ಯಡಿಯೂರಪ್ಪ ಟೀಕೆಗೆ ಟ್ವಿಟರ್ನಲ್ಲಿ ಉತ್ತರ ಕೊಟ್ಟ ಕುಮಾರಸ್ವಾಮಿ
Recommended Video
ಬೆಂಗಳೂರು, ಏಪ್ರಿಲ್ 30 : ರಾಜ್ಯವು ಬರದಿಂದ ತತ್ತರಿಸುವಾಗ ಸರ್ಕಾರ ಮೋಜು ಮಸ್ತಿಯಲ್ಲಿ ಮೈಮರೆತಿದೆ ಎಂಬ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಟೀಕೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಯಡಿಯೂರಪ್ಪ ಹೇಳಿಕೆ ಹಾಸ್ಯಸ್ಪದ. ಕೇವಲ ಸುದ್ದಿಗಾಗಿ ಇಂತಹ ಹೇಳಿಕೆ ನೀಡುವ ಪ್ರವೃತ್ತಿಯನ್ನು ಕೈ ಬಿಡುವುದು ಒಳಿತು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ಗಳನ್ನು ಮಾಡಿದ್ದು, 'ಕಾಮಗಾರಿಗಳ ಟೆಂಡರ್ ಕರೆಯಲು ಅನುಮತಿ ನೀಡಬಾರದು ಎಂದು ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವವರು ಯಾರು?' ಎಂದು ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರು ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಆಯುರ್ವೇದ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸೋಮವಾರದಿಂದ 5 ದಿನಗಳ ಕಾಲ ಅವರು ಚಿಕಿತ್ಸೆ ಪಡೆಯಲಿದ್ದು, ಇದನ್ನು ಯಡಿಯೂರಪ್ಪ ಟೀಕಿಸಿದ್ದರು. ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಿಕೆ ಮಾಡಬಾರದು ಎಂದು ಯಡಿಯೂರಪ್ಪ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.
|
ಮಾಡಿರುವ ಟೀಕೆ ಹಾಸ್ಯಾಸ್ಪದ
ಮಾನ್ಯ ವಿರೋಧ ಪಕ್ಷದ ನಾಯಕರು ಮಾಡಿರುವ ಟೀಕೆ ಹಾಸ್ಯಾಸ್ಪದ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಕರೆಯಲು ಅನುಮತಿ ನೀಡಬಾರದು ಎಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವವರು ಯಾರು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
|
ಇಬ್ಬಗೆ ನೀತಿ ಪ್ರತಿಬಿಂಬಿಸುತ್ತದೆ
ಈ ರೀತಿ ಟೀಕೆ ಮಾಡಿರುವುದು ಅವರ ನಿರಂತರ ಇಬ್ಬಗೆ ನೀತಿಯನ್ನು ಪ್ರತಿಬಿಂಬಿಸುತ್ತದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಮುಖ್ಯ ಕಾರ್ಯದರ್ಶಿಗಳು ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
|
ಅಗತ್ಯ ಸೂಚನೆ ನೀಡಿದ್ದೇನೆ
ರಾಜ್ಯಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಅಧಿಕಾರಿಗಳಿದ್ದು ಅವರು ಈ ಅವಧಿಯಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿದ್ದಾರೆ. ಬರ ಪರಿಹಾರ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಕಾರ್ಯದರ್ಶಿಗಳು ನಿಯಮಿತವಾಗಿ ಮಾಹಿತಿಯನ್ನೂ ನೀಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
|
ಸುದ್ದಿಗಾಗಿ ಇಂತಹ ಹೇಳಿಕೆ
ಮಾಧ್ಯಮಗಳಲ್ಲಿ ಈ ಕುರಿತು ಪ್ರಕಟವಾಗಿರುವ ವರದಿಗಳನ್ನು ಯಡಿಯೂರಪ್ಪ ಅವರು ಗಮನಿಸಿಲ್ಲ ಎನಿಸುತ್ತದೆ. ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ ಪ್ರವರ್ಧಮಾನಕ್ಕೆ ಬರುತ್ತಿದ್ದು ಅಂತಹ ಒಂದು ಕೇಂದ್ರದಲ್ಲಿ ನಾನು ಚಿಕಿತ್ಸೆ ಪಡೆಯುತ್ತಿದ್ದು, ಯಡಿಯೂರಪ್ಪ ನವರು ಕೇವಲ ಸುದ್ದಿಗಾಗಿ ಇಂತಹ ಹೇಳಿಕೆಗಳನ್ನು ನೀಡುವ ಪ್ರವೃತ್ತಿಯನ್ನು ಕೈಬಿಡುವುದು ಒಳಿತು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.











Click it and Unblock the Notifications