Breaking; ಬೀದರ್ನಲ್ಲಿ ಬಿಜೆಪಿ ನಾಯಕನ ಜೊತೆ ಕುಮಾರಸ್ವಾಮಿ ಮಾತುಕತೆ!
ಮಲ್ಲಿಕಾರ್ಜುನ ಖೂಬಾ ಜೊತೆ ಎಚ್. ಡಿ. ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿತ್ತು.
ಬೆಂಗಳೂರು, ಫೆಬ್ರವರಿ 08; ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳಲ್ಲಿ ಗೆಲ್ಲುವ ಗುರಿಯೊಂದಿಗೆ ಜೆಡಿಎಸ್ ಪಕ್ಷ ತಂತ್ರಗಾರಿಕೆ ರೂಪಿಸುತ್ತಿದೆ. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದಲ್ಲಿಯೂ ಹೆಚ್ಚು ಸೀಟುಗಳನ್ನು ಗೆಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಯತ್ನ ನಡೆಸಿದ್ದಾರೆ.
ಬೀದರ್ ಜಿಲ್ಲೆಯ ಮೇಲೆ ಎಚ್. ಡಿ. ಕುಮಾರಸ್ವಾಮಿ ಕಣ್ಣಿಟ್ಟಿದ್ದಾರೆ. ಪಕ್ಷದಿಂದ ಎರಡು ಬಾರಿ ಗೆಲುವು ಸಾಧಿಸಿದ್ದ ನಾಯಕನನ್ನು ಮತ್ತೆ ಪಕ್ಷಕ್ಕೆ ಕರೆತರಲು ಅವರು ಮಾತುಕತೆ ನಡೆಸಿದ್ದಾರೆ. ಇದು ಜಿಲ್ಲಾ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಮಲ್ಲಿಕಾರ್ಜುನ ಖೂಬಾ ಜೊತೆ ಎಚ್. ಡಿ. ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎರಡು ಬಾರಿ ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಖೂಬಾ 2018ರ ಚುನಾವಣೆಯಲ್ಲಿ ಬಸವಕಲ್ಯಾಣದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 44,153 ಮತಗಳನ್ನು ಪಡೆದು ಕಾಂಗ್ರೆಸ್ನ ಬಿ. ನಾರಾಯಣ ರಾವ್ ವಿರುದ್ಧ ಸೋಲು ಕಂಡಿದ್ದರು.

ಶಾಸಕ ಬಿ. ನಾರಾಯಣ ರಾವ್ ಅಕಾಲಿಕ ನಿಧನದ ಬಳಿಕ ಬಸವಕಲ್ಯಾಣ ಕ್ಷೇತ್ರಕ್ಕೆ 2021ರಲ್ಲಿ ಉಪ ಚುನಾವಣೆ ಎದುರಾಯಿತು. ಆಗಲೂ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಟಿಕೆಟ್ ಬಯಸಿದರು. ಆದರೆ ಪಕ್ಷ ಶರಣು ಸಲಗರಗೆ ಟಿಕೆಟ್ ನೀಡಿತು. ಅಸಮಾಧಾನಗೊಂಡ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು.
ಬಿಜೆಪಿ ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಸ್ವಾಭಿಮಾನಕ್ಕೆ ಮತ ನೀಡಿ ಎಂದು ಮಲ್ಲಿಕಾರ್ಜುನ ಖೂಬಾ ಜನರ ಮುಂದೆ ಹೋದರು. ಆದರೆ ಉಪ ಚುನಾವಣೆಯಲ್ಲಿ ಶರಣು ಸಲಗರ 20,629 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
ಮಲ್ಲಿಕಾರ್ಜುನ ಖೂಬಾ ಉಪ ಚುನಾವಣೆಯಲ್ಲಿ 9,475 ಮತಗಳನ್ನು ಪಡೆದು ಸೋಲು ಕಂಡರು. ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ 50,108 ಮತ ಪಡೆದರು. ಪತಿಯ ಸಾವಿನ ಅನುಕಂಪ ಉಪ ಚುನಾವಣೆಯಲ್ಲಿ ಕೆಲಸ ಮಾಡಲಿಲ್ಲ. ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ 11,390 ಮತ ಪಡೆದರು.
ಈಗ ಪುನಃ ಮಲ್ಲಿಕಾರ್ಜುನ ಖೂಬಾರನ್ನು ಪಕ್ಷಕ್ಕೆ ಕರೆತಂದು ಅಭ್ಯರ್ಥಿ ಮಾಡಲು ಎಚ್. ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಇದರ ಭಾಗವಾಗಿಯೇ ಅವರ ಜೊತೆ ಮಾತನಾಡಿದ್ದಾರೆ.












Click it and Unblock the Notifications