Breaking; ಕೃಷ್ಣ ಬೈರೇಗೌಡರ ಬಗ್ಗೆ ತಪ್ಪು ತಿಳಿದಿದ್ದ ಎಚ್ಡಿಕೆ!
ಬೆಂಗಳೂರು, ಜನವರಿ 10; "ಶ್ರೀ ಕೃಷ್ಣ ಬೈರೇಗೌಡರ ಅವರು ಬಹಳ ತಿಳಿವಳಿಕೆ ಉಳ್ಳವರು ಎಂದು ಭಾವಿಸಿದ್ದೆ. ಅವರ ಕುರಿತ ನನ್ನ ಅಭಿಪ್ರಾಯ ತಪ್ಪೆಂದು ಎನಿಸಿತು" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಎಚ್. ಡಿ. ಕುಮಾರಸ್ವಾಮಿ ಮಂಗಳವಾರ ಟ್ವೀಟ್ ಮಾಡಿ ಕೋಲಾರದಲ್ಲಿ ಸೋಮವಾರ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕೃಷ್ಣ ಬೈರೇಗೌಡ ನೀಡಿರುವ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'5 ವರ್ಷ ಸರಕಾರ ಮಾಡಿ ಎತ್ತಿನಹೊಳೆ ಹೆಸರಿನಲ್ಲಿ ಕೊಳ್ಳೆ ಹೊಡೆದ ಗಿರಾಕಿಗಳು, ಆ ನಂತರ ಕೆಸಿ ವ್ಯಾಲಿಯ ವಿಷನೀರು ಹರಿಸಿ, ಈಗ ಚುನಾವಣೆ ಹೊತ್ತಿನಲ್ಲಿ ಕಾವೇರಿ ಎಂದು ಸುಳ್ಳು ಹೇಳುವುದು ಎಷ್ಟು ಸರಿ?. ಒಮ್ಮೆ ಯೋಚನೆ ಮಾಡಿ ಕೃಷ್ಣಭೈರೇಗೌಡರೇ? ಮತ ಬೇಕಾದಾಗ ಮನಃಸಾಕ್ಷಿಯನ್ನು ಮಾರಿಕೊಳ್ಳುವುದು ನಿಮಗೆ ಶೋಭೆಯಲ್ಲ' ಎಂದು ಹೇಳಿದ್ದಾರೆ.
ಶ್ರೀ @krishnabgowda ಅವರು ಬಹಳ ತಿಳಿವಳಿಕೆ ಉಳ್ಳವರು ಎಂದು ಭಾವಿಸಿದ್ದೆ. ನನ್ನಂತೆ ಅವರು ಹಳ್ಳಿಯಲ್ಲಿ ಕಲಿಯದೆ ವಿದೇಶದಲ್ಲಿ ಕಲಿತವರು. ಅವರ ಜ್ಞಾನದ ಪರಿಧಿ ದೊಡ್ಡದು ಎಂದು ತಿಳಿದಿದ್ದೆ. ಕೋಲಾರದಲ್ಲಿ ನಿನ್ನೆ ಅವರು ಕೊಟ್ಟ ಹೇಳಿಕೆ ಗಮನಿಸಿದ ಮೇಲೆ ಅವರ ಕುರಿತ ನನ್ನ ಅಭಿಪ್ರಾಯ ತಪ್ಪೆಂದು ಎನಿಸಿತು.1/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 10, 2023

'ನೈಟ್ರೇಟ್, ಪಾಸ್ಪರಸ್, ಸೀಸ ಸೇರಿ ಬೆಂಗಳೂರು ಜನರ ಮಲಮೂತ್ರಗಳೇ ತುಂಬಿರುವ ಕೊಳಚೆ ನೀರನ್ನು 3ನೇ ಹಂತದಲ್ಲಿ ಸಂಸ್ಕರಿಸದೆ ಕೋಲಾರಕ್ಕೆ ಹರಿಸಿದ್ದೇ ಮಹಾಪಾಪ.ಇಷ್ಟು ದಿನ ಅದನ್ನೇ ಪುಣ್ಯತೀರ್ಥ ಎಂದು ಡಂಗುರ ಹೊಡೆದವರು ನಿನ್ನೆ ಕೋಲಾರದಲ್ಲಿ 3ನೇ ಹಂತದ ಸಂಸ್ಕರಣೆ ಬಗ್ಗೆ ಹೇಳಿ ಕಾವೇರಿ ಬಗ್ಗೆ ಬೊಗಳೆ ಬಿಡುತ್ತೀರಲ್ಲ,ಸ್ವಲ್ಪವಾದರೂ ಸಂಕೋಚ ಬೇಡವೇ?' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, 'ಶ್ರೀ @krishnabgowda ಅವರು ಬಹಳ ತಿಳಿವಳಿಕೆ ಉಳ್ಳವರು ಎಂದು ಭಾವಿಸಿದ್ದೆ. ನನ್ನಂತೆ ಅವರು ಹಳ್ಳಿಯಲ್ಲಿ ಕಲಿಯದೆ ವಿದೇಶದಲ್ಲಿ ಕಲಿತವರು. ಅವರ ಜ್ಞಾನದ ಪರಿಧಿ ದೊಡ್ಡದು ಎಂದು ತಿಳಿದಿದ್ದೆ. ಕೋಲಾರದಲ್ಲಿ ನಿನ್ನೆ ಅವರು ಕೊಟ್ಟ ಹೇಳಿಕೆ ಗಮನಿಸಿದ ಮೇಲೆ ಅವರ ಕುರಿತ ನನ್ನ ಅಭಿಪ್ರಾಯ ತಪ್ಪೆಂದು ಎನಿಸಿತು' ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ; ಇನ್ನು ಕೋಲಾರ ಕ್ಷೇತ್ರದಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಸೋಮವಾರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು ಎತ್ತಿನಹೊಳೆ ಯೋಜನೆ ಬಗ್ಗೆ ಮಾತನಾಡಿದ್ದಾರೆ.
"ನಾವು ಕೆ. ಸಿ. ವ್ಯಾಲಿ ಯೋಜನೆಗೆ 1,400 ಕೋಟಿ ಅನುದಾನ ನೀಡಿ, ಜಾರಿ ಮಾಡಿದ್ದೆವು, ಎನ್. ಸಿ . ವ್ಯಾಲಿ ಯೋಜನೆ ಜಾರಿ ಮಾಡಿದ್ದೆವು. ಎತ್ತಿನಹೊಳೆ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿ ಭೂಮಿ ಪೂಜೆ ಮಾಡಿದ್ದು ನಮ್ಮ ಕಾಲದಲ್ಲಿ. ಮತ್ತೆ ನಾವೇ ಅಧಿಕಾರಕ್ಕೆ ಬಂದಿದ್ದರೆ ಈ ಯೋಜನೆಯನ್ನು ಪೂರ್ಣಗೊಳಿಸುತ್ತಿದ್ದೆವು" ಎಂದರು.
"ಮುಂದೆ ನಾವು ಮತ್ತೆ ಅಧಿಕಾರಕ್ಕೆ ಬಂದರೆ 2 ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸಲು ಬದ್ಧರಿದ್ದೇವೆ. ಈಗ ಅದರ ಯೋಜನಾ ವೆಚ್ಚ 24,000 ಕೋಟಿ ಆಗಿದೆ, ಅದನ್ನು ಖರ್ಚು ಮಾಡಲು ತಯಾರಿದ್ದೇವೆ" ಎಂದು ಭರವಸೆ ನೀಡಿದರು.
"ಮೊನ್ನೆ ವಿಜಯಪುರದಲ್ಲಿ ನಡೆದ ಸಮಾವೇಶದಲ್ಲಿ ಪಕ್ಷ ಘೋಷಣೆ ಮಾಡಿದಂತೆ ಮುಂದಿನ 5 ವರ್ಷಗಳಲ್ಲಿ 2 ಲಕ್ಷ ಕೋಟಿ ಹಣವನ್ನು ಖರ್ಚು ಮಾಡಿ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ, ರೈತರ ಜಮೀನಿಗೆ ನೀರು ಕೊಡುವ ಕೆಲಸ ಮಾಡುತ್ತೇವೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications