ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಸುಧಾರಿಸಿ : ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಜೂನ್ 07 : 'ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ' ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು.
ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಎಚ್.ಡಿ.ಕುಮಾರಸ್ವಾಮಿ ನಡೆಸಿದರು. ಎನ್.ಮಹೇಶ್ ಅವರ ರಾಜೀನಾಮೆ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕುಮಾರಸ್ವಾಮಿ ಅವರ ಬಳಿಯೇ ಇದೆ.
'ಮಕ್ಕಳ ಕಲಿಕೆಯ ಮಟ್ಟ ಕುರಿತು ಏಕ ಕಾಲದಲ್ಲಿ 40 ಲಕ್ಷ ಮಕ್ಕಳ ಮೌಲ್ಯಮಾಪನ ನಡೆಸಿದ ಏಕೈಕ ರಾಜ್ಯ ನಮ್ಮದು. ಈ ಮೌಲ್ಯಮಾಪನದ ಆಧಾರದಲ್ಲಿ ಸುಮಾರು 12 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ಗುರುತಿಸಿ ಪರಿಹಾರ ಬೋಧನೆಗೆ ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಹೆಚ್ಚಿನ ಆದ್ಯತೆ ನೀಡುವಂತೆ' ಮುಖ್ಯಮಂತ್ರಿಗಳು ಸೂಚನೆ ಕೊಟ್ಟರು.

ಮಕ್ಕಳ ಆಲೋಚನಾ ಮತ್ತು ಅನ್ವಯಿಕ ಶಕ್ತಿಯನ್ನು (Higher order thinking) ವೃದ್ಧಿಸುವ ನಿಟ್ಟಿನಲ್ಲಿ ಪರೀಕ್ಷಾ ವಿಧಾನದಲ್ಲಿ ಸೂಕ್ತ ಬದಲಾವಣೆ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ ಮುಖ್ಯಮಂತ್ರಿಗಳು ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಸಮರ್ಪಕವಾಗಿ ನಡೆಯುವಂತೆ ಹಾಗೂ ಕೇಂದ್ರದ ಅನುದಾನಕ್ಕೆ ಕಾಯದೆ, ಎರಡು ಜೊತೆ ಸಮವಸ್ತ್ರ ವಿತರಿಸುವಂತೆ ಸೂಚನೆ ನೀಡಿದರು.
ಸರ್ಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ 300 ಶಾಲೆಗಳಲ್ಲಿ ಹೆಚ್ಚುವರಿ ತರಗತಿಗಳನ್ನು ಪ್ರಾರಂಭಿಸುವಂತೆ ಬೇಡಿಕೆ ಬಂದಿದೆ. ನುರಿತ ತರಬೇತಿ ಹೊಂದಿದ ಶಿಕ್ಷಕರು ಈ ಶಾಲೆಗಳಲ್ಲಿ ಲಭ್ಯವಿದ್ದರೆ ಇನ್ನು ಒಂದು ಹೆಚ್ಚುವರಿ ತರಗತಿಯನ್ನು ಪ್ರಾರಂಭಿಸುವಂತೆ ತಿಳಿಸಿದರು.
ಶಿಕ್ಷಕರು ತಮ್ಮ ಸೇವಾ ವಿಷಯಗಳಿಗೆ ಸರ್ಕಾರಿ ಕಚೇರಿಗಳಿಗೆ ಓಡಾಡುವುದನ್ನು ತಪ್ಪಿಸಲು ಶೀಘ್ರವೇ ಸೇವಾ ಸೌಲಭ್ಯಗಳನ್ನು ಆನ್ಲೈನ್ನಲ್ಲಿ ನೀಡಲು ತಂತ್ರಾಂಶ ರೂಪಿಸಿ, ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ನಡೆಸಿದ ಪೂರ್ವ ಸಿದ್ಧತೆಗಳನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಕುರಿತಾಗಿ ಸರ್ಕಾರದ ಅಭಿಪ್ರಾಯ ತಿಳಿಸುವ ನಿಟ್ಟಿನಲ್ಲಿ ಶಿಕ್ಷಣ ತಜ್ಞರು, ಪೋಷಕರು, ಶಾಲಾಭಿವೃದ್ಧಿ ಸಮಿತಿ ಗಳು ಮತ್ತಿತರ ಸಂಬಂಧಪಟ್ಟ ಭಾಗೀದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಗಳು ತಿಳಿಸಿದರು.
ಪ್ರೌಢ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ, ಒಂದೇ ಮಂಡಳಿಯ ಮೂಲಕ 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚರ್ಚಿಸಿ, ಇದಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಡಾ. ಎಸ್. ಸುಬ್ರಹ್ಮಣ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್ ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications