ಭವಾನಿಪುರ ಉಪ ಚುನಾವಣೆ; ಫಲಿತಾಂಶದ ಬಗ್ಗೆ ಎಚ್ಡಿಕೆ ಭವಿಷ್ಯ!
ಬೆಂಗಳೂರು, ಸೆಪ್ಟೆಂಬರ್ 22; ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. "ಇತಿಹಾಸ ಸೃಷ್ಟಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ.
ಬುಧವಾರ ಎಚ್. ಡಿ. ಕುಮಾರಸ್ವಾಮಿ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕುರಿತು ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉಪ ಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಗೆದ್ದು ಸರ್ಕಾರ ರಚನೆ ಮಾಡಿದೆ. ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ನಂದಿಗ್ರಾಮದಲ್ಲಿ ಚುನಾವಣೆಯಲ್ಲಿ ಸೋಲು ಕಂಡ ಅವರು ನವೆಂಬರ್ 5ರೊಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ.
ಮಮತಾ ಬ್ಯಾನರ್ಜಿ ವಿಧಾನಸಭೆಗೆ ಆಯ್ಕೆಯಾಗಬೇಕು ಎಂದು ಹಿಂದಿನ ಚುನಾವಣೆಯಲ್ಲಿ ಭವಾನಿಪುರದಲ್ಲಿ ಗೆದ್ದಿದ್ದ ಸೋವನ್ದೇವ್ ಚಟ್ಟೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.
ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕಿಳಿದಿದ್ದಾರೆ. ಬಿಜೆಪಿ ನಾಯಕರು ಬಿರುಸಿನಿಂದ ಪ್ರಚಾರ ಮಾಡುತ್ತಿದ್ದಾರೆ. ಸೆಪ್ಟೆಂಬರ್ 30ರಂದು ಉಪ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 3ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಭಾರೀ ಅಂತರದ ಗೆಲವು ಖಚಿತ
ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರೀ ಅಂತರದ ಗೆಲವು ಸಾಧಿಸುವುದು ಖಚಿತ.
ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನು ಇಲ್ಲ. ಇದು ಅಪ್ಪಟ ಸತ್ಯ. ಮಮತಾ ಬ್ಯಾನರ್ಜಿ ಅವರು ಕೇವಲ ನಾಯಕಿಯಲ್ಲ, ಸಮಸ್ತ ಬಂಗಾಳಿಗರ ನಾಡಿಮಿಡಿತ. ಈ ಸತ್ಯವನ್ನು ಅರಿಯುವಲ್ಲಿ ಬಿಜೆಪಿ ಸೋತಿದೆ ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇತಿಹಾಸ ಸೃಷ್ಟಿಯಾಗಲಿದೆ
ಇತಿಹಾಸ ಸೃಷ್ಟಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಮತಾ ಅವರು ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 294 ವಿಧಾಸಭೆ ಕ್ಷೇತ್ರಗಳ ಪೈಕಿ 214 ಸ್ಥಾನಗಳನ್ನು ಜಯಿಸಿದ್ದರು. ಆಗಲೇ ಅವರು ಚರಿತ್ರೆ ಬರೆದಿದ್ದರು.
ಈಗ ಹೊಸ ಚರಿತ್ರೆ ಸೃಷ್ಟಿಗೆ ಅಣಿಯಾಗಿದ್ದಾರೆ. ಜನರ ಬಾವನೆಗಳನ್ನು, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಂಡು ಗೌರವಿಸಬೇಕು. 2021ರ ಚುನಾವಣೆಯಲ್ಲಿ ಬಂಗಾಳದ ಮಹಾಜನತೆ ಮಮತಾ ಅವರಿಗೆ ಸ್ಪಷ್ಟ ಜನಾದೇಶ ನೀಡಿದ್ದಾಗಿದೆ. ಈ ಉಪ ಚುನಾವಣೆಯಲ್ಲಿ ಯಾವ ಪಕ್ಷವೂ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಅವಿರೋಧ ಆಯ್ಕೆಗೆ ಸಹಕರಿಸಬೇಕಿತ್ತು ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ನಲ್ಲಿ ಹೇಳಿದ್ದಾರೆ.

ಬಿಜೆಪಿ ದೊಡ್ಡತನ ಪ್ರದರ್ಶನ ಮಾಡಬೇಕಿತ್ತು
'ಬಿಜೆಪಿ ತನ್ನ ಸಂಕುಚಿತ ಮನೋಭಾವ ತೊರೆದು ದೊಡ್ಡತನ ಪ್ರದರ್ಶಿಸಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಪ್ರಜಾಬಲಕ್ಕಿಂತ ದೊಡ್ಡದು ಬೇರೊಂದಿಲ್ಲ' ಎಂಬುದು ನನ್ನ ಅಭಿಪ್ರಾಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್, ಟಿಎಂಸಿಯಿಂದ ಮಮತಾ ಬ್ಯಾನರ್ಜಿ, ಸಿಪಿಐ(ಎಂ) ನಿಂದ ಶ್ರೀಜಿಬ್ ಬಿಸ್ವಾಸ್ ಕಣದಲ್ಲಿದ್ದಾರೆ. ಸೆಪ್ಟೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಪ್ರಿಯಾಂಕಾ ಟಿಬ್ರೆವಾಲ್ ಯಾರು?
ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ವಕೀಲರು. 2021ರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸಿದರೂ ಸೋಲು ಕಂಡಿದ್ದರು. ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಶೇ 30ರಷ್ಟು ಮತಗಳನ್ನು ಪಡೆದಿತ್ತು. ಈಗ ಭರ್ಜರಿಯಾಗಿ ಪ್ರಚಾರ ನಡೆಸುತ್ತಿರುವ ಬಿಜೆಪಿ ನಾಯಕರು ಗೆಲುವುವಿನ ವಿಶ್ವಾಸದಲ್ಲಿದ್ದಾರೆ.
ಸೋಮವಾರ ಪ್ರಿಯಾಂಕಾ ಟಿಬ್ರೆವಾಲ್ ಪ್ರತಿಪಕ್ಷ ನಾಯಕ ಸುವೆಂದು ಅಧಿಕಾರಿ, ಸಂಸದ ಅರ್ಜುನ್ ಸಿಂಗ್ ಮುಂತಾದ ನಾಯಕರೊಂದಿಗೆ ಆಗಮಿಸಿ ಉಪ ಚುನಾವಣೆಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ.
Recommended Video

ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ
ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 7 ವಾರ್ಡ್ಗಳಿವೆ. ಇವುಗಳಲ್ಲಿ 5ರಲ್ಲಿ ಟಿಎಂಸಿ ಪ್ರಬಲವಾಗಿದೆ. ಮಮತಾ ಬ್ಯಾನರ್ಜಿ ಅಭ್ಯರ್ಥಿಯಾಗಿರುವುದು ಸ್ಥಳೀಯ ಟಿಎಂಸಿ ಕಾರ್ಯಕರ್ತರು ಮಾತ್ರವಲ್ಲ ಜನರಲ್ಲೂ ಸಂಭ್ರಮ ಹೆಚ್ಚಿಸಿದೆ. ಭವಾನಿಪುರಕ್ಕೆ ಮಗಳು ವಾಪಸ್ ಆಗಿದ್ದಾಳೆ ಎಂದು ಜನರು ಸಂಭ್ರಮಿಸುತ್ತಿದ್ದಾರೆ.
ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನ ಮಾಡಿತ್ತು. ಆದರೆ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಈ ಮೂಲಕ ಮಮತಾ ಬ್ಯಾನರ್ಜಿಗೆ ಪರೋಕ್ಷವಾಗಿ ಬೆಂಬಲ ನೀಡಿದೆ. ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಪೈಪೋಟಿ ಇದ್ದು, ಎಷ್ಟು ಅಂತರದಲ್ಲಿ ಯಾರು ಗೆಲ್ಲುತ್ತಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications