜನರ ಚಿಂತೆ ಎಂದರು.

ಪಕ್ಷದ ಕಚೇರಿಯಲ್ಲಿಂದು ಹಾಕಿ ಶಾಸಕರು ಹಾಗೂ ಸಂಭವನೀಯ ಅಭ್ಯರ್ಥಿಗಳ ಸಭೆ ನಡೆಸಲಾಯಿತು. ಚುನಾವಣೆ ನಡೆಸುವ ಬಗೆ, ಸಾಮಾಜಿಕ ಜಾಲತಾಣಗಳ ಬಳಕೆ, ಪಂಚರತ್ನಗಳ ಪ್ರಚಾರ ಸೇರಿದಂತೆ ಇನ್ನು ಚುನಾವಣೆ ತನಕ ಹೇಗೆಲ್ಲಾ ಕೆಲಸ ಮಾಡಬೇಕು ಎಂಬ ಬಗ್ಗೆ ಕೆಲ ಮಹತ್ವದ ಮಾಹಿತಿ ಹಂಚಿಕೊಂಡಿದ್ದೇನೆ. ನಿಧಾನ ಗತಿಯಲ್ಲಿ ಕೆಲಸ ಮಾಡುತ್ತಿರುವ ಕೆಲವರಿಗೆ ಸ್ವಲ್ಪ ಖಾರವಾಗಿಯೇ ಕಿವಿಮಾತು ಹೇಳಿದ್ದೇನೆ ಎಂದು ತಿಳಿಸಿದರು.
ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿದ್ದೇವೆ
ಈ ಸಭೆಯಲ್ಲಿ ಅಗತ್ಯಬಿದ್ದರೆ ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡುತ್ತೇವೆ ಅಂತ ಎಚ್ಚರಿಕೆ ನೀಡಿದ್ದೇವೆ. ಈಗಾಗಲೇ ಮಾಜಿ ಪ್ರಧಾನಿ ದೇವೇಗೌಡರು ಕೂಡ ಇದೇ ಮಾತನ್ನು ಹೇಳಿದ್ದಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವ ಹಮ್ಮಿಕೊಂಡಿದ್ದೇವೆ. ಕಲ್ಯಾಣೋತ್ಸವ ಮುಗಿದ ನಂತರ 97 ರಿಂದ 116 ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ. ದೇವರ ಆಶೀರ್ವಾದ ಪಡೆದು ಪಟ್ಟಿಯನ್ನು ಬಿಡುಗಡೆ ಮಾಡುತ್ತವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ಪಂಚರತ್ನ ರಥಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. ಈಗಾಗಲೇ ಯಾತ್ರೆ ಮಾಡಿರುವ 19 ಕ್ಷೇತ್ರದಲ್ಲಿ ನಾವು 17 ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಇನ್ನು ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದರು ಅವರು.












Click it and Unblock the Notifications