ಆಶಾ ಕಾರ್ಯಕರ್ತೆಯರಿಗೆ ಆಘಾತ ನೀಡಿದ ಆರೋಗ್ಯ ಇಲಾಖೆ
ಬೆಂಗಳೂರು, ಜನವರಿ 6: ಪ್ರೋತ್ಸಾಹಧನ ಬಿಡುಗಡೆಗೆ ಆಗ್ರಹಿಸಿ ಕಳೆದ ಶುಕ್ರವಾರದಂದು ಬೆಂಗಳೂರಿನಲ್ಲಿ ಭಾರೀ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಇಲಾಖೆ ಶಾಕ್ ನೀಡಿದೆ.
ಪ್ರತಿಭಟನೆ ಕೈ ಬಿಟ್ಟು, ಸರ್ಕಾರ ಪ್ರೋತ್ಸಾಹ ಧನ ಬಿಡುಗಡೆ ಮಾಡುವವರೆಗೂ ಕೆಲಸಕ್ಕೆ ಹಾಜರಾಗದೇ, ಮನೆಯಲ್ಲೇ ಧರಣಿ ನಡೆಸಲು ಆಶಾ ಕಾರ್ಯಕರ್ತೆಯರು ತೀರ್ಮಾನಿಸಿದ್ದರು. ಇದರಿಂದ ಸಿಟ್ಟಾಗಿರುವ ಆರೋಗ್ಯ ಇಲಾಖೆ ಉನ್ನತಾಧಿಕಾರಿಗಳು, ಕೆಲಸಕ್ಕೆ ಹಾಜರಾಗದಿರುವವರ ಪ್ರೋತ್ಸಾಹಧನ ಬಿಡುಗಡೆ ಮಾಡುವುದಿಲ್ಲ ಎಂದು ಸೋಮವಾರ ಸುತ್ತೋಲೆ ಹೊರಡಿಸಿ, ನಾಳೆಯೇ ಕೆಲಸಕ್ಕೆ ಹಾಜರಾಗಬೇಕು ಎಂದು ಎಚ್ಚರಿಕೆ ನೀಡಿದೆ.
ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ಶ್ರೀರಾಮಲು ಅವರು, ಆಶಾ ಕಾರ್ಯಕರ್ತೆಯರ ಮನವಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕ್ರಮಕೈಗೊಳ್ಳಲು ಮುಂದಡಿ ಇಟ್ಟಿದೆ. ಆದರೆ, ಕೆಲಸಕ್ಕೆ ಹಾಜರಾಗದೇ ಮನೆಯಲ್ಲೇ ಕುಳಿತು ಧರಣಿ ನಡೆಸುವುದು ಸರಿಯಲ್ಲ. ಕೆಲಸಕ್ಕೆ ಹಾಜರಾಗದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

15 ತಿಂಗಳಿಂದ ಬಾಕಿ ಇರುವ ಪ್ರೋತ್ಸಾಹ ಧನವನ್ನು ನೀಡುವಂತೆ ಒತ್ತಾಯಿಸಿ ಶುಕ್ರವಾರ ಆಶಾ ಕಾರ್ಯಕರ್ತೆಯರು ಭಾರೀ ಸಂಖ್ಯೆಯಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ್ದರು. ಸುಮಾರು 10 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications