ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ; ಎಚ್ಡಿಕೆ ಎಚ್ಚರಿಕೆ
ಬೆಂಗಳೂರು, ಜನವರಿ 04; ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ವಾರ್ ಮುಂದುವರೆದಿದೆ. ರಾಮನಗರದಲ್ಲಿ ಸೋಮವಾರ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಸರಣಿ ಟ್ವೀಟ್ ಮಾಡಿದ್ದಾರೆ.
ಮಂಗಳವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, "ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ" ಎಂದು ಎಚ್ಚರಿಕೆ ನೀಡಿದ್ದಾರೆ. "ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ" ಎಂದು ಹೇಳಿದ್ದಾರೆ.
"ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು" ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಟ್ವೀಟ್ ಮಾಡಿದ್ದಾರೆ.

Recommended Video
"ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ" ಎಂದು ಕುಮಾರಸ್ವಾಮಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ ಕುಮಾರಸ್ವಾಮಿ, "ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ 'ಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ?" ಎಂದು ಪ್ರಶ್ನಿಸಿದ್ದಾರೆ.
ರಾಮನಗರದಲ್ಲಿ ಗಲಾಟೆ; ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಮನಗರಕ್ಕೆ ಭೇಟಿ ನೀಡಿದ್ದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಯಕ್ರಮ ನಡೆಯುವಾಗ ವೇದಿಕೆ ಮೇಲೆಯೇ ಗಲಾಟೆ ನಡೆದಿತ್ತು.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಭಾಷಣ ಮಾಡುವಾಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ಮತ್ತು ಅಶ್ವತ್ಥ ನಾರಾಯಣ ನಡುವೆ ಮಾತಿನ ಚಕಮಕಿ ನಡೆದಿತ್ತು. ಭಾಷಣ ಮಾಡುವಾಗ ಮೈಕ್ ಕಸಿದುಕೊಂಡು, ಹಲ್ಲೆ ಮಾಡಲು ಪ್ರಯತ್ನ ನಡೆಸಲಾಗಿತ್ತು.
ಈ ವಿಚಾರ ರಾಜ್ಯ ರಾಜಕೀಯದಲ್ಲಿ ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಎಚ್. ಡಿ. ಕುಮಾರಸ್ವಾಮಿ ಮತ್ತು ಡಿಕೆಶಿ ಸಹೋದರರ ತವರು ಜಿಲ್ಲೆ ರಾಮನಗರ ಮುಖ್ಯಮಂತ್ರಿಗಳ ಮುಂದೆಯೇ ಡಿ. ಕೆ. ಸುರೇಶ್ ರೌದ್ರಾವತಾರಕ್ಕೆ ಹಲವಾರು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿದ್ದ ಎಚ್. ಡಿ. ಕುಮಾರಸ್ವಾಮಿ, "ರಾಮನಗರದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದು ನಾನುಕ ವೇದಿಕೆ ಮೇಲೆ ಕಾಂಗ್ರೆಸ್, ಬಿಜೆಪಿ ನಾಯಕರು ಕಚ್ಚಾಡುತ್ತಿದ್ದಾರೆ" ಎಂದು ಹೇಳಿದ್ದರು.
"ರಾಮನಗರ ಜಿಲ್ಲೆ ಮಾಡಿದ್ದು ನಾನು. 2006ರಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಹೈಟೆಕ್ ಆಸ್ಪತ್ರೆ, ನರ್ಸಿಂಗ್ ಕಾಲೇಜು ನಿರ್ಮಾಣಕ್ಕೆ ಚಾಲನೆ ಕೊಟ್ಟು ಹಣ ಬಿಡುಗಡೆ ಮಾಡಿದ್ದೆ. ಬಿಜೆಪಿ ಸರ್ಕಾರದಿಂದ ಕೆಲಸ ನಡೆಯಲಿಲ್ಲ. ಕಾಂಗ್ರೆಸ್ ಸರ್ಕಾರ ಸಹ ಏನೂ ಮಾಡಲಿಲ್ಲ" ಎಂದು ಆರೋಪಿಸಿದ್ದರು.
ಡಾ. ಸಿ. ಎನ್. ಅಶ್ವತ್ಥ ನಾರಾಯಣ ಟ್ವೀಟ್ ಮಾಡಿ, "ನಮ್ಮ ರಾಮನಗರದಲ್ಲಿ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯ ನೋಡಿ ಸಹಿಸಲಾಗದ ಕಾಂಗ್ರೆಸ್ ನಾಯಕರು, ಬೆಂಬಲಿಗರು ಮುಖ್ಯಮಂತ್ರಿಗಳು ಆಗಮಿಸಿದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಮರೆತು ಗೂಂಡಾಗಳಂತೆ ವರ್ತಿಸಿದ್ದು ಅಕ್ಷಮ್ಯ" ಎಂದು ಹೇಳಿದ್ದರು.
ಮಂಗಳವಾರ ಇದೇ ಗಲಾಟೆ ಮುಂದಿಟ್ಟುಕೊಂಡು ಎಚ್. ಡಿ. ಕುಮಾರಸ್ವಾಮಿ ಡಿಕೆಶಿ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ಕಾಂಗ್ರೆಸ್ ಮೇಕೆದಾಟು ಯೋಜನೆ ಬಗ್ಗೆ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.












Click it and Unblock the Notifications