ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಬಲಕ್ಕೆ ನಿಂತ ಮಾಜಿ ಸಿಎಂ ಕುಮಾರಸ್ವಾಮಿ!
ಬೆಂಗಳೂರು, ಆ. 09: ಹೊತ್ತಲ್ಲದ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿತ್ತು. ಜೊತೆಗೆ ಕೊರೊನಾವೈರಸ್ ಆರೋಗ್ಯ ತುರ್ತು ಪರಿಸ್ಥಿತಿಯೂ ಎದುರಿಗಿತ್ತು. ಆದರೆ ಪಂಚ ರಾಜ್ಯಗಳ ಚುನಾವಣೆ ನಡೆಸಿ ಕೊರೊನಾ ವೈರಸ್ನ್ನು ಮೈಮೇಲೆ ಎಳೆದುಕೊಂಡಂತೆ ಎಲ್ಲವೂ ಸರಿಯಾಗುತ್ತಿದೆ ಎನ್ನುವಾಗಲೇ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ನಿರ್ಧರಿಸಿ, ತಾನು ಅಂದುಕೊಂಡಂತೆ ಮುಖ್ಯಮಂತ್ರಿ ಬದಲಾಯಿಸಿತು.
ಆಡಳಿತ ಅನುಭವವಿದ್ದುದರಿಂದ ಕೊರೊನಾವೈರಸ್ ಸಂಕಷ್ಟವನ್ನು ಪರಿಣಾಮಕಾರಿಯಾಗಿ ಮುಖ್ಯಮಂತ್ರಿಯಾಗಿದ್ದಾಗಿ ಬಿ.ಎಸ್. ಯಡಿಯೂರಪ್ಪ ನಿರ್ವಹಿಸಿದ್ದರು. ಅದೇ ರೀತಿ ಏಕವ್ಯಕ್ತಿ ಸಂಪುಟದಲ್ಲಿ ರಾಜ್ಯಕ್ಕೆ ಎದುರಾಗಿದ್ದ ಪ್ರವಾಹ ಪರಿಸ್ಥಿತಿಯನ್ನೂ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿ ಎದುರಿಸಿದ್ದರು. ಅದಾದ ಬಳಿಕ 2020ರ ಮಾರ್ಚ್ ತಿಂಗಳಿನಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಯಿತು. ಆಗ ಉಳಿದ ಮಂತ್ರಿಗಳಿಗಿಂತ ಹೆಚ್ಚಾಗಿ ಬಿ.ಎಸ್. ಯಡಿಯೂರಪ್ಪ ಸಭೆಗಳ ಮೇಲೆ ಸಭೆ ಮಾಡಿ ಇಡೀ ಆಡಳಿತ ವ್ಯವಸ್ಥೆಯನ್ನು ಕೊರೊನಾ ನಿಯಂತ್ರಣದಲ್ಲಿ ತೊಡಗಿಸಿದ್ದರು. ಜೊತೆಗೆ ಬೆಂಗಳೂರು ತೊರೆದು ತಮ್ಮೂರಿನತ್ತ ಹೊರಟ್ಟಿದ್ದ ಜನರಿಗೆ ಮನವಿ ಮಾಡಿಕೊಂಡು ಬೆಂಗಳೂರಿನಲ್ಲಿಯೇ ಇರುವಂತೆ, ಹಳ್ಳಿಗೆ ಕೊರೊನಾ ಅಂಟಿಸದಂತೆಯೂ ಯಡಿಯೂರಪ್ಪ ಮನವಿ ಮಾಡಿದ್ದರು. ಇದೀಗ ಮತ್ತೆ ಕೊರೊನಾ ಸಂಕಷ್ಟ ಶುರುವಾಗಿದೆ. ಕೊರೊನಾ ಡೆಲ್ಟ್ ಆತಂಕ ಸೃಷ್ಟಿಸಿದೆ.
ಕೊರೊನಾ ವೈರಸ್ ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಹಾಗೂ ನೆರೆ ಪರಿಸ್ಥಿತಿಯಿಮದ ಆಗಿರುವ ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೆ ಪ್ರಯತ್ನಗಳನ್ನು ಶುರುಮಾಡಿದ್ದರು. ಅದಕ್ಕಾಗಿ ಪ್ರತಿಯೊಬ್ಬ ಮಂತ್ರಿಗೂ ಒಂದೊಂದು ಜಿಲ್ಲೆಯ ಉಸ್ತುವಾರಿ ಕೊಟ್ಟಿದ್ದರು. ಆದರೆ ಸಿಎಂ ಬೊಮ್ಮಾಯಿ ಮಾತನ್ನು ಉಳಿದ ಮಂತ್ರಿಗಳು ಕೇಳುತ್ತಿಲ್ಲವಾ? ಹೌದು ಎನ್ನುತ್ತಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ. ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಬೆಂಬಲಕ್ಕೆ ಮಾಜಿ ಸಿಎಂ ಎಚ್ಡಿಕೆ ನಿಂತಿರುವುದು ಕುತೂಹಲ ಮೂಡಿಸಿದೆ.
ಮಂತ್ರಿಗಳು ವಿಜಯೋತ್ಸವ ಆಚರಿಸುತ್ತಿದ್ದಾರೆ!
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಬೊಮ್ಮಾಯಿ ಬೆಂಬಲಕ್ಕೆ ನಿಂತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ಡಿಕೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಆಯಾ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ, ಕೊರೊನಾ ವೈರಸ್ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಹಳೆ ಚಾಳಿಯನ್ನು ಮುಂದುವರಿಸಿದ ಮಂತ್ರಿಗಳು
ಜೊತೆಗೆ ಬಿಜೆಪಿ ಹೈಕಮಾಂಡ್ ನಡೆಯನ್ನೂ ಮಾಜಿ ಸಿಎಂ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ. "ಬಿಜೆಪಿ ತನ್ನ ಇಮೇಜ್ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಛಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು ಎಂದು ನೂತನ ಸಚಿವರನ್ನು ಮಾಜಿ ಸಿಎಂ ಎಚ್ಡಿಕೆ ತರಾಟೆಗೆ ತೆಗೆದು ಕೊಂಡಿದ್ದಾರೆ.
ಮುಖ್ಯಮಂತ್ರಿ ಬದಲಾದರೂ ಸರ್ಕಾರ ಬದಲಾದ ಭಾವನೆ ಬರುತ್ತಿಲ್ಲ
ರಾಜ್ಯದ ಮುಖ್ಯಮಂತ್ರಿ ಬದಲಾದರೂ ಸರ್ಕಾರದ ವರ್ತನೆ ಬದಲಾಗಿರುವುದು ಕಂಡು ಬರುತ್ತಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. "ಹೊಸ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಮುಖ್ಯಮಂತ್ರಿ ಮಾತ್ರ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು" ಎಂದು ಎಚ್ಡಿಕೆ ಸೂಚಿಸಿದ್ದಾರೆ.
Recommended Video
ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಿಕ್ಕೆ ಅಲ್ಲ!
ಅವರಿಗೆಲ್ಲ ಮಂತ್ರಿ ಪದವಿ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ ಎಂದು ಕುಮಾರಸ್ವಾಮಿ ತಿಳಿಹೇಳಿದ್ದಾರೆ. "ರಾಜ್ಯದಲ್ಲಿ ಕೊರೊನಾ ವೈರಸ್ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಲ್ಲ. ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ" ಎಂದು ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಸಿ ಬುದ್ದಿ ಹೇಳಿದ್ದಾರೆ.
ಮುಖ್ಯಮಂತ್ರಿಯಾದ ತಕ್ಷಣ ಸಿಎಂ ಬದವರಾಜ ಬೊಮ್ಮಾಯಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದರು. ಆದ ಮಾಜಿ ಪ್ರಧಾನಿ ದೇವೇಗೌಡರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುವುದಾಗಿ ಹೇಳಿದ್ದರು. ಇದೇ ಸಂದರ್ಭದಲ್ಲಿ ಮಂತ್ರಿಗಳು ಸರಿಯಾಗಿನ ಕೆಲಸ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿರುವುದು ಕುತೂಹಲ ಮೂಡಿಸಿದೆ.