ನ.7ರಿಂದ ಎಚ್ಡಿಕೆ ರಾಜ್ಯ ಪ್ರವಾಸ, ಗ್ರಾಮ ವಾಸ್ತವ್ಯ ಆರಂಭ
ಬೆಂಗಳೂರು, ನವೆಂಬರ್ 3 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ರಾಜ್ಯ ಪ್ರವಾಸ ನವೆಂಬರ್ 7ರಿಂದ ಆರಂಭವಾಗಲಿದೆ. ಹೆಚ್.ಡಿ.ಕೋಟೆ ಶಾಸಕ ಚಿಕ್ಕಮಾದು ಅವರ ನಿಧನದ ಹಿನ್ನಲೆಯಲ್ಲಿ ನ.3ರಿಂದ ಆರಂಭವಾಗಬೇಕಿದ್ದ ರಾಜ್ಯ ಪ್ರವಾಸವನ್ನು ಮುಂದೂಡಲಾಗಿತ್ತು.
ಬೆಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದರು. 'ನವೆಂಬರ್ 7ರಂದು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಮಾವೇಶ ನಡೆಸುವ ಮೂಲಕ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಲಾಗುತ್ತದೆ' ಎಂದರು.

ಮೈಸೂರಿನಿಂದ ಚಿಕ್ಕಮಗಳೂರು ಜಿಲ್ಲೆಗೆ ಪ್ರಯಾಣ ಮಾಡಲಿದ್ದು, ಜಿಲ್ಲೆಯ ಗ್ರಾಮವೊಂದರಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ನವೆಂಬರ್ 8ರಂದು ಶಿವಮೊಗ್ಗದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂವರು ಶಾಸಕರು ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ನವೆಂಬರ್ 8ರಂದು ಸಮಾರೋಪ ಸಮಾರಂಭ ನಡೆಯಲಿದೆ.
ಶಿವಮೊಗ್ಗದಲ್ಲಿ ಪಾದಯಾತ್ರೆ, ಸಮಾವೇಶ ಮಗಿಸಿದ ಬಳಿಕ ಕುಮಾರಸ್ವಾಮಿ ಅವರು ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ನಂತರ ನವೆಂಬರ್ 9ರಂದು ಚನ್ನಗಿರಿ ಮತ್ತು ದಾವಣಗೆರೆಗೆ ಭೇಟಿ ನೀಡಲಿದ್ದಾರೆ.
ನವೆಂಬರ್ 13ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಯಚೂರು ಭಾಗದಿಂದ ಕಾರ್ಯಕರ್ತರು ಬೈಕ್ ಜಾಥಾ ಮೂಲಕ ಬೆಳಗಾವಿ ಸಮಾವೇಶಕ್ಕೆ ಆಗಮಿಸಲಿದ್ದಾರೆ. ಈ ಸಮಾವೇಶದಲ್ಲಿ ದೇವರಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಜೆಡಿಎಸ್ ಪಕ್ಷ ಸೇರಲಿದ್ದಾರೆ.
ಚಿತ್ರಗಳು: ರಾಜ್ಯದಲ್ಲಿ ಹೊಸ ಅಲೆ ಎಬ್ಬಿಸಲಿರುವ ಬಿಜೆಪಿಯ ಪರಿವರ್ತನಾ ಯಾತ್ರೆ
ನವೆಂಬರ್ 14ರಿಂದ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನದಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.











Click it and Unblock the Notifications