ಹಾನಗಲ್ ಉಪ ಚುನಾವಣೆ: ಕಾಂಗ್ರೆಸ್ಗೆ ಶಾಕ್ ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ!
ಬೆಂಗಳೂರು, ಜೂ. 15: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಬಿಸಿ ಬಿಸಿ ಚರ್ಚೆ ನಡೆದಿರುವಾಗಲೇ ಮತ್ತೊಂದು ಉಪ ಚುನಾವಣೆ ಎದುರಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ. ಎಂ. ಉದಾಸಿ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರಕ್ಕೆ ಶೀಘ್ರದಲ್ಲಿ ಉಪ ಚುನಾವಣೆ ನಡೆಯಲಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮಧ್ಯೆ ನೇರ ಹಣಾಹಣಿ ಇದ್ದರೂ ಈ ಬಾರಿ ಜೆಡಿಎಸ್ ಪಕ್ಷ ಕೂಡ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.
ಕಾಂಗ್ರೆಸ್ ಹಾಗೂ ಬಿಜೆಪಿಗಳಿಗಿಂತ ಮೊದಲು ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಎರಡೂ ರಾಷ್ಟ್ರೀಯ ಪಕ್ಷಗಳಿಗೆ ತೀವ್ರ ಪೈಪೋಟಿ ಕೊಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷದ ನಿಯಾಜ್ ಶೇಖ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಇಂದು (ಜೂ.15) ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆ ಬಳಿಕ, "ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಜ್ ಶೇಖ್ ಅವರು ಕಣಕ್ಕಿಳಿಯಲಿದ್ದಾರೆ" ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
Recommended Video
ನಿಯಾಜ್ ಶೇಖ್ ಅವರು ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ವಾರವಷ್ಟೇ ವಯೋಸಹಜ ಅನಾರೋಗ್ಯದಿಂದ ಹಾನಗಲ್ ವಿಧಾನಸಬಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ. ಉದಾಸಿ ಅವರು ನಿಧಾನರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಶ್ರೀನಿವಾಸ್ ಮಾನೆ ಅವರು ಕಣಕ್ಕಳಿಯುವ ಸಾಧ್ಯತೆಯಿದ್ದು, ಬಿಜೆಪಿ ಟಿಕೆಟ್ಗಾಗಿ ಪಕ್ಷದಲ್ಲಿ ಭಾರಿ ಪೈಪೋಟಿ ಶುರುವಾಗಿದೆ ಎಂಬ ಮಾಹಿತಿಯಿದೆ.