'ಜನರ ದುಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಗೇಲಿ ಮಾಡಿದ್ದಾರೆ'
ಬೆಂಗಳೂರು, ಮೇ 13: ದೇಶದಲ್ಲಿ ಮೂರನೇ ಹಂತದ ಲಾಕ್ಡೌನ್ ಜಾರಿಯಾಗಿ ಹತ್ತು ದಿನಗಳು ಕಳೆದಿವೆ. ಇದೇ ಸಂದರ್ಭದಲ್ಲಿ ಲಾಕ್ಡೌನ್ನಿಂದ ತತ್ತರಿಸಿರುವ ಎಲ್ಲ ವರ್ಗದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು 20 ಲಕ್ಷ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಸಿಗಲಿದೆ ಎಂಬುದನ್ನು ದೇಶದ ಜನತೆಗೆ ಸುದೀರ್ಘವಾಗಿ ವಿವರಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಿಶೇಷ ಪ್ಯಾಕೇಜ್ನ್ನು ವಿಶ್ಲೇಷಣೆ ಮಾಡಿದ್ದಾರೆ. ಜನ ಸಾಮಾನ್ಯರಿಗೆ ಪ್ಯಾಕೇಜ್ನಿಂದ ಕನಿಷ್ಠ ಸಹಾಯವೂ ಆಗುವುದಿಲ್ಲ ಎಂದಿದ್ದಾರೆ. ರಾಜ್ಯಗಳು ಕೇಂದ್ರ ಸರ್ಕಾರದ ಎದುರು ಅಕ್ಷರಶಃ ಭಿಕ್ಷಾ ಪಾತ್ರೆ ಹಿಡಿದು ನಿಲ್ಲುವಂತಾಗಿದೆ. ಕೇಂದ್ರ ಸರ್ಕಾರ ಸಹಾಯ ಮಾಡಿರುವುದು ಉದ್ಯಮಿಗಳಿಗೆ ಹೊರತು ಜನ ಸಾಮಾನ್ಯರಿಗಲ್ಲ ಎಂದಿದ್ದಾರೆ.
ಜನರ ನಿರೀಕ್ಷೆಗೆ ಸೀತಾರಾಮನ್ ತಣ್ಣೀರು
ಮೂರನೇ ಹಂತದ ಲಾಕ್ಡೌನ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅದರಲ್ಲೂ ಪ್ರಧಾನಿ ಮೋದಿ ಅವರ ಮೇಲೆ ಜನಸಾಮಾನ್ಯರು ಅಪಾರವಾದ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅವರ ನಿರೀಕ್ಷೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹುಸಿಗೊಳಿಸಿದ್ದಾರೆ ಎಂದು ಎಚ್ಡಿಕೆ ಆರೋಪಿಸಿದ್ದಾರೆ. ಲಾಕ್ಡೌನ್ನಿಂದ ತತ್ತರಿಸಿರುವ ಜನರನ್ನು, ರೈತರನ್ನು, ಬಡವರನ್ನು ಪಕ್ಕಕ್ಕಿಡಲಾಗಿದೆ.
20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್: ಯಾರಿಗೆ ಸಿಕ್ತು ಲಾಭದ ಪಾಲು.?
ಉದ್ಯಮಿಗಳು ಹಾಗೂ ಉದ್ಯಮಗಳ ವ್ಯವಹಾರಕ್ಕೆ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ರೂಪಿಸಿರುವುದು ನಿರ್ಮಲಾ ಸೀತಾರಾಮನ್ ಅವರು ಕೊಟ್ಟಿರುವ ವಿವರಣೆಯಲ್ಲಿ ಸ್ಪಷ್ಟವಾಗಿದೆ. ಆದರೆ ಪ್ಯಾಕೇಜ್ಲ್ಲಿ ತಮಗೂ ಒಂದಿಷ್ಟು ಸಿಗಬಹುದು ಎಂದು ನಿರೀಕ್ಷಿಸಿದ್ದ ಜನರ ನಿರೀಕ್ಷೆಗಳಿಗೆ ತಣ್ಣೀರೆರಚಲಾಗಿದೆ ಎಂದು ಎಚ್ಡಿಕೆ ವಿಶ್ಲೇಷಣೆ ಮಾಡಿದ್ದಾರೆ.
ಜನರ ದುಸ್ಥಿತಿಯನ್ನು ಗೇಲಿ ಮಾಡಿದ ಮೋದಿ
ಕೇವಲ ಘೋಷಣೆಗಳ ಮೂಲಕ, ಕಾಲ್ಪನಿಕ ಲೆಕ್ಕಾಚಾರಗಳ ಮೂಲಕ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬ ಅರಗಿನ ಅರಮನೆಯನ್ನು ಕೇಂದ್ರ ಸರ್ಕಾರ ಕಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಆ ಮೂಲಕ ಜನರ ದುಸ್ಥಿತಿಯನ್ನು ಗೇಲಿ ಮಾಡಿದ್ದಾರೆ. ಈ ಘೋಷಣೆಯ ಮೂಲಕ ಅಪಾರ ಪ್ರಮಾಣದ ಪ್ರಚಾರ ಪಡೆದಿರುವ ಬಿಜೆಪಿ, ದೇಶದ ಬಿಕ್ಕಟ್ಟನ್ನು ರಾಜಕೀಯದ ಅವಕಾಶವಾಗಿ ಪರಿವರ್ತಿಸಿಕೊಂಡಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.
ಬೆನ್ನು ತಟ್ಟಿಕೊಳ್ಳುತ್ತಿದೆ ಕೇಂದ್ರ ಸರ್ಕಾರ
ಕೊರೊನಾ ವೈರಸ್ ಲಾಕ್ಡೌನ್ನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಎದುರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕಿತ್ತು. ಆದರೆ ತನಿಗಿಷ್ಟ ಬಂದ ಘೋಷಣೆಗಳನ್ನು ಕೂಗಿ 20 ಲಕ್ಷ ಕೋಟಿ ರೂ. ಕೊಟ್ಟೆವೆಂದು ಕೇಂದ್ರ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಆರ್ಥಿಕ ಸಂಕಷ್ಟದಿಂದ ರಾಜ್ಯಗಳನ್ನು ಅಕ್ಷರಶಃ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡಿದೆ. ರಾಜ್ಯ ಸರ್ಕಾರಗಳನ್ನು ಕೇಂದ್ರ ಸಂಪೂರ್ಣ ನಿರ್ಲಕ್ಷ ಮಾಡಿದೆ ಎಂದು ಎಚ್ಡಿಕೆ ವಿಶ್ಲೇಷಣೆ ಮಾಡಿದ್ದಾರೆ.
ಐಟಿ ರಿಟರ್ನ್ಸ್ ಸಲ್ಲಿಕೆ ದಿನಾಂಕ ವಿಸ್ತರಣೆ ಏನು ಲಾಭ?
ಪ್ರಧಾನಿಯಿಂದ ಕಾಲ್ಪನಿಕ ಘೋಷಣೆ
ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಎಂಬುದು ಲಿಕ್ವಿಡಿಟಿ (ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇವು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, ಉದ್ಯಮಿಗಳಷ್ಟೇ. ಕೇಂದ್ರದ ಘೊಷಣೆಗಳಿಂದ ಜನ ಸಾಮಾನ್ಯರಿಗೆ ಯಾವುದೇ ಸಹಾಯವಾಗುವುದಿಲ್ಲ.
ಆತ್ಮನಿರ್ಭರ್ಭಾರತ್ ಎಂಬುದು ನಿಮಗೆ ನೀವೇ ಆಗಬೇಕು. ನಮ್ಮಿಂದ ನಿಮಗೆ ಚಿಕ್ಕಾಸೂ ದೊರಕದು ಎಂದು ಜನರಿಗೆ ಕೇಂದ್ರ ನೀಡಿದ ಸ್ಪಷ್ಟನೆ. ಎಂದು ಕುಮಾರಸ್ವಾಮಿ ಅವರು ವಿವರಿಸಿದ್ದಾರೆ.
ಬಿಕ್ಕಟ್ಟನ್ನು ರಾಜಕೀಯ ಅವಕಾಶವಾಗಿಸಿಕೊಂಡ ಬಿಜೆಪಿ
ಭಾರತ ಬಿಕ್ಕಟ್ಟನ್ನು ಅವಕಾಶವಾಗಿ ಪರಿವರ್ತಿಸಿಕೊಂಡಿದೆ ಎಂದೂ, ದೇಶ #AtmanirbharBharat ಆಗಬೇಕು ಎಂದು ಮೋದಿ ಭಾಷಣದಲ್ಲಿ ಹೇಳಿದ್ದರು. ಅವರು ಹೇಳಿದಂತೆಯೆ ಬಿಜೆಪಿ ಬಿಕ್ಕಟ್ಟನ್ನು ರಾಜಕೀಯದ ಅವಕಾಶವಾಗಿಸಿಕೊಂಡಿದೆ. ಆತ್ಮ ನಿರ್ಭರ್ ಭಾರತ ಎಂಬ ಆಕರ್ಷಕ ಪದಗುಚ್ಛದ ಮೂಲಕ ದೇಶದ ಜನ ಸ್ವಾವಲಂಬಿಗಳಾಗಬೇಕು ಎಂದು ಹೇಳಿ ಅವರನ್ನು ಅನಾಥರನ್ನಾಗಿಸಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.