ಶಾಲೆಗಳ ಆರಂಭ, ವಿದ್ಯಾರ್ಥಿಗಳು,ಶಿಕ್ಷಕರ ಮಾರಣಹೋಮಕ್ಕೆ ನಾಂದಿ ಹಾಡಿದಂತೆ: ಎಚ್ಡಿಕೆ
ಬೆಂಗಳೂರು, ನವೆಂಬರ್ 06: ಶಾಲೆ, ಕಾಲೇಜುಗಳ ಆರಂಭದ ಕುರಿತ ರಾಜ್ಯ ಸರ್ಕಾರ ಆತುರದ ನಿರ್ಧಾರಗಳನ್ನು ತೆಗೆದುಕೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮಾರಣಹೋಮಕ್ಕೆ ನಾಂದಿಹಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಶಾಲಾ, ಕಾಲೇಜುಗಳನ್ನು ತೆರೆಯುಬ ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಹೇಳಿರುವ ಅವರು ಸರಣಿ ಟ್ವೀಟ್ ಮಾಡಿದ್ದಾರೆ.
ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ.

ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಮತ್ತೊಮ್ಮೆ ಆಗ್ರಹಿಸುತ್ತೇನೆ.
ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್...ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು ಎಂದು ಹೇಳಿದ್ದಾರೆ.
ಆಂಧ್ರಪ್ರದೇಶದಲ್ಲಿ ಶಾಲೆ ಆರಂಭವಾಗಿ ಮೂರೇ ದಿನಗಳಲ್ಲಿ 260ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ತಗುಲಿದೆ. ಸರ್ಕಾರ ಜನಾಭಿಪ್ರಾಯ ಸಂಗ್ರಹಿಸಲು ಬಳಿಕ ಒಂದು ನಿರ್ಧಾರಕ್ಕೆ ಬರಲಿ.
ಆದರೆ ಶಾಲೆ, ಕಾಲೇಜುಗಳನ್ನು ಆರಂಭಿಸಿದರೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪ್ರಾಣದ ಜೊತೆ ಚೆಲ್ಲಾಟವಾಡಿದಂತಾಗುತ್ತದೆ ಎಂದರು.












Click it and Unblock the Notifications