ಕೋವಿಡ್ ಚಿಕಿತ್ಸೆ ಸಮಯದಲ್ಲಿ ಎಚ್ಡಿಕೆ ನೋಡಿದ ಸಿನಿಮಾಗಳ ಪಟ್ಟಿ
ಬೆಂಗಳೂರು, ಜುಲೈ. 18: ಕೋವಿಡ್ ಸೋಂಕು ತಗುಲಿದ ಬಳಿಕ ಐಸೋಲೇಷನ್ನಲ್ಲಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಮ್ಮ ಚಿಕಿತ್ಸಾ ಅವಧಿ ವೇಳೆ ಸಿನಿಮಾ ವೀಕ್ಷಿಸಿದ್ದಾರೆ.
ಬಿಡುವಿಲ್ಲದ ರಾಜಕೀಯ ಕೆಲಸಗಳ ನಡುವೆಯೂ ಕುಮಾರಸ್ವಾಮಿ ಪುಸ್ತಕ ಓದುವುದು ಎಲ್ಲರಿಗೂ ತಿಳಿದಿದೆ. ಈಗ ಚಿಕಿತ್ಸೆ ಸಿನಿಮಾ ವೀಕ್ಷಣೆ ಮಾಡಿರುವ ಎಚ್. ಡಿ. ಕುಮಾರಸ್ವಾಮಿ ಆ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಕೋವಿಡ್ ಸೋಂಕಿನಿಂದ ಒಂದು ವಾರ ಮನೆಯಲ್ಲೇ ಚಿಕಿತ್ಸೆ ಪಡೆದ ನಾನು, ಓದು ಹಾಗೂ ಸಿನಿಮಾ ವೀಕ್ಷಣೆಯಲ್ಲಿಯೇ ಸಮಯ ಕಳೆದೆ. ಈ ಬಿಡುವಿನಲ್ಲಿ ಜೈ ಭೀಮ್ ಹಾಗೂ ಜನ ಗಣ ಮನ ಎಂಬ ಎರಡು ಸಿನಿಮಾಗಳನ್ನು ವೀಕ್ಷಿಸಿದೆ. ಸೂಕ್ಷ್ಮ ಕಥಾಹಂದರದ ಈ ಸಿನಿಮಾಗಳೆರಡೂ ನನ್ನ ಮನ ಕಲಕಿದ್ದು, ತೀವ್ರ ತಳಮಳಕ್ಕೆ ಕಾರಣವೂ ಆಗಿವೆ ಎಂದು ಹೇಳಿದ್ದಾರೆ.
ಭಾರತೀಯ ನ್ಯಾಯ ವ್ಯವಸ್ಥೆ ಬಡವರು ದಲಿತರು, ಅಶಕ್ತರಿಗೆ ಗಗನ ಕುಸುಮವಾ? ಓರ್ವ ಸಿರಿವಂತ ಅಪರಾಧಿಗೆ ಕೆಲ ಗಂಟೆಗಳಲ್ಲೇ ಜಾಮೀನು ಸಿಕ್ಕಿದರೆ, ಅದೇ ಬಡ ಅಪರಾಧಿಗಳ (ಅನೇಕ ಪ್ರಕರಣಗಳಲ್ಲಿ ಮುಗ್ಧರು) ಅರ್ಜಿಗಳಿಗೆ ಮೋಕ್ಷವೇ ಕಾಣುವುದಿಲ್ಲ. ಸರಳುಗಳ ಹಿಂದಿನ ನರಕವನ್ನು ಜೈ ಭೀಮ್ ನೈಜವಾಗಿ ತೋರಿಸಿದೆ ಎಂದು ತಮಿಳು ನಟ ಸೂರ್ಯ ನಟನೆಯ ಚಿತ್ರದ ಬಗ್ಗೆ ಕುಮಾರಸ್ವಾಮಿ ಕಿರು ವಿಮರ್ಶೆ ಬರೆದಿದ್ದಾರೆ.

ಕಠೋರ ಕಹಿಸತ್ಯಗಳ ಬಗ್ಗೆ ಅವಲೋಕನ
ಸುಪ್ರೀಂ ಕೋರ್ಟ್ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು ವಿಚಾರಣಾಧೀನ ಕೈದಿಗಳ ದುಸ್ಥಿತಿಯ ಬಗ್ಗೆ ಜೈಪುರದಲ್ಲಿ ನೀಡಿದ್ದ ಹೇಳಿಕೆ & ಜೈ ಭೀಮ್ ಚಿತ್ರದಲ್ಲಿ ಅದೇ ಕೈದಿಗಳ ಸುತ್ತ ಬಿಚ್ಚಿಕೊಳ್ಳುವ ಕಠೋರ ಕಹಿಸತ್ಯಗಳ ಬಗ್ಗೆ ಇಡೀ ಭಾರತವೇ ಆಲೋಚಿಸಬೇಕು. ನಾನು ಆಲೋಚಿಸುತ್ತಿದ್ದೇನೆ. ಬದಲಾವಣೆಗೆ ಖಂಡಿತಾ ಪ್ರಯತ್ನಿಸುವೆ ಎಂದು ಹೇಳಿದ್ದಾರೆ.

ಶೇ. 80ರಷ್ಟು ಜನ ವಿಚಾರಣಾಧೀನ ಕೈದಿಗಳೇ!
ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದು ಇದನ್ನೇ. ವಿಚಾರಣೆಯೇ ಇಲ್ಲದೆ ಕೈದಿಗಳ ದೀರ್ಘಾವಧಿ ಸೆರೆ ಪ್ರಶ್ನಾರ್ಹ. ನಮ್ಮ ದೇಶದಲ್ಲಿ ಸೆರೆವಾಸದಲ್ಲಿರುವ 6.10 ಲಕ್ಷ ಕೈದಿಗಳಲ್ಲಿ ಶೇ. 80ರಷ್ಟು ಜನ ವಿಚಾರಣಾಧೀನ ಕೈದಿಗಳೇ! ಇವರೆಲ್ಲರೂ ವಿಚಾರಣೆ ಪೂರ್ಣಗೊಳ್ಳದೇ ಕಂಬಿಗಳ ಹಿಂದೆ ಬದುಕುತ್ತಿದ್ದಾರೆ. 2017ರಲ್ಲಿ ಛತ್ತೀಸಗಢದಲ್ಲಿ CRPF ಜವಾನರ ಮೇಲೆ ನಡೆದ ದಾಳಿ ಪ್ರಕರಣದಲ್ಲಿ 121 ಬುಡಕಟ್ಟು ಜನರನ್ನು ಬಂಧಿಸಲಾಗಿತ್ತು. 5 ವರ್ಷ ಅವರು ಜೈಲುಗಳಲ್ಲಿ ನರಕ ಅನುಭವಿಸಿದರು. ಕೊನೆಗೆ ಅವರ ಪಾತ್ರದ ಬಗ್ಗೆ ಸಾಕ್ಷ್ಯ ಇಲ್ಲ ಎಂದು ಎನ್ಐಎ ಕೋರ್ಟ್ ತೀರ್ಪು ನೀಡಿ, ಆ ಮುಗ್ಧರನ್ನು ಖುಲಾಸೆಗೊಳಿಸಿದೆ. ಇದು ಸಮಾಧಾನದ ಸಂಗತಿ.

ಅವರ ದನಿ ದೇಶಕ್ಕೇ ಕೇಳಿಸಿದೆ
ಆತುರಗೆಟ್ಟ ಆರೋಪ ಪಟ್ಟಿ, ವಿವೇಚನೆ ಇಲ್ಲದ ಬಂಧನ, ಜಾಮೀನು ಪಡೆಯಲು ಹೆಣಗಾಟದ ಕರಾಳತೆಯ ಮೇಲೆ ಜೈ ಭೀಮ್ ಬೆಳಕು ಚೆಲ್ಲಿದೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಇದನ್ನೇ ಹೇಳಿ ಕಳವಳ ವ್ಯಕ್ತಪಡಪಡಿಸಿದ್ದಾರೆ. ಅವರ ದನಿ ದೇಶಕ್ಕೇ ಕೇಳಿಸಿದೆ. ಹಾಗಾದರೆ, ನಾವು ಬದಲಾಗುವುದು ಯಾವಾಗ? ಸುಧಾರಣೆಗಳು ಎಂದು? ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಸಂವಿಧಾನ ನಮಗೆ ಶ್ರೇಷ್ಠ ನ್ಯಾಯಾಂಗವನ್ನು ಕೊಟ್ಟಿದೆ. ಕಷ್ಟ ಎದುರಾದಾಗ ಬಿಲಿನಿಯರ್ನಿಂದ ಕಟ್ಟಕಡೆಯ ಬಡಪ್ರಜೆವರೆಗೂ ಎಲ್ಲರೂ ಕೋರ್ಟ್ ಕಡೆ ನೋಡುತ್ತಾರೆ. ಎಲ್ಲರೂ ಇಲ್ಲಿ ಸಮಾನರು. ಅದು ಹಕ್ಕು ಹೌದು. ತಮಿಳುನಾಡಿನ ಕಡಲೂರಿನಲ್ಲಿ ನಡೆದ ನೈಜ ಘಟನೆ ಆಧರಿಸಿದ ಜೈ ಭೀಮ್ ಚಿತ್ರ ಮನುಷ್ಯತ್ವಕ್ಕೇ ಸವಾಲೆಸೆಯುವ ಅನೇಕ ಪ್ರಶ್ನೆಗಳನ್ನು ಎತ್ತಿದೆ ಎಂದು ಕುಮಾರಸ್ವಾಮಿ ಬರೆದಿದ್ದಾರೆ.
|
ಅಸಹಾಯಕ ಮುಖದ ದರ್ಶನ
ಜನ ಗಣ ಮನಚಿತ್ರ ಇವತ್ತಿನ ರಾಜಕೀಯ ಕಪಟತೆ, ಕುಟಿಲತೆ, ಲಂಪಟತೆಯನ್ನು ಮನೋಜ್ಞವಾಗಿ ತೆರೆದಿಟ್ಟಿದೆ. ರಾಜಕೀಯದ ಕಪಿಮುಷ್ಠಿಗೆ ಸಿಲುಕಿ ನರಳುವ ವ್ಯವಸ್ಥೆಯ ಅಸಹಾಯಕ ಮುಖದ ದರ್ಶನ ಮಾಡಿಸಿದೆ. ವ್ಯವಸ್ಥೆಗೆ ಕನ್ನಡಿಯಂತಿರುವ ಸಿನಿಮಾಗಳು ಆವೇಶಕ್ಕೆ, ಆಲೋಚನೆಗೆ ದೂಡುತ್ತವೆ. ಜೈಭೀಮ್ ನಿರ್ದೇಶಕ ಟಿ. ಜ್ಞಾನವೇಲ್, ಜನ ಗಣ ಮನ ನಿರ್ದೇಶಕ ಡಿಜೊ ಜೋಸ್ ಆಂಟನಿ ಇಬ್ಬರು ಅಭಿನಂದನಾರ್ಹರು ಎಂದು ಎಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದ್ದಾರೆ.












Click it and Unblock the Notifications