ಪ್ರವಾಹ ಪೀಡಿತ ಕರಾವಳಿಗೆ ಪರಿಹಾರ: ಸಿಎಂ ಎಚ್ಡಿಕೆ ಭರವಸೆ
Recommended Video
ಬೆಂಗಳೂರು, ಮೇ 30: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರಾವಳಿಯನ್ನು ಮುಂಗಾರು ಆವರಿಸಿದೆ. ಇದರ ಹಿನ್ನೆಲೆಯಲ್ಲಿ ಅಲ್ಲಿನ ಜನರು ಹಾಗೂ ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಈ ಸ್ಥಿತಿಯನ್ನು ರಾಜ್ಯ ಸರ್ಕಾರ ಗಮನಿಸಿದ್ದು ಜಿಲ್ಲಾಡಳಿತಕ್ಕೆ ನೆರವು ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಬಗ್ಗೆ ಇಂದು ಬೆಳಿಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳಿಂದ ತಾನು ಮಾಹಿತಿ ಪಡೆದಿದ್ದು, ಮಳೆ ಹಾನಿ ತೀವ್ರತೆ ಕಡಿಮೆಗೊಳಿಸಲು ಮತ್ತು ಸಂತ್ರಸ್ತರ ಪ್ರಾಣಹಾನಿ ತಪ್ಪಿಸಲು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಒತ್ತು ನೀಡಲು ಸೂಚಿಸಿದ್ದೇನೆ.
ಚಿತ್ರಗಳು : ಮಳೆಯ ರುದ್ರನರ್ತನಕ್ಕೆ ನಲುಗಿದ ದಕ್ಷಿಣ ಕನ್ನಡ, ಉಡುಪಿ
ಈಗಾಗಲೇ ಜಿಲ್ಲಾಡಳಿದೊಂದಿಗೆ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಸರಕಾರ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯ ಮೇಲೆ ನಿಗಾ ಇಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಸಂತ್ರಸ್ತರಿಗೆ ತಕ್ಷಣದ ಮೂಲಸೌಕರ್ಯವನ್ನು ಒದಗಿಸುವುದರೊಂದಿಗೆ ಪರಿಹಾರವನ್ನು ತ್ವರಿತವಾಗಿ ನೀಡಲು ಸೂಚಿಸಲಾಗಿದೆ. ಜಿಲ್ಲಾಡಳಿತಕ್ಕೆ ಹೆಚ್ಚುವರಿ ಅತಿವೃಷ್ಟಿ ಅನುದಾನ ನೀಡಲು ರಾಜ್ಯ ಸರಕಾರ ಸಿದ್ಧವಿದೆ. ಮಳೆಯಿಂದ ಹಾನಿಗೊಂಡಿರುವ ರಸ್ತೆ, ವಿದ್ಯುತ್ ಸಂಪರ್ಕಗಳನ್ನು ಆದ್ಯತೆಯಲ್ಲಿ ದುರಸ್ತಿಗೊಳಿಸಲಾಗುವುದು. ಸಮುದ್ರ ತೀರ ಪ್ರದೇಶಗಳಲ್ಲಿ ಕಡಲಕೊರತೆ ಸಾಧ್ಯತೆ ಇರುವುದರಿಂದ ಈ ಬಗ್ಗೆ ನಿಗಾ ಇಡಲೂ ಸೂಚಿಸಲಾಗಿದೆ.
ಮಾಯದಂಥ ಮಳೆಗೆ ಮಂಗಳೂರಿನ ರಸ್ತೆಗಳಲ್ಲಿ ನೀರೋ ನೀರು
ಈಗಾಗಲೇ ಮಂಗಳೂರು ಮತ್ತು ಉಡುಪಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ಕಳುಹಿಸಲಾಗಿದೆ. ಅತಿವೃಷ್ಟಿಯ ಈ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರಕಾರ ಜನತೆಯೊಂದಿಗೆ ಇದೆ. ಸಾರ್ವಜನಿಕರೂ ಈ ನಿಟ್ಟಿನಲ್ಲಿ ಸರಕಾರದೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.