ನಾಳೆ ಮಂಡ್ಯ ಬಂದ್: ರೈತರ ಹೋರಾಟಕ್ಕೆ ಕುಮಾರಸ್ವಾಮಿ ಬೆಂಬಲ
ಬೆಂಗಳೂರು, ಸೆಪ್ಟೆಂಬರ್ 22: ತಮಿಳುನಾಡಿಗೆ ರಾಜ್ಯ ಕಾಂಗ್ರೆಸ್ ಸರಕಾರ ಕಾವೇರಿ ನೀರು ಹರಿಸುತ್ತಿರುವುದನ್ನು ಪ್ರತಿಭಟಿಸಿ ಮಂಡ್ಯ ಜಿಲ್ಲೆಯ ಜನರು ನಡೆಸುತ್ತಿರುವ ಬಂದ್ ಗೆ ತಮ್ಮ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ನವದೆಹಲಿಯಿಂದಲೇ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶನಿವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ತಾವು ವಾಪಸ್ಸಾಗಲಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೇ ನೇರವಾಗಿ ಮಂಡ್ಯಕ್ಕೆ ತೆರಳುವುದಾಗಿ ಹೇಳಿದ್ದಾರೆ.

ಸರಕಾರದ ತಪ್ಪಿನಿಂದ ರಾಜ್ಯದ ಜನರು ದೊಡ್ಡ ಪ್ರಮಾಣದ ಜಲ ಸಂಕಷ್ಟಕ್ಕೆ ತುತ್ತಾಗಲಿದ್ದಾರೆ. ಈಗಾಗಲೇ ಭೀಕರ ಜಲಕ್ಷಾಮದ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ. ಆದರೂ ಸರಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ. ಹಿಗಾಗಿ ಜನರು ಹೋರಾಟಕ್ಕೆ ಮುಂದಾಗಿದ್ದಾರೆ. ಜನರ ಜೊತೆ ನಿಲ್ಲುವುದು ನನ್ನ ಕರ್ತವ್ಯ. ಹೀಗಾಗಿ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ತಿಳಿಸಿದ್ದಾರೆ.
ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸೆ.23ರಂದು ಮಂಡ್ಯ ಬಂದ್ಗೆ ಕರೆ ನೀಡಿದೆ.
ನಗರದ ಸರ್ಎಂವಿ ಪ್ರತಿಮೆ ಮುಂದೆ ಈಗಾಗಲೇ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಧರಣಿ ಸ್ಥಳದಲ್ಲೇ ಸಮಿತಿ ಪದಾಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ ನಡೆಸಿ ಮಂಡ್ಯ ಬಂದ್ಗೆ ಕರೆ ನೀಡುವುದು ಸೇರಿದಂತೆ 6 ಪ್ರಮುಖ ನಿರ್ಣಯಗಳನ್ನು ಕೈಗೊಂಡಿದೆ.
ಗುರುವಾರ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಲಾಯಿತು. ಜಲಾಶಯದ ನೀರಿನ ಮಟ್ಟವು ಈಗಾಗಲೇ 97 ಅಡಿಗೆ ಕುಸಿದಿದೆ. ಬೆಳೆದು ನಿಂತಿರುವ ಬೆಳಗಳನ್ನೇ ರಕ್ಷಿಸಿಕೊಳ್ಳಲಾಗುತ್ತಿದೆ. ಕಟ್ಟೆಯಲ್ಲಿ ಸಂಗ್ರಹವಾಗಿರುವ ನೀರು ಯಾವುದಕ್ಕೂ ಸಾಲದಾಗಿದೆ. ಬೇಸಿಗೆಗೂ ಮುನ್ನವೇ ಇನ್ನೆರಡು ತಿಂಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಲಕ್ಷಣಗಳು ಗೋಚಿಸುತ್ತಿರುವೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.












Click it and Unblock the Notifications