ಬಿಜೆಪಿ ನಾಯಕರ ವಿರುದ್ಧ ಕುಮಾರಸ್ವಾಮಿ ಅಸಮಾಧಾನ
Recommended Video
ಬೆಂಗಳೂರು, ಜೂನ್ 16 : 'ಅವರಿಗೆ ಬೇಕಿರುವುದು ಕೇವಲ ಅಗ್ಗದ ಪ್ರಚಾರ, ಅಭಿವೃದ್ಧಿ ಆಧಾರಿತ ಚರ್ಚೆಯಲ್ಲ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ವಿರುದ್ಧ ಧರಣಿ ನಡೆಸುತ್ತಿದ್ದ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಕ್ಕೆ ಮುತ್ತಿಗೆ ಹಾಕಲು ಭಾನುವಾರ ಪ್ರಯತ್ನ ನಡೆಸಿದರು. ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.
'ಜಿಂದಾಲ್, ಬರ, ರೈತರ ಸಾಲಮನ್ನಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ' ಎಂದು ಹೇಳಿದರೂ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ, ಗೃಹ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದ್ದಕ್ಕೆ ಕುಮಾರಸ್ವಾಮಿ ಅಸಮಾಧಾನಗೊಂಡಿದ್ದಾರೆ.

'ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆಗೆ ಆಹ್ವಾನಿಸಿ ಪತ್ರವನ್ನು ಸಚಿವ ಸಂಪುಟದ ಸಹೋದ್ಯೋಗಿ ವೆಂಕಟರಾವ್ ನಾಡಗೌಡ ಅವರ ಮೂಲಕ ಮಾನ್ಯ ವಿರೋಧಪಕ್ಷದ ನಾಯಕರಿಗೆ ಕಳುಹಿಸಿದ್ದೆ.ಅವರು ಚರ್ಚೆಗೆ ಸಮಯ ಕೋರಬಹುದು ಎಂದು ನಿರೀಕ್ಷಿಸಿದ್ದೆ.ಆದರೆ BJP ಯ ನಿಜ ಬಣ್ಣ ಬಯಲಾಗಿದೆ. ಅವರಿಗೆ ಬೇಕಿರುವುದು ಕೇವಲ ಅಗ್ಗದ ಪ್ರಚಾರ, ಅಭಿವೃದ್ಧಿ ಆಧಾರಿತ ಚರ್ಚೆಯಲ್ಲ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕುಮಾರಸ್ವಾಮಿ ಪತ್ರ ಬರೆದಿದ್ದರು : ಸರ್ಕಾರದ ವಿರುದ್ಧ ಧರಣಿ ನಡೆಸುತ್ತಿರುವ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಪತ್ರ ಬರೆದಿದ್ದರು. ತಮ್ಮೊಂದಿಗೆ ಚರ್ಚೆ ನಡೆಸಲು ನಾನು ಸಿದ್ಧ ಎಂದು ಪತ್ರದಲ್ಲಿ ತಿಳಿಸಿದ್ದರು.
ಸಚಿವ ವೆಂಕಟರಾವ್ ನಾಡಗೌಡ ಅವರು ಬಿಜೆಪಿ ನಾಯಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ಪತ್ರವನ್ನು ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಿದ್ದರು. ಆದರೂ ಸಹ ಬಿಜೆಪಿ ನಾಯಕರು ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದ್ದಕ್ಕೆ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.












Click it and Unblock the Notifications