ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಲಿರುವ ನಿಯೋಜಿತ ಸಿಎಂ ಕುಮಾರಸ್ವಾಮಿ
ಬೆಂಗಳೂರು, ಮೇ 20 :ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಭಾನುವಾರ (ಮೇ 20) ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕುಮಾರಸ್ವಾಮಿ, ಸೋಮವಾರ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಾಗೂ ಮಂತ್ರಿಮಂಡಲ ಕುರಿತು ಚರ್ಚೆ ನಡೆಸಲಿದ್ದೇನೆ ಎಂದಿದ್ದಾರೆ.
ರಾಜೀವ್ ಗಾಂಧಿ ಪುಣ್ಯ ತಿಥಿ: ಕುಮಾರಸ್ವಾಮಿ ಪ್ರಮಾಣ ವಚನ ಮುಂದೂಡಿಕೆ
ಕಾಂಗ್ರೆಸ್ ಹೈಕಮಾಂಡಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲಿದ್ದೇನೆ ಎಂದು ಹೇಳಿರುವ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದ್ದಾರೆ.
ತಮಿಳುನಾಡಿನ ತಿರುಚ್ಚಿಯ ಶ್ರೀರಂಗಂ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದೇವೆ, ನಂತರ ಶೃಂಗೇರಿಗೆ ತೆರಳಿ ಶಾರದಾಂಬೆಯ ದರ್ಶನ ಪಡೆದು, ನಾಳೆ ಬೆಳಗ್ಗೆ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದರು.
ಕುಮಾರಸ್ವಾಮಿಯ ಜೆ ಪಿ ನಗರದ ನಿವಾಸದಲ್ಲಿ ಭಾವೀ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ಅಭಿನಂದನೆ ಸಲ್ಲಿಸಿದರು. ಬಳಿಕ ಲಿ ಮೆರಿಡಿಯನ್ ಹೊಟೇಲ್ ಗೆ ತೆರಳಿ ಜೆಡಿಎಸ್ ಶಾಸಕರು, ಮುಖಂಡರ ಜೊತೆ ಕುಮಾರಸ್ವಾಮಿ ಚರ್ಚೆ ನಡೆಸಿದರು.
ರಾಹುಲ್ ಸೇರಿದಂತೆ ಕುಮಾರಣ್ಣನ ಪ್ರಮಾಣಕ್ಕೆ ಗಣ್ಯಾತಿಗಣ್ಯರ ಆಗಮನ
ಖಾತೆ ಹಂಚಿಕೆ ಬಗ್ಗೆ ಇವತ್ತು ರಾತ್ರಿ ಸಭೆ ಮಾಡುತ್ತೇವೆ, ಚರ್ಚೆ ಮಾಡಿ ಅಂತಿಮ ಮಾಡಲಿದ್ದೇವೆ. ಮತ್ತೆ ಆಪರೇಷನ್ ಕಮಲ ಮಾಡಲು ಬಿಜೆಪಿ ಮುಂದಾಗಿದೆ, ಹೀಗಾಗಿ ಎಲ್ಲರೂ ಒಟ್ಟಿಗೆ ನಾವು ಇರುತ್ತೇವೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕುದುರೆ ವ್ಯಾಪರ ಮಾಡೋದಕ್ಕೆ ನಾವು ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಭಾನುವಾರ ಸಂಜೆ 4ಗಂಟೆಗೆ ಶ್ರೀರಂಗಂ ದೇವಸ್ಥಾನಕ್ಕೆ ಸಹೋದರ ರೇವಣ್ಣ ಜೊತೆ ತೆರಳಲಿದ್ದಾರೆ.