ಕೋವಿಡ್: ಸರ್ಕಾರದ ವೈಫಲ್ಯ, ಜನರಿಗೆ ಮಾಜಿ ಸಿಎಂ ಎಚ್ಡಿಕೆ ಮನವಿ
ಬೆಂಗಳೂರು, ಜೂ. 24: ಒಂದೆಡೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುವುದು ಹೆಚ್ಚಾಗುತ್ತಿದೆ. ಮತ್ತೊಂದೆಡೆ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಪರದಾಡಬೇಕಾದ ಸ್ಥತಿ ಎದುರಾಗಿದೆ. ಹೀಗಾಗಿ ಆಸ್ಪತ್ರೆಯಿಂದ ಸೋಂಕಿತರನ್ನು ಡಿಸ್ಚಾರ್ಜ್ ಮಾಡುವ ವಿಚಾರದಲ್ಲಿ ಸರ್ಕಾರ ಹೊಸ ಆದೇಶ ಮಾಡಿದೆ. ಯಾವುದೇ ರೋಗಲಕ್ಷಣಗಳನ್ನು ತೋರ್ಪಡಿಸದ (asymptotic) ಸೋಂಕಿತರನ್ನು ಬಿಡುಗಡೆ ಮಾಡಲು ಆದೇಶ ಮಾಡಿದೆ. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗುವುದನ್ನು ತಳ್ಳಿ ಹಾಕುವಂತಿಲ್ಲ.
ಈ ಮಧ್ಯೆ ಲಾಕ್ಡೌನ್ ಜಾರಿಮಾಡುವ ಒತ್ತಾಯವನ್ನು ರಾಜಕೀಯ ಪಕ್ಷಗಳ ನಾಯಕರು ಮಾಡುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ಲಾಕ್ಡೌನ್ ಜಾರಿ ಮಾಡುವುದಿರಲಿ, ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರು ಸೇರಿದಂತೆ ರಾಜ್ಯದ ಜನರಲ್ಲಿ ವಿಶೇಷ ಮನವಿಯನ್ನು ಮಾಡಿಕೊಂಡಿದ್ದಾರೆ.

ಜನರಿಗೆ ಎಚ್ಡಿಕೆ ಮನವಿ
ಸರ್ಕಾರ ಲಾಕ್ಡೌನ್ ಮಾಡಲು ಮುಂದಾಗದೆ ಇರುವುದರಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ನಿವಾಸಿಗಳೇ, ನೀವು COVID-19 ನಿಂದ ಪಾರಾಗಲು ಈಗ ಉಳಿದಿರುವುದು ಒಂದೇ ದಾರಿ. ಮನೆಯಲ್ಲೇ ಉಳಿದು ನೀವೇ ಸ್ವಯಂ ಘೋಷಿತ ಬಂದ್ ಆಚರಿಸಿ. ಪ್ರಾಣಕ್ಕಿಂತಲೂ ಹಣ ಮುಖ್ಯವಲ್ಲ. ಜೀವ ಇದ್ದರೆ ಹೇಗಾದರೂ ಬದುಕಬಹುದು. ನಿಮ್ಮ ಜೀವ ಜೀವನ ಈಗ ನಿಮ್ಮ ಕೈಯಲ್ಲಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಚಿಕಿತ್ಸೆಗೆ ಹಣ ಭರಿಸಲಾಗದು
ರಾಜ್ಯ ಸರ್ಕಾರ ಕೂಡ ಮನೆಯಲ್ಲಿಯೆ ಇರಿ ಎಂದು ಪರೋಕ್ಷವಾಗಿ ಹೇಳುತ್ತಿದೆ. ಕೊರೋನಾ ವೈರಸ್ ಸಮೂಹ ಪ್ರಸರಣದ ಈಗಿನ ಸ್ಥಿತಿಯಲ್ಲಿ ಮನೆಯಲ್ಲಿರುವುದೇ 'ಮನೆ ಮದ್ದು'.
ಈ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ನಿಗದಿಪಡಿಸಿರುವುದು ದಿನಕ್ಕೆ 10-15 ಸಾವಿರ ರೂ. ಈ ದರ ಬಡವರಿಗಿರಲಿ, ಮೇಲ್ಮಧ್ಯಮವರ್ಗದವರಿಗೂ ಭರಿಸಲು ಸಾಧ್ಯವಾಗದು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸರ್ಕಾರ ನಿಗದಿ ಮಾಡಿರುವ ದರವನ್ನು ಭರಿಸುವುದು ಕಷ್ಟ. ಹೀಗಾಗಿ ಮನೆಯಲ್ಲಿರಿ ಎಂದು ಎಚ್ಡಿಕೆ ಮನವಿ ಮಾಡಿಕೊಂಡಿದ್ದಾರೆ.

ಲಾಕ್ಡೌನ್ ಮಾತ್ರ ಪರಿಹಾರ
ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಿರುವ ಮೂರ್ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ ಗಳಿಲ್ಲ, ವೆಂಟಿಲೇಟರ್ ಗಳ ಕೊರತೆ ಇದೆ. ಇದಕ್ಕೆ ಸ್ವಯಂ ಪ್ರೇರಿತ ಲಾಕ್ ಡೌನ್ ಒಂದೇ ಪರಿಹಾರ ಎಂದು ಮಾಜಿ ಸಿಎಂ ಎಚ್ಡಿಕೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

5-6 ಲಕ್ಷ ರೂ ಬೇಕು
ಒಂದು ಕುಟುಂಬದ ನಾಲ್ಕು ಜನರಿಗೆ ಕೊರೊನಾ ಬಂದರೆ ಖಾಸಗಿ ಆಸ್ಪತ್ರೆಯಲ್ಲಿ 15 ದಿನಗಳ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿರುವ ದರದ ಪ್ರಕಾರ 5-6 ಲಕ್ಷ ರೂ ಬೇಕು. ಬಡವರು ಮಧ್ಯಮವರ್ಗದವರು ಎಲ್ಲಿಂದ ತರುತ್ತಾರೆ? ಸರ್ಕಾರ ಕೈಚೆಲ್ಲಿ ಕುಳಿತಿರುವಾಗ ನಮ್ಮ ಜೀವ ನಾವೇ ಉಳಿಸಿಕೊಳ್ಳಬೇಕು. ದಯಮಾಡಿ ಎಚ್ಚರದಿಂದಿರಿ ಇದು ರಾಜ್ಯದ ಜನತೆಗೆ ನನ್ನ ಕಳಕಳಿಯ ಮನವಿ ಎಂದು ಟ್ವೀಟರ್ನಲ್ಲಿ ಮನವಿ ಮಾಡಿ ಕೊಂಡಿದ್ದಾರೆ.












Click it and Unblock the Notifications