ಶಾಸಕರ ಜೊತೆ ಹಾಸನಾಂಭ ದರ್ಶನ ಪಡೆದ HDK: ಡಿಕೆಶಿ ಕಾಟವನ್ನು ದೂರಮಾಡುವಂತೆ ದೇವಿಯಲ್ಲಿ ಬೇಡಕೊಂಡರೇ ಮಾಜಿ ಸಿಎಂ?
ಹಾಸನ, ನವೆಂಬರ್ 08: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಜೆಡಿಎಸ್ ಮತ್ತೆ ಪಕ್ಷ ಸಂಘಟನೆಗೆ ಪ್ಲಾನ್ ನಡೆಸಿದೆ. ಇತ್ತ ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್ ನಲ್ಲಿ ಅಪಸ್ವರ ಕೇಳಿ ಬಂದಿದ್ದು, ಇತ್ತ ಕೆಲ ನಾಯಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿರುವ ವದಂತಿ ದಳಪತಿಗಳಿಗೆ ತಲೆಬಿಸಿ ಉಂಟು ಮಾಡಿದೆ.
ಹೌದು, ಕಾಂಗ್ರೆಸ್ ನಾಯಕರು ಜೆಡಿಎಸ್ ನಾಯಕರಿಗೆ ಗಾಳ ಹಾಕುತ್ತಿದ್ದಾರೆ ಎಂಬ ಮಾತು ರಾಜ್ಯ ರಾಜಕಾರಣದಲ್ಲಿ ಕೇಳಿ ಬಂದಿದ್ದು, ಜೆಡಿಎಸ್ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ಜೆಡಿಎಸ್ ವರಿಷ್ಠರು ಕಸರತ್ತು ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ಹಾಸನಾಂಬ ದೇವಾಲಯದ ದರ್ಶನದ ಜೊತೆಗೆ ಎಲ್ಲಾ ಶಾಸಕರು ಒಗ್ಗೂಡಿ ಆಡಳಿತಾರೂಢ ಕಾಂಗ್ರೆಸ್'ಗೆ ನಾವು ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶ ಸಾರುವ ಪ್ರಯತ್ನ ನಡೆಸಲಾಗಿದೆ.

ಹಾಸನದ ಆದಿ ದೇವತೆ ಹಾಸನಾಂಬ ದೇಗುಲಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ ಕುಮಾರಸ್ವಾಮಿ, ಪಕ್ಷ ಸಂಘಟನೆ ಹಾಗೂ ಜೆಡಿಎಸ್ ನಾಯಕರನ್ನ ಕಾಂಗ್ರೆಸ್ ಸೆಳೆಯುತ್ತಿರುವ ತಂತ್ರಗಾರಿಗೆ ಕುರಿತು ಹಾಗೂ ಡಿ ಕೆ ಶಿವಕುಮಾರ್ ಕಾಟವನ್ನ ದೂರಮಾಡುವಂತೆ ಹಾಸನಾಂಭೆ ಮುಂದೆ ಬೇಡಿಕೊಂಡರೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಇನ್ನೂ ದೇವರ ದರ್ಶನ ಪಡೆದ ಬಳಿಕ ಮಾತನಾಡಿದ ಕುಮಾರಸ್ವಾಮಿಯವರು, ದೇವರಿಗೆ ಪೂಜೆ ಸಲ್ಲಿಸುವ ವೇಳೆ ಬರದ ಸಂಕಷ್ಟದಿಂದ ನೊಂದಿರುವ ನಾಡಿನ ಅನ್ನದಾತ ರೈತರಿಗೆ ಒಳ್ಳೆಯದಾಗಲಿ. ನಾಡಿನ ಎಲ್ಲ ಜನರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.
ನಮ್ಮ ಪಕ್ಷದ ಶಾಸಕರ ಮೇಲೆ ಗದಾಪ್ರಹಾರ ನಡೆಯುತ್ತಿದೆ. ಹಾಗಾಗಿ ಜೆಡಿಎಸ್ನ ಎಲ್ಲಾ ಶಾಸಕರು ಹಾಸನಾಂಬ ದರ್ಶನಕ್ಕೆ ಆಗಮಿಸಲಿದ್ದು, ಹಾಸನಾಂಬೆ ದೇವಿಯ ಪವಿತ್ರ ಕ್ಷೇತ್ರದಿಂದಲೇ ತಾವು ಒಗ್ಗಟ್ಟು ಪ್ರದರ್ಶನ ಮಾಡುವುದಾಗಿ ಘೋಷಿಸಿದರು.ಇನ್ನೂ ಆಪರೇಷನ್ ಹಸ್ತದ ವಿಚಾರವಾಗಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಲವು ಹಾಲಿ ಶಾಸಕರು ನಮ್ಮ ಪಕ್ಷಕ್ಕೆ ಬರಲಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ಅಲ್ಲದೇ, ಈ ಬಗ್ಗೆ ಕಾಂಗ್ರೆಸ್ ನ ಹಲವು ಸಚಿವರು ಸಹ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದ ಹಿನ್ನಲೆ ಕುಮಾರಸ್ವಾಮಿಯವರು 2 ದಿನಗಳ ಕಾಲ ಹಾಸನದಲ್ಲಿ ಒಗ್ಗಟ್ಟಿನ ಪ್ರದರ್ಶನ ಕೈಗೊಂಡಿದ್ದು, ಮಂಗಳವಾರ ಕೆಲವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಬುಧವಾಲ ಪ್ರತಿ ಶಾಸಕರೊಂದಿಗೆ ಒನ್ ಟು ಒನ್ ಸಭೆ ನಡೆಸಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ.
ಇನ್ನೂ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ರೆಸಾರ್ಟ್ ರಾಜಕೀಯ ಶುರು ಮಾಡಿರುವ ಕುಮಾರಸ್ವಾಮಿ ಕರೆದ ಸಭೆಗೆ ಗುರ್ಮಿಟ್ಕಲ್ ಶಾಸಕ ಶರಣಗೌಡ ಕಂದಕೂರ್ ಗೈರಾಗಿದ್ದು, ಈ ಹಿಂದೆ ಮೈತ್ರಿ ವಿಚಾರವಾಗಿ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ರು, ಇದೀಗ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಕರೆದ ಸಭೆಗೆ ಗೈರಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತದ ಗಾಳಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.












Click it and Unblock the Notifications