ಆರ್ಎಸ್ಎಸ್ ಬಗ್ಗೆ ಎಚ್ಡಿಕೆ ಇಂದು ಹೇಳಿದ್ದು, ಗೌಡ್ರು ಅಂದು ಹೇಳಿದ್ದು!
ಜೆಡಿಎಸ್ ಪಕ್ಷದ ಕಾರ್ಯಾಗಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್ ) ಬಗ್ಗೆ ಆಡಿರುವ ಮಾತು ಮತ್ತು ನೀಡಿರುವ ಸ್ಪಷ್ಟೀಕರಣ ವ್ಯಾಪಕ ಚರ್ಚೆಗೆ ಗುರಿಯಾಗಿದೆ.
ಕುಮಾರಸ್ವಾಮಿ ಹೇಳಿಕೆಗೆ ನಿರೀಕ್ಷೆಯಂತೆ ಬಿಜೆಪಿ ಮುಖಂಡರು ಮುಗಿ ಬೀಳುತ್ತಿದ್ದಾರೆ. ಈ ಹಿಂದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ್ರು, ಆರ್ಎಸ್ಎಸ್ ಬಗ್ಗೆ ಆಡಿದ್ದ ಮಾತುಗಳನ್ನು ಬಿಜೆಪಿ ಮುಖಂಡರು ಕುಮಾರಸ್ವಾಮಿಯವರಿಗೆ ನೆನಪಿಸುತ್ತಿದ್ದಾರೆ.
ಸಂಘದ ಶಾಖೆಗೆ ಬನ್ನಿ ಎಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, " RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ" ಎಂದು ತಿರುಗೇಟು ನೀಡಿದ್ದಾರೆ.
ಈ ವಿಚಾರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ್ರು, ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದನ್ನು ವಿಜಯೇಂದ್ರ ದಿನಪತ್ರಿಕೆಯೊಂದರ ಲೇಖನ ಸಮೇತ ಟ್ವೀಟ್ ಮಾಡಿದ್ದಾರೆ.

ಕೇಶವ ಕೃಪಾದ ಕೃಪಾಕಟಾಕ್ಷ ನಿರ್ದೇಶನದಲ್ಲಿ ಕೆಲಸ ಮಾಡುತ್ತಿದ್ದಾರೆ
"ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಆರ್ಎಸ್ಎಸ್ ಕೀಲುಗೊಂಬೆ ಆಗಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜಪೇಟೆಯ ಕೇಶವ ಕೃಪಾದ ಕೃಪಾಕಟಾಕ್ಷ ನಿರ್ದೇಶನದಲ್ಲಿ ಕೆಲಸ ಮಾಡುತ್ತಿದ್ದಾರೆ" ಎನ್ನುವ ವಿವಾದಕಾರಿ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದರು.
|
ಕುಮಾರಸ್ವಾಮಿಯವರ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ತಿರುಗೇಟು
ಕುಮಾರಸ್ವಾಮಿಯವರ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ತಿರುಗೇಟು ನೀಡಿದ್ದು ಹೀಗೆ, "ಮಾನ್ಯ @hd_kumaraswamy ಅವರು ಸನ್ಮಾನ್ಯ ಮಾಜಿ ಪ್ರಧಾನಿ ಶ್ರೀ @H_D_Devegowda ರವರಿಂದ ಮಾಹಿತಿ ಪಡೆದುಕೊಳ್ಳಬಹುದಿತ್ತು. RSS ಅನ್ನು ಹೊಗಳಿದ ಹಿರಿಯ ಗೌಡರ ನುಡಿಗಳು, ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರ ನಡೆ ಇತಿಹಾಸದಲ್ಲಿ ದಾಖಲಾಗಿದೆ. ಪೂರ್ವಾಗ್ರಹವಿಲ್ಲದೆ ವಾಸ್ತವ ಪರಿಶೀಲಿಸಿದರೆ ಸಂಘದ ಬಗ್ಗೆ ಅವರ ತಪ್ಪುಕಲ್ಪನೆ ದೂರವಾಗಬಹುದು" ಎಂದು ಟ್ವೀಟ್ ಮಾಡಿದ್ದಾರೆ.

ದೇವೇಗೌಡ್ರು ಇರುವ ಹಳೆಯ ಫೋಟೋವನ್ನು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ
"ಆರ್ಎಸ್ಎಸ್ ಉತ್ತಮ ಸಂಘಟನೆಯಾಗಿದೆ, ದೇಶದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎಲ್.ಕೆ.ಆಡ್ವಾಣಿ ಮತ್ತು ಸಂಘದ ಇತರ ಸದಸ್ಯರು ಬಂಧಿಯಾಗಿದ್ದರು. ಅವರು ಅಂತಹ ಸಂದರ್ಭದಲ್ಲಿ ನಡೆದುಕೊಂಡ ರೀತಿ ನನಹೆ ಮೆಚ್ಚುಗೆಯಾಗಿದೆ. ಆ ಸಂಘಟನೆಯನ್ನು ನಾನು ಹೊಗಳುತ್ತೇನೆ"ಎಂದು ದೇವೇಗೌಡ್ರು ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ. ಜೊತೆಗೆ 1977ರಲ್ಲಿ ಸಂಘದ ಸರಸಂಘಚಾಲಕ ಬಾಳಾಸಾಹೇಬ್ ದೇವರಸ್, ಕೆ.ಎಸ್.ಹೆಗ್ಡೆ ಅವರ ಜೊತೆಗೆ ದೇವೇಗೌಡ್ರು ಇರುವ ಹಳೆಯ ಫೋಟೋವನ್ನು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
Recommended Video

ನರೇಂದ್ರ ಮೋದಿ ಅವರು ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ
"ನರೇಂದ್ರ ಮೋದಿ ಅವರು ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎಲ್ಲವನ್ನೂ ಆರೆಸ್ಸೆಸ್ ನಿರ್ಧಾರ ಮಾಡುತ್ತದೆ. ಸೂಪರ್ ಹೈಕಮಾಂಡ್ ಆಗಿ ಆರೆಸ್ಸೆಸ್ ಕೆಲಸ ಮಾಡುತ್ತಿದೆ. ನಿಮ್ಮ ಕೂಗಳತೆಯಲ್ಲಿ ನಿಮ್ಮ ಪಕ್ಷದ ವರಿಷ್ಠ ನಾಯಕರು ಇದ್ದಾರೆ. ಕಾರ್ಯಕರ್ತರು ಹೈಕಮಾಂಡ್ ನೋಡಲು ವಿಮಾನ ಹತ್ತಿ ದೆಹಲಿಗೆ ಹೋಗಬೇಕಿಲ್ಲ. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.












Click it and Unblock the Notifications